ಬೆಂಗಳೂರು : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ಯೋಜನೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದೇ ಇರುವವರು ವಿದ್ಯಾರ್ಥಿ ವೇತನ ಪಡೆಯಲು ಸಾಧ್ಯವಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ ಪ್ರಕಟಣೆ ತಿಳಿಸಿದೆ.
ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ 55.34 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿಯಾದ ಅರ್ಜಿಗಳ ಪರಿಶೀಲನೆ ಹಾಗೂ ಮಂಜೂರಾತಿ ಪ್ರಕ್ರಿಯೆ ಆರಂಭವಾಗಿದೆ.
ವಿದ್ಯಾರ್ಥಿ ವೇತನದ ಹಣ ಆಧಾರ್ ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸುವ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದೆ.
ಹೀಗಾಗಿ ಬ್ಯಾಂಕ್ ಖಾತೆ ಹೊಂದಿರದ ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗುವುದಿಲ್ಲ.
ಬ್ಯಾಂಕ್ ಖಾತೆಗೆ ಆಧಾರ್ಲಿಂಕ್ ಮಾಡದ ವಿದ್ಯಾರ್ಥಿಗಳಿಗೆ ಇಲಾಖೆಯಿಂದಲೇ ಸಂದೇಶ ರವಾನೆ ಮಾಡಲಾಗುತ್ತಿದೆ. ಹಾಗೆಯೇ ವಿದ್ಯಾರ್ಥಿಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ(ಎಸ್ಎಟಿಎಸ್)ನಲ್ಲಿ ಆಧಾರ್ ಲಿಂಕ್ ಮಾಡದ ಹಾಗೂ ಬ್ಯಾಂಕ್ ಖಾತೆ ಹೊಂದಿರದ ವಿದ್ಯಾರ್ಥಿಗಳ ವಿವರ ಪ್ರಕಟಿಸಲಾಗಿದೆ. ಸಂಬಂಧಪಟ್ಟ ಶಾಲೆಯ ಶಿಕ್ಷಕರು ಆಯಾ ಶಾಲಾ ವಿದ್ಯಾರ್ಥಿಗಳ ಮಾಹಿತಿ ಪಡೆದು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವಂತೆ ಇಲಾಖೆ ಸೂಚಿಸಿದೆ.
ಶಾಲಾ ಶಿಕ್ಷಕರು ಈ ಬಗ್ಗೆ ವೈಯಕ್ತಿಕ ಗಮನ ಹರಿಸಿ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆ ಮಾಡಿಸಬೇಕು ಮತ್ತು ಅದಕ್ಕೆ ಆಧಾರ್ ಲಿಂಕ್ ಆಗಿದೆಯೇ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಂಡು ಎಸ್ಎಟಿಎಸ್ನಲ್ಲಿ ಅಪ್ಡೇಟ್ ಮಾಡಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಒಂದು ವಾರದೊಳಗೆ ಈ ಕುರಿತು ವರದಿ ಸಲ್ಲಿಸಬೇಕು ಎಂದು ಇಲಾಖೆ ನಿರ್ದೇಶಿಸಿದೆ.