Advertisement

ಸ್ಮಾರ್ಟ್ ಸಿಟಿ ಕಾಮಗಾರಿ ಚುರುಕುಗೊಳಿಸಿ

12:38 PM Oct 12, 2019 | Team Udayavani |

ಬೆಳಗಾವಿ: ನಗರದಲ್ಲಿರುವ ದಂಡುಮಂಡಳಿಗೆ ಸೇರಿದ ಪ್ರದೇಶಗಳಲ್ಲಿ ಸ್ಮಾರ್ಟ್‌ಸಿಟಿ, ಮಹಾನಗರ ಪಾಲಿಕೆ ಅಥವಾ ಸಾರಿಗೆ ಸಂಸ್ಥೆಯ ಯಾವುದೇ ಕಾಮಗಾರಿ ಆರಂಭಿಸಲು ಅಥವಾ ಜಾಗ ಸ್ವಾಧೀನಕ್ಕೆ 2016ರ ಸುತ್ತೋಲೆಯ ಪ್ರಕಾರ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿ ಸೂಕ್ತ ಅನುಮತಿ ಪಡೆದುಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಮಾರ್ಟ್‌ಸಿಟಿ ಹಾಗೂ ನಗರೋತ್ಥಾನ ಯೋಜನೆಗಳ ತುರ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಂಬಂಧಪಟ್ಟ ಇಲಾಖೆಗಳ ಜಂಟಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸ್ಮಾರ್ಟ್‌ಸಿಟಿ ಯೋಜನೆಯ ಯಾವುದೇ ಕಾಮಗಾರಿಗಳು ಬಾಕಿ ಉಳಿಯದಂತೆ ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಮುಂಬರುವ ದಿನಗಳಲ್ಲಿ ದಂಡುಮಂಡಳಿಯ ವ್ಯಾಪ್ತಿಯ ಜಾಗದಲ್ಲಿ ಸ್ಮಾರ್ಟಸಿಟಿ ಯೋಜನೆಯಡಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಾದರೆ ಅದಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವ ಸಲ್ಲಿಸಿ ಅಗತ್ಯ ಅನುಮತಿ ಪಡೆದುಕೊಳ್ಳಬೇಕು ಎಂದು ಸ್ಮಾರ್ಟ್‌ಸಿಟಿ ಯೋಜನೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಂಡುಮಂಡಳಿ ಅಧ್ಯಕ್ಷ ಹಾಗೂ ಎಂಎಲ್‌ಐಆರ್‌ಸಿ ಬ್ರಿಗೇಡಿಯರ್‌ ಗೋವಿಂದ ಕಾಲವಾಡ ಮಾತನಾಡಿ, ಮಹಾನಗರ ಪಾಲಿಕೆ ಅಥವಾ ಸ್ಮಾರ್ಟ್‌ಸಿಟಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಎಷ್ಟು ಜಾಗೆ ಅಗತ್ಯವಿದೆ ಎಂಬುದರ ಬಗ್ಗೆ ಹಾಗೂ ಯೋಜನೆ ರೂಪುರೇಷೆಯ ಕುರಿತು ನಿಗದಿತ ನಮೂನೆಯಲ್ಲಿ ಮಾಹಿತಿ ನೀಡಿದರೆ ಅದನ್ನು ಪರಿಶೀಲಿಸಿ ತಕ್ಷಣವೇ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಸ್ಮಾರ್ಟ್‌ಸಿಟಿ ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳುವ ಮೊದಲು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಹೆಸ್ಕಾಂ, ಬಿ.ಎಸ್‌. ಎನ್‌.ಎಲ್‌ ಹಾಗೂ ಮಹಾನಗರ ಪಾಲಿಕೆ ಸಮನ್ವಯದೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು. ಅಲ್ಲದೆ ಹೊಸ ಯೋಜನೆಯ ಪ್ರಸ್ತಾವನೆ ಸಲ್ಲಿಸುವ ಸಂದರ್ಭದಲ್ಲಿ ಪಾಲುದಾರ ಇಲಾಖೆಯ ಜತೆ ಸಮಗ್ರವಾಗಿ ಸಮಾಲೋಚನೆ ನಡೆಸಿ ಸೂಕ್ತ ಯೋಜನೆ ರೂಪಿಸಬೇಕು ಎಂದು ಅಂಗಡಿ ಸಲಹೆ ನೀಡಿದರು.

Advertisement

ಅಶೋಕ ವೃತ್ತ ರಸ್ತೆ ಹಾಗೂ ತರಕಾರಿ ಮಾರುಕಟ್ಟೆ ರಸ್ತೆ ಅಗಲೀಕರಣಕ್ಕೆ ಅಗತ್ಯವಾದ ಜಾಗವನ್ನು ಪಡೆದುಕೊಂಡು ಸ್ಮಾರ್ಟ್‌ಸಿಟಿ ಯೋಜನೆಯಡಿ ಕಾಮಗಾರಿ ಆರಂಭಿಸಬೇಕು. ಅದೇ ರೀತಿ ವೆಂಗುರ್ಲಾ ಮತ್ತು ಗಣೇಶಪುರ ರಸ್ತೆ ಅಭಿವೃದ್ಧಿ ಕೆಲಸವನ್ನು ಮಹಾನಗರ ಪಾಲಿಕೆ ವತಿಯಿಂದ ಕೈಗೊಳ್ಳಬೇಕು. ಪ್ರತಿ 15 ದಿನಗಳಿಗೊಮ್ಮೆ ಸಮನ್ವಯ ಸಭೆ ನಡೆಸಬೇಕು ಎಂದು ಹೇಳಿದರು.

ಸ್ಮಾರ್ಟ್‌ಸಿಟಿ ಕಾಮಗಾರಿ ಹಾಗೂ ಪೈಪ್‌ ಲೈನ್‌ ಸ್ಥಳಾಂತರ ಮತ್ತಿತರ ಸೌಕರ್ಯಗಳಿಗೆ ಅಗತ್ಯವಿರುವ ಅನುದಾನ ಪಡೆಯಲು ಸ್ಮಾರ್ಟ್‌ಸಿಟಿ ವತಿಯಿಂದ ಪ್ರಸ್ತಾವ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಹೇಳಿದರು. ನಾನಾವಾಡಿ ರಸ್ತೆ ವಿಸ್ತರಣೆಗೆ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆಯುವುದು ಮತ್ತು ಗೋಗಟೆ ವೃತ್ತದಿಂದ ನಾನಾವಾಡಿ ಕ್ರಾಸ್‌ ವರೆಗೆ ಕಾಂಗ್ರೆಸ್‌ ರಸ್ತೆಯಲ್ಲಿ ಫುಟ್‌ಪಾತ್‌ ಅಭಿವೃದ್ಧಿ ಮತ್ತು ಸೈಕಲ್‌ ಟ್ರ್ಯಾಕ್  ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿರಾಕ್ಷೇಪಣ ಪತ್ರ ಪಡೆಯುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಗೋಗಟೆ ವೃತ್ತದಿಂದ ನಾನಾವಾಡಿ ಕ್ರಾಸ್‌ ವರೆಗೆ ಕಾಂಗ್ರೆಸ್‌ ರಸ್ತೆಯಲ್ಲಿ ಫುಟ್‌ ಪಾಥ್‌ ಅಭಿವೃದ್ಧಿಪಡಿಸುವುದು ಮತ್ತು ಸೈಕಲ್‌ ಟ್ರ್ಯಾಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಸ್ಮಾರ್ಟ್‌ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಿರೀನ್‌ ನದಾಫ್‌ ಹೇಳಿದರು. ದಂಡುಮಂಡಳಿ ವ್ಯಾಪ್ತಿಯಲ್ಲಿ ಬೀದಿದೀಪ ನಿರ್ವಹಣೆ ಆದರ ಹಣವನ್ನು ರಾಜ್ಯ ಸರ್ಕಾರದ ವತಿಯಿಂದ ಪಾವತಿಸಲು ಕ್ರಮ ಕೈಗೊಳ್ಳಬೇಕು.ದಂಡುಮಂಡಳಿಯ ವ್ಯಾಪ್ತಿಯಲ್ಲಿ ಇರುವ ಕಸಾಯಿಖಾನೆ ನಿರ್ಮಾಣಕ್ಕೆ ಬೇರೆ ಕಡೆ ಜಾಗೆ ಒದಗಿಸಬೇಕು ಎಂದು ದಂಡುಮಂಡಳಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬರ್ಚಸ್ವಾ ಹೇಳಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಜಗದೀಶ್‌ ಕೆ.ಎಚ್‌. ಸ್ಮಾರ್ಟ್‌ಸಿಟಿ ಯೋಜನೆ, ಮಹಾನಗರ ಪಾಲಿಕೆ, ಹೆಸ್ಕಾಂ, ಸಾರಿಗೆ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next