ಬಾಲಸೋರ್: ಒಡಿಶಾದ ಬಾಲಸೋರ್ನಲ್ಲಿ ಶುಕ್ರವಾರ ರಾತ್ರಿ 7 ಗಂಟೆಯ ವೇಳೆಗೆ ಹಳಿತಪ್ಪಿದ ರೈಲಿನ ಬೋಗಿಗಳಿಗೆ ಮತ್ತೊಂದು ಪ್ಯಾಸೆಂಜರ್ ರೈಲು ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದು, 350 ಕ್ಕೂ ಹೆಚ್ಚು ಮಂದಿ ಮಂದಿ ಗಾಯಗೊಂಡಿದ್ದಾರೆ. ಹಲವರು ಸಿಕ್ಕಿಬಿದ್ದಿರುವ ಶಂಕೆ ಇದ್ದು, ಸಾವು ನೋವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂರನೇ ಸರಕು ಸಾಗಣೆ ರೈಲು ಕೂಡ ಅಪಘಾತದಲ್ಲಿ ಸಿಲುಕಿದೆ ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ತಿಳಿಸಿದ್ದಾರೆ. ಹೌರಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್ಪ್ರೆಸ್ ಬೆಂಗಳೂರಿನಿಂದ ಕೋಲ್ಕತಾಗೆ ಹೋಗುತ್ತಿದ್ದ ಮತ್ತೊಂದು ರೈಲಿನ ಹಳಿತಪ್ಪಿದ ಬೋಗಿಗಳಿಗೆ ಢಿಕ್ಕಿ ಹೊಡೆದಿದೆ ಎಂದು ರೈಲ್ವೆ ಸಚಿವಾಲಯದ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.
ಎರಡು ರೈಲುಗಳ ವಿವರಗಳು 12841 ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು 12864 ಯಶವಂತಪುರ-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್.ಕೋರಮಂಡಲ್ ಎಕ್ಸ್ಪ್ರೆಸ್ನ ಹದಿನೈದು ಬೋಗಿಗಳು ಹಳಿಯಿಂದ ಹೊರಬಂದವು, ಇತರ ಎರಡು ರೈಲು ಹಳಿತಪ್ಪಿದೆ ಎಂಬ ವಿವರಗಳು ಲಭ್ಯವಾಗಿದೆ.
ಒಡಿಶಾ ಅಗ್ನಿಶಾಮಕ ಸೇವೆಗಳ ಮುಖ್ಯಸ್ಥ ಸುಧಾಂಶು ಸಾರಂಗಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಬಾಲಸೋರ್ ಮತ್ತು ಸುತ್ತಮುತ್ತಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಲಾಗಿದೆ ಮತ್ತು 60 ಆಂಬ್ಯುಲೆನ್ಸ್ಗಳನ್ನು ಸಜ್ಜುಗೊಳಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಬಳಸಿಕೊಳ್ಳಲಾಗಿದೆ.
Related Articles
ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (NDRF) ನ ನೂರಕ್ಕೂ ಹೆಚ್ಚು ಸಿಬಂದಿ ಸಿಕ್ಕಿಬಿದ್ದ ಪ್ರಯಾಣಿಕರನ್ನು ಹುಡುಕುತ್ತಿದ್ದಾರೆ.
ಪ್ರಧಾನಿ ತೀವ್ರ ಸಂತಾಪ
ದುರಂತದ ಕುರಿತು ಪ್ರಧಾನಿ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ಕಂಗಾಲಾಗಿದ್ದೇನೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜತೆ ಮಾತನಾಡಿದ್ದೇನೆ. ಪರಿಸ್ಥಿತಿಯ ಕುರಿತು ವಿವರ ತೆಗೆದುಕೊಂಡಿದ್ದೇನೆ. ದುರಂತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತ ಸ್ಥಳಕ್ಕೆ ತೆರಳುತ್ತಿದ್ದಾರೆ. ಸಂತ್ರಸ್ತರಿಗೆ ಪರಿಹಾರವನ್ನೂ ಘೋಷಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗಳಾದವರಿಗೆ 50,000 ರೂ.ಪರಿಹಾರ ಘೋಷಿಸಿದ್ದಾರೆ.
ರಾಷ್ಟ್ರಪತಿ ಸಂತಾಪ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ”ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ದುರದೃಷ್ಟಕರ ರೈಲು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ನನ್ನ ಹೃದಯವು ದುಃಖಿತ ಕುಟುಂಬಗಳಿಗೆ ಮಿಡಿಯುತ್ತದೆ. ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.”ಎಂದು ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಸಂತಾಪ
ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ರೈಲ್ವೆ ಇಲಾಖೆ ಹೆಲ್ಪ್ ಲೈನ್ ನಂಬರ್ ಬಿಡುಗಡೆ ಮಾಡಿದೆ
Howrah Helpline Number: 033-26382217
Kharagpur Helpline Number: 8972073925 & 9332392339
Balasore Helpline Number: 8249591559 & 7978418322
Shalimar Helpline Number: 9903370746