Advertisement

2024 ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ವಿಜಯೋತ್ಸವದ 200ನೇ ಅದ್ಧೂರಿ ವರ್ಷಾಚರಣೆ

10:15 PM Oct 23, 2023 | Team Udayavani |

ಬೆಳಗಾವಿ:  ರಾಜ್ಯ ಸರ್ಕಾರವು ಮುಂದಿನ ವರ್ಷ ಚೆನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆಯನ್ನು ಅತ್ಯಂತ ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭರವಸೆ ನೀಡಿದರು.

Advertisement

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ಮಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ರಾಜ್ಯಮಟ್ಟದ ಕಿತ್ತೂರು ಉತ್ಸವವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು 1824 ಅಕ್ಟೋಬರ್ 23 ರಂದು ಬ್ರಿಟೀಷರ ವಿರುದ್ಧ ನಡೆದ ಹೋರಾಟದಲ್ಲಿ ಚನ್ನಮ್ಮ ಜಯಗಳಿಸಿರುವುದರ ಸವಿನೆನಪಿಗಾಗಿ ಪ್ರತಿವರ್ಷ ಅಕ್ಟೋಬರ್ 23 ರಂದು ವಿಜಯೋತ್ಸವ ಆಚರಿಸಲಾಗುತ್ತಿದೆ. ಮುಂದಿನ ವರ್ಷ 200 ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.

ನಮ್ಮ ನೆಲದ ರಕ್ಷಣೆಗಾಗಿ ಹೋರಾಟ ನಡೆಸಿದ ಚನ್ನಮ್ಮ ಸ್ವಾಭಿಮಾನದ ಸಂಕೇತವಾಗಿದ್ದಾರೆ.ಉತ್ಸವವನ್ನು ರಾಜ್ಯವ್ಯಾಪಿ ಉತ್ಸವವಾಗಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಿದ್ದಾರೆ. ಶಾಸಕರ ಪ್ರಯತ್ನದ ಫಲವಾಗಿ ಈ ವರ್ಷ ಬರಗಾಲದ ನಡುವೆಯೂ ಮೂರು ದಿನಗಳ ಕಾಲ ಅದ್ಧೂರಿ ಉತ್ಸವ ನಡೆಸಲು ಸಾಧ್ಯವಾಗಿದೆ ಎಂದರು.

ಕಿತ್ತೂರಿಗೆ ಮೂಲಸೌಕರ್ಯ
ಉತ್ಸವದ ಜತೆಗೆ ಕಿತ್ತೂರಿನ ಸಮಗ್ರ ಅಭಿವೃದ್ಧಿಗಾಗಿ ಆದ್ಯತೆ ನೀಡುತ್ತ ಬರಲಾಗಿದೆ. ಐತಿಹಾಸಿಕ ಕಿತ್ತೂರು ಕೋಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದ್ದು ಕೋಟೆಯ ಆವರಣದ ಸೌಂದರ್ಯೀಕರಣ ಮಾಡುವುದಲ್ಲದೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಸಚಿವರು ಹೇಳಿದರು.

ಲೊಕೋಪಯೋಗಿ ಇಲಾಖೆಯ ವತಿಯಿಂದ ಪ್ರತಿವರ್ಷ ಐದು ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದ ಸಚಿವರು ಸ್ಥಳೀಯ ಶಾಸಕರ ಮಾರ್ಗದರ್ಶನದಲ್ಲಿ ಕಿತ್ತೂರು ಪಟ್ಟಣದಲ್ಲಿ ಮೂಲಸೌಕರ್ಯ ಒದಗಿಸಲು ಈ ಅನುದಾನ ಬಳಕೆ ಮಾಡಲಾಗುವುದು ಎಂದರು.

Advertisement

ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಮಾತನಾಡಿ ಮೂರು ದಿನಗಳ ಉತ್ಸವ ಕೇವಲ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೀಮಿತವಾಗಬಾರದು. ಈ ಸಂದರ್ಭದಲ್ಲಿ ಐತಿಹಾಸಿಕ ಹೋರಾಟ ಹಾಗೂ ಚರಿತ್ರೆಯ ಮಹತ್ವದ ಬಗ್ಗೆ ನಡೆಯುವ ಚಿಂತನ-ಮಂಥನವನ್ನು ಜನರಿಗೆ ತಲುಪಿಸಬೇಕಿದೆ ಎಂದರು.

ಆಯಾ ಕಾಲದ ಸರಕಾರಗಳ ಪ್ರೋತ್ಸಾಹ ಹಾಗೂ ಜನಪ್ರತಿನಿಧಿಗಳ ಪ್ರಯತ್ನದ ಫಲವಾಗಿ ಉತ್ಸವ ರಾಜ್ಯಮಟ್ಟದ ಉತ್ಸವವಾಗಿದೆ. ಮುಂದಿನ ವರ್ಷ ವಿಜಯೋತ್ಸವಕ್ಕೆ 200 ವರ್ಷಗಳಾಗುವುದರಿಂದ ಕಿತ್ತೂರು ಉತ್ಸವವು ರಾಷ್ಟ್ರಮಟ್ಟದ ಉತ್ಸವವನ್ನಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಬೇಕು ಎಂದು ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.

ಕಿತ್ತೂರಿನ ಹೆದ್ದಾರಿಯನ್ನು ಕೈಗಾರಿಕೆಗಳ ಕಾರಿಡಾರ್ ಮಾಡುವ ಮೂಲಕ ಈ ಭಾಗದ ಸರ್ವತೋಮುಖ ಪ್ರಗತಿ ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸೋಣ ಎಂದು ಈರಣ್ಣ ಕಡಾಡಿ ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಚನ್ನಮ್ಮನ ಕಿತ್ತೂರಿನ ಶಾಸಕ ಬಾಬಾಸಾಹೇಬ್ ಪಾಟೀಲ, ಕಿತ್ತೂರು ಉತ್ಸವವನ್ನು ಮುಂದಿನ ವರ್ಷ ರಾಷ್ಟ್ತಮಟ್ಟದ ಉತ್ಸವವನ್ನಾಗಿ ಮಾಡಲು ಎಲ್ಲ ರೀತೀಯ ಪ್ರಯತ್ನ ಮಾಡಲಾಗುವದು ಎಂದು ಹೇಳಿದರು.

ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಚನ್ನಮ್ಮನ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಅವರು, ಕಿತ್ತೂರು ಉತ್ಸವ ತ್ಯಾಗ-ಬಲಿದಾನ, ಕೆಚ್ಚೆದೆಯ ಹೋರಾಟ ಮತ್ತು ಸ್ವಾಭಿಮಾನದ ಉತ್ಸವವಾಗಿದೆ. ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಮತ್ತಿತರರ ಹೋರಾಟದ ಫಲವಾಗಿ ನಾವು ಇಂದು ಉತ್ಸವ ಆಚರಿಸುತ್ತಿದ್ದೇವೆ. 200 ನೇ ವರ್ಷಾಚರಣೆಯು ರಾಷ್ಟ್ರಮಟ್ಟದ ಉತ್ಸವವಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು. 2024 ರ ವೇಳೆಗೆ ಕೋಟೆಯನ್ನು ಅಭಿವೃದ್ಧಿಪಡಿಸುವ ಮೂಲಕ ಕಿತ್ತೂರು ಕೂಡ ರಾಷ್ಟ್ರಮಟ್ಟದ ಪ್ರವಾಸಿತಾಣವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.

ಆಶೀರ್ಚನ ನೀಡಿದ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಕೇಂದ್ರ ಸರಕಾರವು ಮೊದಲ ಸ್ವಾತಂತ್ರ್ಯ ಹೋರಾಟ ‘ಸಿಪಾಯಿ ದಂಗೆ’ ಎಂಬ ಠರಾವು ಬದಲಾಯಿಸಿ ಮೊದಲ ಸ್ವಾತಂತ್ರ್ಯ ಹೋರಾಟ ಕಿತ್ತೂರು ರಾಣಿ ಚೆನ್ನಮ್ಮಳ ಹೋರಾಟ ಎಂದು ತಿದ್ದುಪಡಿ ಮಾಡಿ ಠರಾವು ತೆಗೆದುಕೊಳ್ಳಬೇಕು ಎಂದರು.

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಚನ್ನಮ್ಮಳ ಹೆಸರಿಡಬೇಕು. 200 ವರ್ಷಾಚರಣೆ ಸಂದರ್ಭದಲ್ಲಿ ಈ ಬೇಡಿಕೆಗಳ ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಆರಂಭಿಸಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ.ಕೆ.ಧರಣಿದೇವಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಚನ್ನಮ್ಮನ ವಂಶಸ್ಥರಿಗೆ ಸನ್ಮಾನ

ಕಿತ್ತೂರು ಚನ್ನಮ್ಮಳ ವಂಶಸ್ಥರಾದ ತೊಲಗಿಯ ಮಲ್ಲಸರ್ಜ ಚಂದ್ರಶೇಖರ್ ದೇಸಾಯಿ ಅವರನ್ನು ಸನ್ಮಾನಿಸಲಾಯಿತು. ಎಪಿಜೆ ಅಬ್ದುಲ್ ಕಲಾಂ ಅಂತಾರಾಷ್ಟ್ರೀಯ ಸೇವಾ ಪ್ರಶಸ್ತಿ ಪುರಸ್ಕೃತರಾದ ನ್ಯಾಯವಾದಿ ಸರಸ್ವತಿ ಪೂಜಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ವಾಗತಿಸಿದರು. ಬಸವರಾಜ ಕುಪ್ಪಸಗೌಡರ ಹಾಗೂ ಶೃತಿ ಜಾಧವ ನಿರೂಪಿಸಿದರು. ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ವಂದಿಸಿದರು.ಸಾವಿರಾರು ಜನರು ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ವೈಭವದ ರಸದೌತಣ ಸವಿದರು.

Advertisement

Udayavani is now on Telegram. Click here to join our channel and stay updated with the latest news.

Next