Advertisement

ಗಣಿ ಬಾಧಿತ ಪ್ರದೇಶ ಅಭಿವೃದ್ಧಿಗೆ 91 ಕೋಟಿ

11:09 AM Jan 03, 2018 | Team Udayavani |

ಬಳ್ಳಾರಿ: ಗಣಿಬಾಧಿತ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಜಿಲ್ಲಾ ಖನಿಜ ನಿಧಿ ರೂಪದಲ್ಲಿ ಸಂಗ್ರಹವಾಗಿದ್ದ ನೂರಾರು ಕೋಟಿ ರೂ.ಗಳನ್ನು ಕೊನೆಗೂ ರಾಜ್ಯ ಸರ್ಕಾರ ವೆಚ್ಚ ಮಾಡಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲೆಯ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಸಲ್ಲಿಕೆಯಾಗಿದ್ದ 91.54 ಕೋಟಿ ರೂ.ಗಳ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರ ಈ ಕುರಿತು 2017ರ ಡಿ.16ರಂದು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದು ಆದೇಶದ ಪ್ರತಿ ಉದಯವಾಣಿಗೆ
ಲಭ್ಯವಾಗಿದೆ. ಬಳ್ಳಾರಿ ಜಿಲ್ಲೆಯ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಬಳಸಲು ರಾಜ್ಯ ಸರ್ಕಾರ 100 ಕೋಟಿ ರೂ.
ನಿಗದಿಪಡಿಸಿತ್ತು. ಈ ಮಿತಿಯೊಳಗೆ 2017ರ ಆ.17ರಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅಧ್ಯಕ್ಷತೆಯಲ್ಲಿ ಜರುಗಿದ್ದ ಜಿಲ್ಲಾ ಖನಿಜ ಪ್ರತಿಷ್ಠಾನ ಸಭೆಯಲ್ಲಿ ಕ್ರಿಯಾ ಯೋಜನೆ ರೂಪಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು. ಇದರಿಂದ ಗಣಿ ಬಾಧಿ ತ ಪ್ರದೇಶಗಳನ್ನು ಅಭಿವೃದ್ಧಿಗೊಳಿಸಲು ಖನಿಜ ನಿಧಿಯ ಬಳಕೆಯಲ್ಲಿ ರಾಜ್ಯ ಸರ್ಕಾರ ದೇಶದ ಇತರೆ ಗಣಿಗಾರಿಕೆ ಆಧಾರಿತ 
ರಾಜ್ಯಗಳಾದ ಜಾರ್ಖಂಡ್‌, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮುಂತಾದ ರಾಜ್ಯಗಳಿಗಿಂತ ಹಿಂದೆ ಬಿದ್ದಿತ್ತು.

Advertisement

ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರ್ಲಕ್ಷ ವಹಿಸುತ್ತಿದೆ ಎನ್ನುವ ಆಪಾದನೆಗೆ ಗುರಿಯಾಗಿತ್ತು. ಈ ಮಹತ್ವದ ಆದೇಶದಿಂದ ರಾಜ್ಯ ಸರ್ಕಾರ ಎಲ್ಲ ಆಪಾದನೆಗಳಿಂದ ಮುಕ್ತಿ ಪಡೆದಂತಾಗಿದೆ. ಇದರಿಂದ ಬಳ್ಳಾರಿ ಜಿಲ್ಲೆಯ ಏಳು ತಾಲೂಕುಗಳ ಪೈಕಿ ಗಣಿಬಾಧಿತ ತಾಲೂಕುಗಳಾದ ಬಳ್ಳಾರಿ, ಸಂಡೂರು ಹಾಗೂ ಹೊಸಪೇಟೆ ತಾಲೂಕುಗಳ ಅಭಿವೃದ್ಧಿಗೆ ಶೇ.60ರಷ್ಟು ಉಳಿದ ಮೊತ್ತ ಜಿಲ್ಲೆಯ ಉಳಿದ ಶೇ.40ರಷ್ಟು ನಿಧಿಯನ್ನು ಉಳಿದ ತಾಲೂಕುಗಳ ಅಭಿವೃದ್ಧಿಗೆ ದೊರೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next