Advertisement

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಕ್ರಮ

10:49 PM Oct 16, 2019 | Lakshmi GovindaRaju |

ಬೆಂಗಳೂರು: ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಮತ್ತು ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದ್ದಾರೆ.

Advertisement

ಬುಧವಾರ ನಗರದ ಬಹುಮಹಡಿ ಕಟ್ಟಡದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಯಾವುದೇ ಕಾರಣಕ್ಕೂ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಕೂಡದು. ಸಾಮೂಹಿಕ ನಕಲು ಸಹಿತವಾಗಿ ಯಾವುದೇ ರೀತಿಯ ಪರೀಕ್ಷಾ ಅಕ್ರಮ ನಡೆಯದಂತೆ ಎಚ್ಚರ ವಹಿಸುವ ಸಂಬಂಧ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೌಲ್ಯಮಾಪನವನ್ನು ಎಚ್ಚರಿಕೆಯಿಂದ ಮಾಡಬೇಕು. ತಪ್ಪು ಮೌಲ್ಯಮಾಪನದಿಂದ ಯಾವ ವಿದ್ಯಾರ್ಥಿಗೂ ಅನ್ಯಾಯವಾಗದಂತೆ ನಿಗಾ ವಹಿಸಬೇಕು ಎಂದು ಪಿಯು ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇವೆ. ಅಲ್ಲದೆ, ಅಧಿಕಾರಿಗಳ ಸಭೆ ಕೂಡ ಕರೆದು ಚರ್ಚಿಸಿದ್ದೇವೆ ಎಂದರು.

ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ನೆನಪಿಸಿಕೊಂಡರೆ ಇಂದಿಗೂ ಭಯ ಹುಟ್ಟಿಸುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಪೂರ್ಣವಾಗಿ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಿಂಗ್‌ಪಿನ್‌ಗಳ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯ ಅಧಿಕಾರಿಗಳ ಜತೆಗೂ ಮಾತುಕತೆ ನಡೆಸಿದ್ದೇವೆ. ಕಿಂಗ್‌ಪಿನ್‌ಗಳು ಹೊರಗೆ ಬಾರದಂತೆ ಎಲ್ಲ ರೀತಿಯ ಕ್ರಮ ವಹಿಸಲು ಪೊಲೀಸ್‌ ಇಲಾಖೆಗೂ ತಿಳಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಮೌಲ್ಯಮಾಪನದ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆ ಅಥವಾ ಬಹಿಷ್ಕಾರ ಇತ್ಯಾದಿ ಯಾವುದನ್ನೂ ಮಾಡಬಾರದು. ಶಿಕ್ಷಕ, ಉಪನ್ಯಾಸಕರ ಯಾವುದೇ ಸಮಸ್ಯೆ ಇದ್ದರೂ, ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಶಿಕ್ಷಕ, ಉಪನ್ಯಾಸಕರ ಸಂಘದ ಪದಾಧಿಕಾರಿಗಳ ಸಭೆಯನ್ನು ಕರೆಯಲಿದ್ದೇವೆ ಎಂದರು.

Advertisement

ಪ್ರಶ್ನೆ ಪತ್ರಿಕೆಗಳನ್ನು ಶೇಖರಿಸಿಡುವ ಜಿಲ್ಲಾ ಖಜಾನೆಗೆ ಇನ್ನಷ್ಟು ಭದ್ರತೆ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಪ್ರಶ್ನೆ ಪತ್ರಿಕೆ ತಯಾರಿಕೆಯಿಂದ ಆರಂಭಗೊಂಡು, ಪರೀಕ್ಷಾ ಕೇಂದ್ರಕ್ಕೆ ವಿತರಣೆಯವರೆಗೂ ಎಲ್ಲಾ ರೀತಿಯ ಸುರಕ್ಷಾ ಕ್ರಮ ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆಯಬಹುದು ಎಂದರು.

ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿರುವುದರ ಜತೆಗೆ ಪ್ರವಾಹದಿಂದ ಉಂಟಾಗಿರುವ 22 ಜಿಲ್ಲೆಗಳ ಶಾಲಾ, ಕಾಲೇಜು ಮಕ್ಕಳ ಸಮಸ್ಯೆಗೂ ಸರ್ಕಾರ ಸ್ಪಂದಿಸುತ್ತಿದೆ. ಪೀಠೊಪಕರಣಗಳ ಅಳವಡಿಕೆ ಹಾಗೂ ಕೊಠಡಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ತುರ್ತು ಪರಿಹಾರಕ್ಕೆ 500 ಕೋಟಿ ರೂ.ಬಂದಿದೆ.

ಶೈಕ್ಷಣಿಕವಾಗಿ ಮಕ್ಕಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಲಿದ್ದೇವೆ. ಪಠ್ಯಪುಸ್ತಕ ಹಾಗೂ ಎರಡನೇ ಜತೆ ಸಮವಸ್ತ್ರ ದಸರಾ ರಜೆ ಮುಗಿದು ಶಾಲೆ ಪುನರ್‌ ಆರಂಭವಾಗುವಾಗ ವಿದ್ಯಾರ್ಥಿಗಳಿಗೆ ಸಿಗಲಿದೆ ಎಂದು ತಿಳಿಸಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next