Advertisement

ಸಮಾಜ ಕಲ್ಯಾಣ ಇಲಾಖೆಯಿಂದಲೇ ಕ್ರಮ

09:20 AM Mar 11, 2020 | Lakshmi GovindaRaj |

ವಿಧಾನಸಭೆ: “ನಕಲಿ ಜಾತಿ ಪ್ರಮಾಣ ಪತ್ರ ನೀಡುವ ಅಧಿಕಾರಿಗಳ ವಿರುದ್ಧ ಕಂದಾಯ ಇಲಾಖೆ ಬದಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದಲೇ ಕ್ರಮ ಜರುಗಿಸುವ ಅಧಿಕಾರ ನೀಡುವುದು ಸೂಕ್ತ ಎಂದು ಸದನ ಒಪ್ಪಿದರೆ ಕಾನೂನಿಗೆ ಸೂಕ್ತ ತಿದ್ದುಪಡಿ ತರಲು ಪ್ರಯತ್ನಿಸಲಾಗುವುದು’ ಎಂದು ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು.

Advertisement

ಸೋಮವಾರ ಶಾಸಕ ಎನ್‌. ಮಹೇಶ್‌ ಪ್ರಶ್ನೆಗೆ ಉತ್ತರಿಸಿ, ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನರ ಮನಸ್ಥಿತಿ ಬದಲಾಗಬೇಕೇ ಹೊರತು ಕಾನೂನು, ನ್ಯಾಯಾಲಯದಿಂದ ಪೂರ್ಣ ಪ್ರಮಾಣದಲ್ಲಿ ತಡೆಯಲು ಸಾಧ್ಯವಿಲ್ಲ. ಬೆಳಗಾವಿಯಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಸಂಬಂಧ 27 ತಹಶೀಲ್ದಾರ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆಗೆ ಶಿಫಾರಸು ಮಾಡಲಾಗಿದೆ.

ಅದರಂತೆ ಕಂದಾಯ ಇಲಾಖೆ ಅಮಾನತುಪಡಿಸಿ ಕಾರಣ ಕೇಳಿ ನೋಟಿಸ್‌ ನೀಡಿದೆ. ಸುಳ್ಳು ಪ್ರಮಾಣ ಪತ್ರ ನೀಡಿದ, ಪಡೆದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಅವಕಾಶವಿದೆ ಎಂದರು. ನನ್ನ ಸಾರ್ವಜನಿಕ ವಿನಂತಿ ಏನೆಂದರೆ, ಸುಳ್ಳು ಪ್ರಮಾಣ ಪತ್ರ ಪಡೆಯುವುದು ಅಪರಾಧ. ಸಮಾಜದಲ್ಲಿ ಸಾವಿರಾರು ವರ್ಷಗಳಿಂದ ಅಸ್ಪೃಶ್ಯತೆ, ಶೋಷಣೆಗೆ ಒಳಗಾದವರರಿಗೆ ಕೆಲ ಸವಲತ್ತು ನೀಡಲಾಗಿದೆ. ಅದನ್ನು ಮುಂದುವರಿದವರು ಪಡೆಯಬಾರದು ಎಂದು ಸದನಕ್ಕೆ ತಿಳಿಸಿದರು.

ಇದಕ್ಕೆ ಸಮಾಧಾನಗೊಳ್ಳದ ಎನ್‌.ಮಹೇಶ್‌, ನಕಲಿ ಜಾತಿ ಪ್ರಮಾಣ ಪತ್ರ ಸಂಬಂಧ ಬಹಳಷ್ಟು ಪ್ರಕರಣಗಳಲ್ಲಿ “ಬಿ’ ರಿಪೋರ್ಟ್‌ ಸಲ್ಲಿಸಲಾಗಿದೆ. ಪ್ರಥಮ ಮಾಹಿತಿ ವರದಿ ರದ್ದು ಸೇರಿ ಹಲವು ಪ್ರಕರಣಗಳು ರದ್ದಾಗಿವೆ. ಈ ಬಗ್ಗೆ ಒಮ್ಮೆ ಪುನರ್‌ ಪರಿಶೀಲಿಸಬೇಕು. ಮನ ಪರಿವರ್ತನೆಯಾಗುವಂತಿದ್ದರೆ ಕಾನೂನಿನ ಅಗತ್ಯವೇ ಇಲ್ಲ. ಸುಳ್ಳು ಪ್ರಮಾಣ ಪತ್ರ ನೀಡುವ ತಹಶೀಲ್ದಾರ್‌ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದರು.

ಜೆಡಿಎಸ್‌ನ ಎ.ಟಿ. ರಾಮಸ್ವಾಮಿ, ಉಳ್ಳವರೇ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸೌಲಭ್ಯ ಬಳಸುತ್ತಿದ್ದಾರೆ. ಇಂತಹ ಪ್ರಕರಣದಲ್ಲಿ ತ್ವರಿತವಾಗಿ ಕ್ರಮ ಜರುಗಿಸಬೇಕು. ಕೇವಲ ಪತ್ರ, ಶಿಫಾರಸು ಮಾಡುವುದರಿಂದ ಪ್ರಯೋಜನವಿಲ್ಲ ಎಂದು ಹೇಳಿದರು. ಜೆಡಿಎಸ್‌ನ ಎಚ್‌.ಕೆ.ಕುಮಾರಸ್ವಾಮಿ, ತಪ್ಪಿತಸ್ಥ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಪರಮಾಧಿಕಾರವನ್ನು ಸಮಾಜ ಕಲ್ಯಾಣ ಇಲಾಖೆಯೇ ಇಟ್ಟುಕೊಳ್ಳಲಿ ಎಂದು ಸಲಹೆ ನೀಡಿದರು.

Advertisement

ಇದಕ್ಕೆ ಸ್ಪಂದಿಸಿದ ಗೋವಿಂದ ಕಾರಜೋಳ, ನಕಲಿ ಜಾತಿ ಪ್ರಮಾಣ ಪತ್ರ ನೀಡುವ ತಹಶೀಲ್ದಾರ್‌ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ನೇರವಾಗಿ ಕ್ರಮ ಕೈಗೊಳ್ಳಲು ಅವಕಾಶವಿಲ್ಲ. ವೃಂದ ಮತ್ತು ನೇಮಕಾತಿ ನಿಯಮಾವಳಿಯಡಿ ಕಂದಾಯ ಇಲಾಖೆ ಕ್ರಮ ಕೈಗೊಳ್ಳಬೇಕು. ಸದನ ಒಪ್ಪುವುದಾದರೆ ಸಮಾಜ ಕಲ್ಯಾಣ ಇಲಾಖೆಯಿಂದಲೇ ನೇರವಾಗಿ ಕ್ರಮ ಕೈಗೊಳ್ಳುವ ಸಂಬಂಧ ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಹೇಳುವ ಮೂಲಕ ಚರ್ಚೆಗೆ ಅಂತ್ಯ ಹಾಡಿದರು.

ಸಮಾಜ ಕಲ್ಯಾಣ ಇಲಾಖೆಯ ಶಿಫಾರಸನ್ನು ಕಂದಾಯ ಇಲಾಖೆ ಕಟ್ಟುನಿಟ್ಟಾಗಿ ಪಾಲಿಸುವಂತಾಗಬೇಕು. ಇಲ್ಲದಿದ್ದರೆ ಅಧಿಕಾರಿಗಳು ವಿಷಯಾಂತರ ಮಾಡಿ ಕ್ರಮವಾಗದಂತೆ ತಡೆಯಲು ಯತ್ನಿಸುತ್ತಾರೆ.
-ಪ್ರಿಯಾಂಕ್‌ ಖರ್ಗೆ, ಕಾಂಗ್ರೆಸ್‌ ಸದಸ್ಯ

Advertisement

Udayavani is now on Telegram. Click here to join our channel and stay updated with the latest news.

Next