Advertisement

ಸರಕು ಸಾಗಣೆ ವಾಹನದಲ್ಲಿ ಜನರನ್ನು ಸಾಗಿಸಿದರೆ ಕ್ರಮ

12:43 PM May 05, 2019 | pallavi |

ಬೆಳಗಾವಿ: ಸರಕು ಸಾಗಣೆ ಅಥವಾ ಕನ್‌ಸ್ಟ್ರಕ್ಷನ್‌ ವಾಹನಗಳಲ್ಲಿ ಕಾರ್ಮಿಕರನ್ನು ಹಾಗೂ ಸಾರ್ವಜನಿಕರನ್ನು ಅಮಾನವೀಯ ರೀತಿಯಲ್ಲಿ ಸಾಗಿಸುವುದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ| ವಿಶಾಲ್ ಆರ್‌. ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸರಕು ಸಾಗಾಣಿಕೆ, ಕನ್‌ಸ್ಟ್ರಕ್ಷನ್‌ ವಾಹನಗಳಲ್ಲಿ ಕಾರ್ಮಿಕರನ್ನು ಹಾಗೂ ಆಟೋಗಳಲ್ಲಿ ಕಾನೂನುಬಾಹಿರವಾಗಿ ಹೆಚ್ಚಿನ ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ನಡೆದ ವಿವಿಧ ಇಲಾಖೆಗಳು, ಉದ್ಯೋಗದಾತರು ಹಾಗೂ ಕಾರ್ಮಿಕ ವರ್ಗದ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿವಿಧ ಕಾರಣಗಳಿಂದಾಗಿ ಕಾರ್ಮಿಕರು ಹಾಗೂ ಜನರನ್ನು ಸರಕು ಸಾಗಾಣಿಕೆ ವಾಹನಗಳಲ್ಲಿ ಸಾಗಾಣಿಕೆ ಮಾಡಲಾಗುತ್ತಿದೆ. ಪ್ರಮುಖವಾಗಿ ಬಸ್‌ ಸೌಕರ್ಯದ ಕೊರತೆ ಇರುವ ಕಡೆಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಹೀಗಾಗಿ ಅಗತ್ಯವಿರುವ ಕಡೆಗಳಲ್ಲಿ ತಕ್ಷಣ ಹೆಚ್ಚುವರಿ ಬಸ್‌ ಸೌಲಭ್ಯ ಒದಗಿಸಬೇಕು ಎಂದು ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚನೆ ನೀಡಿದರು. ಕಾರ್ಮಿಕರನ್ನು ಅಮಾನವೀಯವಾಗಿ ಸಾಗಾಣಿಕೆ ಮಾಡುವುದು ಕಾನೂನು ಬಾಹಿರವಾಗಿದೆ. ಇದರಿಂದಾಗುವ ತೊಂದರೆಗಳ ಬಗ್ಗೆ ಕಾರ್ಖಾನೆಗಳ ಮಾಲೀಕರಿಗೆ ಮತ್ತಿತರರಿಗೆ ವಿವಿಧ ಹಂತಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಹೈಕೋರ್ಟ್‌ಗೆ ಮಾಹಿತಿ: ಸರಕು ಸಾಗಾಣಿಕೆ ವಾಹನದಲ್ಲಿ ಕಾರ್ಮಿಕರನ್ನು ಅಮಾನವೀಯವಾಗಿ ಸಾಗಾಣಿಕೆ ಮಾಡುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಮೇ 25ರೊಳಗೆ ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿರುತ್ತದೆ ಎಂದು ಕಾರ್ಮಿಕ ಇಲಾಖೆ ಆಯುಕ್ತ ಪಾಲಯ್ಯ ತಿಳಿಸಿದರು.

ಯಾವ ಯಾವ ಪ್ರದೇಶಗಳಲ್ಲಿ ಕಾರ್ಮಿಕರು ಅಥವಾ ಇತರ ಜನರನ್ನು ಅಮಾನವೀಯವಾಗಿ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಈ ಮಾಹಿತಿ ಆಧರಿಸಿ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಿಯಾಯೋಜನೆ ರೂಪಿಸಲಾಗುವುದು ಎಂದು ಪಾಲಯ್ಯ ಹೇಳಿದರು.

ಇದಕ್ಕೂ ಮುಂಚೆ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ವಿಜಯ ದೇವರಾಜ್‌ ಅರಸ್‌, ಸರಕು ಸಾಗಾಣಿಕೆ ವಾಹನಗಳಲ್ಲಿ ಜನರನ್ನು ಕೊಂಡೊಯ್ಯುವುದು ಕಾನೂನುಬಾಹಿರವಾಗಿದೆ. ಇಂತಹ ಸಂದರ್ಭಗಳಲ್ಲಿ ಅನಾಹುತ ಸಂಭವಿಸಿದರೆ ಪರಿಹಾರ ಸಿಗುವುದಿಲ್ಲ. ಹೀಗಾಗಿ ಸುರಕ್ಷಿತ ಪ್ರಯಾಣ ದೃಷ್ಟಿಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

Advertisement

ಮದುವೆ, ಜಾತ್ರೆ, ಸಂತೆ, ಕೆಲಸಕ್ಕಾಗಿ ಗುಳೆ ಹೋಗುವಂತಹ ಸಂದರ್ಭಗಳಲ್ಲಿ ಜನರನ್ನು ಸರಕು ವಾಹನಗಳಲ್ಲಿ ಸಾಗಾಣಿಕೆ ಮಾಡುವುದು ಸಾಮಾನ್ಯವಾಗಿರುತ್ತದೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ರೈತ ಸಮುದಾಯಗಳಲ್ಲಿ ತಿಳಿವಳಿಕೆ ಮೂಡಿಸುವ ಕೆಲಸ ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಆರಂಭಿಸಬೇಕು ಎಂದು ನ್ಯಾಯವಾದಿಯೊಬ್ಬರು ಸಲಹೆ ನೀಡಿದರು.

ಆಟೋಗಳಲ್ಲಿ ಮಿತಿಮೀರಿ ಶಾಲಾ ಮಕ್ಕಳನ್ನು ಸಾಗಿಸುವ ಪ್ರಕರಣಗಳನ್ನು ತಡೆಗಟ್ಟಲು ನಗರ ಪ್ರದೇಶಗಳಲ್ಲಿ ನಿರಂತರ ತಪಾಸಣೆ ನಡೆಸುವ ಅಗತ್ಯವಿದೆ ಎಂದು ಆಟೋ ಚಾಲಕರ ಸಂಘದ ಪ್ರತಿನಿಧಿಗಳು ಸಲಹೆ ನೀಡಿದರು.

ಕಾರ್ಮಿಕ ಇಲಾಖೆಯ ಉಪ ಆಯುಕ್ತ ನಾಗೇಶ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಉದ್ದಿಮೆಗಳ ಮಾಲೀಕರು, ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು, ಕಾರ್ಮಿಕ ಸಂಘದ ಪ್ರತಿನಿಧಿಗಳು, ಆಟೋ ಚಾಲಕರ ಸಂಘದ ಸದಸ್ಯರು ಮತ್ತು ಸಂಘ-ಸಂಸ್ಥೆಯ ಪದಾಧಿಕಾರಿಗಳು ಇದ್ದರು.

ಜಂಟಿ ಕಾರ್ಯಾಚರಣೆ

ಪೊಲೀಸ್‌ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ಆರಂಭಿಸಿದ್ದು, ಪ್ರಯಾಣಿಕರ ವಾಹನಗಳಲ್ಲಿ ಮಿತಿಮೀರಿ ಸಾಗಾಣಿಕೆ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಈಗಾಗಲೇ ಅಂತಹ 200ಕ್ಕೂ ಹೆಚ್ಚು ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕೇವಲ ದಂಡ ವಿಧಿಸುವುದು ನಮ್ಮ ಉದ್ದೇಶವಲ್ಲ, ಕಾನೂನು ಪಾಲನೆ ಬಗ್ಗೆ ಜಾಗೃತಿ ಮೂಡಿಸಲು ಈ ರೀತಿಯ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ಎಸ್‌. ಲೋಕೇಶ್‌ಕುಮಾರ್‌ ತಿಳಿಸಿದರು.
ವೈಜ್ಞಾನಿಕ ರೀತಿಯಲ್ಲಿ ರಸ್ತೆ ನಿರ್ಮಾಣ

ಅಪಘಾತವಾಗದಂತೆ ಎಚ್ಚರಿಕೆ ವಹಿಸಬೇಕಾದರೆ ವೈಜ್ಞಾನಿಕ ರೀತಿಯಲ್ಲಿ ರಸ್ತೆಗಳ ನಿರ್ಮಾಣ, ರಿಫ್ಲೆಕ್ಟರ್‌ ಅಳವಡಿಕೆ, ಸಂಚಾರಿ ನಿಯಮಗಳಿಗೆ ಸಂಬಂಧಿಸಿದಂತೆ ಚಿಹ್ನೆಗಳ ಅಳವಡಿಕೆಗೆ ಜಿಲ್ಲಾಡಳಿತ ವತಿಯಿಂದ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.
Advertisement

Udayavani is now on Telegram. Click here to join our channel and stay updated with the latest news.

Next