ರಾಯಚೂರು/ಬೆಂಗಳೂರು:ರಾಯಚೂರಿನ ಗಾಂಧಿ ಮೆಮೋರಿಯಲ್ ಕಾಲೇಜಿನಲ್ಲಿ ಪಿಯುಸಿ ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಸುಳ್ಳು ವದಂತಿ ಹರಡಿದ್ದು, ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ, ವಿದ್ಯಾರ್ಥಿಗಳು ಯಾವುದೇ ವದಂತಿ, ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ರಾಯಚೂರು ಜಿಲ್ಲಾಧಿಕಾರಿ ಗೌತಮ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆಯೇ ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ವಾಟ್ಸಪ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಆದರೆ ಮಧ್ಯಾಹ್ನ 12.45ರ ವೇಳೆಗೆ ವಾಟ್ಸಪ್ ನಲ್ಲಿ ಪ್ರಶ್ನೆ ಪತ್ರಿಕೆಯ ಒಂದು ಪುಟವನ್ನು ಹರಿಯಬಿಡಲಾಗಿತ್ತು.
ಯಾರೋ ಉದ್ದೇಶಪೂರ್ವಕವಾಗಿಯೇ ಸುಳ್ಳು ವದಂತಿ ಹರಡಿಸುವ ನಿಟ್ಟಿನಲ್ಲಿ ಪರೀಕ್ಷೆ ಮುಗಿಯುತ್ತಿದ್ದಂತೆಯೇ ಪ್ರಶ್ನೆ ಪತ್ರಿಕೆಯ ಒಂದು ಪುಟವನ್ನು ವಾಟ್ಪಪ್ ನಲ್ಲಿ ಹರಿಯಬಿಟ್ಟು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಶಿಖಾ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಗೊಂದಲಕ್ಕೆ ಒಳಗಾಗೋದು ಬೇಡ, ಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ ಎಂದು ಶಿಖಾ ಹೇಳಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ; ಶಿಕ್ಷಣ ಸಚಿವ ತನ್ವೀರ್ ಸೇಠ್
ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ, ಆದರೆ ಅಕ್ರಮ ನಡೆದಿದೆ. ಪರೀಕ್ಷೆ ಆರಂಭವಾದ ಬಳಿಕ ಫೋಟೋ ಕಾಫಿ ತೆಗೆದು ಕಳುಹಿಸಿದ್ದರು. ತಕ್ಷಣವೇ ಸೈಬರ್ ಕ್ರೈಂಗೆ ದೂರು ನೀಡಲಾಗಿತ್ತು. ಪರೀಕ್ಷಾ ಅಕ್ರಮದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಕ್ರಮದಲ್ಲಿ ತೊಡಗಿದ್ದವನ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.