Advertisement

ಇತಿಹಾಸ ಸಾರುವ ಮಿರ್ಜಾನ್ ಕೋಟೆ

10:57 AM Jun 07, 2021 | Team Udayavani |

ಪ್ರವಾಸಿಗರ ಪಾಲಿನ ಸ್ವರ್ಗದಂತಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಸಾರುವ ಹಲವಾರು ತಾಣಗಳಿವೆ. ಅವುಗಳಲ್ಲಿ ಕುಮಟಾ ಸಮೀಪ ಇರುವ ಸುಂದರವಾದ ಮಿರ್ಜಾನ್ ಕೋಟೆ ಪ್ರಮುಖವಾದದ್ದು.

Advertisement

2016 ರಲ್ಲಿ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದಾಗ ಮಿರ್ಜಾನ್ ಕೋಟೆ ಸೌಂದರ್ಯ ಕಣ್ತುಂಬಿಕೊಳ್ಳುವ ಸೌಭಾಗ್ಯ ನಮಗೆ ದೊರೆಯಿತು. ನಿಜಕ್ಕೂ ಅದೊಂದು ಅದ್ಬುತ ಕೋಟೆ.

ಕರ್ನಾಟಕ ರಾಜ್ಯ ಒಂದು ಸಾಂಸ್ಕೃತಿಕ ತವರು. ಇದು ಭಾರತದ ಇತಿಹಾಸದಲ್ಲಿ ತನ್ನದೇ ಆದ ಕೊಡುಗೆಯನ್ನು ದೇಶಕ್ಕೆ ನೀಡಿದ ಹಿರಿಮೆ ಈ ರಾಜ್ಯಕ್ಕಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಕನ್ನಡ ನಾಡಿನ ಚರಿತ್ರೆಯನ್ನು ನೀವು ಕೇಳಿರುತ್ತಿರಿ. ಇತಿಹಾಸದ ಪುಟವನ್ನು ನಾವು ತಿರುವಿದಾಗ ಅನೇಕ ರಾಜರು ಸಾಮಂತರು ಕರ್ನಾಟಕವನ್ನು ಆಳಿರುವುದನ್ನು ನೀವು ಓದಿರುತ್ತಿರಿ.

ಅವರ ಆಳ್ವಿಕೆಯ ಕಾಲದಲ್ಲಿ ರಾಜ್ಯ ಹಾಗಿತ್ತು ಹೀಗಿತ್ತು ಎನ್ನೋ ವಿಷಯಗಳು ನಮ್ಮ ಕಿವಿಯಲ್ಲಿ ಸದ್ದು ಮಾಡುತ್ತಲೇ ಇರುತ್ತವೆ. ಇದನ್ನು ನೋಡಲು ನಮಗೆ ಸಾಧ್ಯವಿಲ್ಲವಲ್ಲ ಎಂಬ ಕೊರಗು ನಮ್ಮಲ್ಲೂ ಆಗಾಗ ಮೂಡುವುದು ಸಹಜ. ಅಲ್ಲದೇ ಅವರ ರಾಜ್ಯ, ಕೋಟೆ ಹೇಗಿರಬಹುದು ಎಂಬ ಕೂತುಹಲಕ್ಕೆ ಕೋಟೆ ಕೊತ್ತಲುಗಳು, ಹಳೆಯ ಶಾಸನಗಳು, ನಾಣ್ಯಗಳು ಗ್ರಂಥಗಳು ಹೀಗೆ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದೆ ಸಿಗುತ್ತವೆ.

Advertisement

ಅಂತಹವುಗಳಲ್ಲಿ ಮಿರ್ಜಾನ್ ಕೋಟೆಯು ಒಂದು.

ಮಿರ್ಜಾನ್ ಕೋಟೆಯು ಉತ್ತರಕನ್ನಡದ (ಕಾರವಾರ) ಕುಮಟಾ ತಾಲೂಕಿನ ಮಿರ್ಜಾನ್ ಗ್ರಾಮದಲ್ಲಿದೆ. ಗೋಕರ್ಣದಿಂದ ಸುಮಾರು 23 ಕಿಮಿ ದೂರದಲ್ಲಿರುವ ಮಿರ್ಜಾನ್ ಕೋಟೆ, ಕುಮಟಾ ಪಟ್ಟಣದಿಂದ 10.5 ಕಿಮಿ ದೂರದಲ್ಲಿದೆ. ನಾವು ಕಾಣಬಹುದಾದ ಉತ್ತಮ ಸ್ಥಿತಿಯಲ್ಲಿರುವ ಕೋಟೆಗಳಲ್ಲಿ ಇದು ಕೂಡಾ ಒಂದಾಗಿದೆ. ಇದು ಅಘನಾಶಿನಿ ನದಿಯ ತಟದಲ್ಲಿದ್ದು ಅದರಾಚೆಗೆ ಅರಬ್ಬೀ ಸಮುದ್ರವನ್ನು ಹೊಂದಿದೆ.

ಸುಮಾರು 11.5 ಎಕರೆಗಳಷ್ಟು ವಿಸ್ತಾರವಾದ ಪ್ರದೇಶದಲ್ಲಿ ಈ ಕೋಟೆಯಿದ್ದು ನೋಡಲು ತುಂಬಾ ಆಕರ್ಷಕವಾಗಿದೆ. ಈ ಕೋಟೆಯು ಕರಾವಳಿ ಪ್ರದೇಶದಲ್ಲಿ ಕಂಡುಬರುವ ಜಂಬಿಟ್ಟಿಗೆ ಕಲ್ಲಿನಿಂದ (ಲ್ಯಾಟರೈಟ್) ನಿರ್ಮಾಣವಾಗಿದ್ದು ಇಂದಿಗೂ ಅದರ ಗೋಡೆಗಳು ಗಟ್ಟಿಯಾಗಿವೆ. ಇದರಲ್ಲಿ ಒಂದು ಮುಖ್ಯ ದ್ವಾರಗಳಿದ್ದು ಮೂರು ಉಪ ದ್ವಾರಗಳು ಕಂಡುಬರುತ್ತವೆ. ಕೋಟೆಯ ಸುತ್ತ ತಗ್ಗು ಪ್ರದೇಶವಿದ್ದು ಹಲವಾರು ಗುಪ್ತದ್ವಾರಗಳನ್ನು ಹೊಂದಿದೆ. ಅದಲ್ಲದೇ ಇಲ್ಲಿ ಹಲವಾರು ಕಂದಕಗಳು, ದರ್ಬಾರ ಹಾಲ್, ರಾಣಿಯ ಸಿಂಹಾಸನ, ಪಾಕಶಾಲೆ, ಮಾರುಕಟ್ಟೆ ದೇವಸ್ಥಾನ, ಮಸಿದಿಯಂತಹ ಅವಶೇಷಗಳು ಮತ್ತು ಈ ಕೋಟೆಯಲ್ಲಿ 9 ಭಾವಿಗಳನ್ನು ನಾವು ಕಾಣಬಹುದಾಗಿದೆ. ಅದಲ್ಲದೇ ಕೋಟೆಯ ಧ್ವಜ ಸ್ತಂಭ, ಕಾವಲು ಗೋಪುರ ಅಲ್ಲಿಂದ ಕಾಣುವ ಅಘನಾಶಿನಿ ನದಿ ನೋಡುಗರನ್ನು ಆಕರ್ಷಿಸುವುದಂತು ಸುಳ್ಳಲ್ಲ.

ಮೆಟ್ಟಿಲುಗಳ ನಿರ್ಮಾಣವು ಆಕರ್ಷಕವಾಗಿದ್ದು ಪ್ರತಿಯೊಂದು ದ್ವಾರವು ಹಾಗೂ ಕೋಟೆಯ ಕಲ್ಲುಗಳು ಜನರನ್ನು ಆಕರ್ಷಿಸುತ್ತದೆ. ಅಲ್ಲದೇ ಕೋಟೆಯ ನಿರ್ಮಾಣವು ಅಚ್ಚುಕಟ್ಟಾಗಿದ್ದು ಪ್ರತಿಯೊಂದು ಸೌಕರ್ಯವನ್ನು ಈ ಕೋಟೆ ಹೊಂದಿರುವುದಕ್ಕೆ ಸಾಕ್ಷಿ ಲಭಿಸುತ್ತದೆ.

ಕರ್ನಾಟಕದ ಇತಿಹಾಸದಲ್ಲಿ ಕಾಳುಮೆಣಸಿನ ರಾಣಿ ಎಂದೇ ಪ್ರಖ್ಯಾತಿಗೊಂಡಿದ್ದ ಸಾಳುವ ವಂಶದ ಗೇರುಸೊಪ್ಪೆಯ ರಾಣಿ ಚೆನ್ನಭೈರಾದೇವಿ ಈ ಕೋಟೆಯನ್ನು 16 ನೇ ಶತಮಾನದಲ್ಲಿ ನಿರ್ಮಿಸಿದ್ದಾಳೆ ಎಂದು ಇತಿಹಾಸದ ಪುಟಗಳಲ್ಲಿ ಉಲ್ಲೇಖಿಸಲಾಗಿದೆ. ಈ ಕೋಟೆಯನ್ನು ಕಟ್ಟಿರುವವರ ಕುರಿತು ಹಲವಾರು ಭಿನ್ನಾಭಿಪ್ರಾಯಗಳಿದ್ದು, ಇಬ್ನಬಟೂಟ ಎಂಬ ನವಾಯತ ರಾಜ 1200 ರಲ್ಲಿ ಕಟ್ಟಿರುವುದಾಗಿ ಹೇಳುತ್ತಾರೆ. ಮತ್ತೊಂದು ವಾದದ ಪ್ರಕಾರ ಈ ಕೋಟೆಯನ್ನು ಬಿಜಾಪುರದ ಸುಲ್ತಾನ ಶರೀಫ್ ಉಲ್ ಮುಲ್ಕ್ ಇದನ್ನು 1608-1640 ರ ಕಾಲದಲ್ಲಿ ಕುಮಟಾ ಪಟ್ಟಣ ರಕ್ಷಣೆ ದೃಷ್ಟಿಯಿಂದ ಕಟ್ಟಿದನೆಂದು ಹೇಳುತ್ತಾರೆ. ಹೆಚ್ಚಿನವರ ಪ್ರಕಾರ ಇದು ಗೇರುಸೊಪ್ಪೆಯ ರಾಣಿ ಕಟ್ಟಿರುವುದು ಎಂಬ ಮಾತು ಸ್ಥಳೀಯವಲಯದಲ್ಲಿದೆ. ರಾಣಿ ಚೆನ್ನಭೈರಾದೇವಿಯು ವಿಜಯನಗರ ಅರಸರ ಸಾಮಂತ ರಾಣಿಯಾಗಿದ್ದು ಸುಮಾರು 54 ವರ್ಷಗಳ ಕಾಲ ಈ ಪ್ರಾಂತ್ಯವನು ರಾಜ್ಯಭಾರ ಮಾಡಿರುವುದು ವಿಶೇಷವಾಗಿದೆ.

ಈ ರಾಣಿಯ ಆಳ್ವಿಕೆಯ ಅವಧಿಯಲ್ಲಿ ವ್ಯಾಪಾರ ವಹಿವಾಟು ಜೋರಾಗಿಯೇ ಇತ್ತು. ಈ ಪ್ರದೇಶವು ಅಕ್ಕಿ ಮತ್ತು ಕಾಳುಮೆಣಸಿನ ವ್ಯಾಪಾರದ ಪ್ರಮುಖ ಕೇಂದ್ರವಾಗಿತ್ತು.

ಉತ್ತರ ಕನ್ನಡ ಜಿಲ್ಲೆ ಪ್ರವಾಸಿಗರ ತವರೂರು. ಇಲ್ಲಿಯ ಗೋಕರ್ಣ, ಮುರುಡೇಶ್ವರ, ಇಡಗುಂಜಿ ಗಣೇಶನ ಸನ್ನಿಧಿಗೆ ಬರುವ ಪ್ರವಾಸಿಗರಿಗೆ ಮಿರ್ಜಾನ್ ಕೋಟೆ ಕೂಡ ಒಂದು ಸುಂದರ ತಾಣ.

Advertisement

Udayavani is now on Telegram. Click here to join our channel and stay updated with the latest news.

Next