Advertisement

ನಕಲಿ ಟಿವಿ ಚಾನೆಲ್‌ಗ‌ಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಜಗದೀಶ್‌ ಎಚ್ಚರಿಕೆ

11:14 PM Dec 10, 2019 | mahesh |

ಉಡುಪಿ: ಜಿಲ್ಲೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಹಾಗೂ ನಕಲಿ ಟಿವಿ ಚಾನೆಲ್‌ಗ‌ಳ ವಿರುದ್ಧ ಕಠಿನ ಕ್ರಮ ಜರಗಿಸುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್‌ ಕಾಯಿದೆಯ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಟಿವಿ ಚಾನೆಲ್‌ಗ‌ಳು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ( ಟ್ರಾಯ್‌)ದ ಅಡಿ ನೋಂದಣಿಯಾಗಿರಬೇಕು. ಆದರೆ, ಇತ್ತೀಚೆಗೆ ಟಿವಿ ಚಾನೆಲ್‌ಗ‌ಳ ಹೆಸರಿನಲ್ಲಿ ಸರಕಾರಿ ಕಚೇರಿಗಳು ಸೇರಿದಂತೆ ಸಾರ್ವಜನಿಕರನ್ನು ಬ್ಲಾಕ್‌ವೆುàಲ್‌ ಮಾಡುತ್ತಿರುವ ಕೆಲವು ನಕಲಿ ಚಾನೆಲ್‌ಗ‌ಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಅಸ್ತಿತ್ವದಲ್ಲಿರುವ ಸ್ಥಳೀಯ ಚಾನೆಲ್‌ಗ‌ಳ ದಾಖಲೆ ಪರಿಶೀಲನೆ ನಡೆಸಿ, ನಕಲಿ ಚಾನೆಲ್‌ಗ‌ಳನ್ನು ಪತ್ತೆ ಹಚ್ಚಿ ಕ್ರಮ ಜರಗಿಸಲಾಗುವುದು. ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅವರು ವಾರ್ತಾ ಇಲಾಖೆಗೆ ಸೂಚಿಸಿದರು.

ಆಪರೇಟರ್‌ಗಳ ನೋಂದಣಿ ಕಡ್ಡಾಯ
ಜಿಲ್ಲೆಯಲ್ಲಿರುವ ಎಲ್ಲ ಕೇಬಲ್‌ ಆಪರೇಟರ್‌ಗಳು ನಿಯಮನುಸಾರ ಪ್ರಧಾನ ಅಂಚೆ ಕಚೇರಿಯಲ್ಲಿ ಕಡ್ಡಾಯವಾಗಿ ನೋಂದಾಯಿಸಿರಬೇಕು. ಈ ಕುರಿತು ಅಂಚೆ ಇಲಾಖೆಯಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುವುದು. ನೋಂದಣಿಯಾಗದ ಕೇಬಲ್‌ ಆಪರೇಟರ್‌ಗಳು ಕೂಡಲೇ ತಮ್ಮ ವ್ಯವಹಾರವನ್ನು ಸ್ಥಗಿತಗೊಳಿಸಬೇಕು. ಇಲ್ಲದಿದ್ದರೇ ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಜರಗಿಸಿ, ಸಂಬಂಧಪಟ್ಟ ಕೇಬಲ್‌ ಉಪಕರಣಗಳನ್ನು ವಶಪಡಿಸಿ ಮುಟ್ಟುಗೋಲು ಹಾಕಲಾಗುವುದು ಎಂದು ಅವರು ಎಚ್ಚರಿಸಿದರು.

ಕಠಿನ ಕ್ರಮ
ಟಿವಿಯಲ್ಲಿ ಪ್ರಸಾರವಾಗುವ ಯಾವುದೇ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ ಭಂಗ ಅಥವಾ ಯಾವುದೇ ಸಮುದಾಯಗಳ ಮಧ್ಯೆ ವೈರತ್ವ, ನೋವು ಉಂಟು ಮಾಡಿದರೆ ಸಾರ್ವಜನಿಕರು ದೂರು ನೀಡಬಹುದಾಗಿದೆ. ಸಮಾಜಕ್ಕೆ ಧಕ್ಕೆ ತರುವಂತಹ ಕಾರ್ಯಕ್ರಮ ಮತ್ತು ಆಕ್ಷೇಪಾರ್ಹ ದೃಶ್ಯಪ್ರಸಾರ ಮಾಡುವ ಯಾವುದೇ ಕೇಬಲ್‌ ಆಪರೇಟರ್‌ ಅಥವಾ ಚಾನೆಲ್‌ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು. ಇ-ಪೇಪರ್‌ ಹಾಗೂ ಮೊಬೈಲ್‌ ಲಿಂಕ್‌ ಮೂಲಕ ಸುದ್ದಿಗಳನ್ನು ಕಳುಹಿಸುವ ಮಾಧ್ಯಮಗಳು ನೋಂದಣಿಯಾಗಬೇಕಿದೆ. ಅನಧಿಕೃತವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ಮಾಧ್ಯಮಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು.

ಶೀಘ್ರದಲ್ಲೇ ಪರಿಶೀಲನೆ
ಸಮಿತಿಯ ಕಾರ್ಯದರ್ಶಿ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್‌ ಶಾ ಮಾತನಾಡಿ, ಸ್ಥಳೀಯ ಮಟ್ಟದಲ್ಲಿ ಕೇಬಲ್‌ ಟಿವಿ ಚಾನೆಲ್‌ಗ‌ಳ ಕಾರ್ಯಕ್ರಮದ ಮೇಲೆ ನಿಗಾ ಇಡಲು, ಅನಪೇಕ್ಷಿತ ಕಾರ್ಯಕ್ರಮಗಳನ್ನು ಪ್ರಸಾರ ಮಾಡದಂತೆ ಹಾಗೂ ಕೇಬಲ್‌ ಆಪರೇಟರ್‌ಗಳ ಸೇವೆಯ ಬಗ್ಗೆ ಸಾರ್ವಜನಿಕರಿಂದ ದೂರು ಸ್ವೀಕರಿಸಲು ಇಲಾಖೆಯಲ್ಲಿ ದೂರು ಕೋಶ ಇದೆ. ಉಡುಪಿ ಜಿಲ್ಲೆಯಲ್ಲಿ ಕೇಬಲ್‌ ಆಪರೇಟರ್‌ಗಳು ನೋಂದಣಿಗೊಂಡಿರುವ ಬಗ್ಗೆ ಅಂಚೆ ಇಲಾಖೆಯಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಕೇಬಲ್‌ ನಿರ್ವಹಣಾ ಸಮಿತಿ ಸದಸ್ಯರಾದ ಡಾ| ವಿರೂಪಾಕ್ಷ ದೇವರಮನೆ, ಶೃತಿ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Advertisement

ದೂರು ನೀಡಿ
ಕೇಬಲ್‌ ಆಪರೇಟರ್‌ಗಳು ಗ್ರಾಹಕರಿಂದ ನಿಗದಿತ ದರವನ್ನಷ್ಟೇ ಪಡೆಯಬೇಕು. ಅದಕ್ಕಿಂತ ಹೆಚ್ಚು ವಸೂಲಿ ಮಾಡಿದ್ದಲ್ಲಿ ಸಾರ್ವಜನಿಕರು ದೂರು ನೀಡಬಹುದು. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ದೂರು ಕೋಶ ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲಾ ವಾರ್ತಾ ಇಲಾಖೆ ಕಚೇರಿಗೆ ಲಿಖೀತವಾಗಿಯೂ, ಇಮೇಲ್‌ (varthabhavanaudupi@gmail.com) ಮೂಲಕವೂ ದೂರು ನೀಡಬಹುದು. ಗ್ರಾಹಕರಿಂದ ಪಡೆಯುವ ಮಾಸಿಕ ಶುಲ್ಕಕ್ಕೆ ರಶೀದಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next