Advertisement

ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ

01:59 PM Apr 25, 2022 | Team Udayavani |

ಹಿರಿಯೂರು: ಜಿಲ್ಲೆಯನ್ನು ಕೇಂದ್ರವಾಗಿರಿಸಿಕೊಂಡು ಜಿಲ್ಲಾ ಮಟ್ಟದಲ್ಲಿಯೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದರು.

Advertisement

ತಾಲೂಕಿನ ಯಲ್ಲದಕೆರೆ ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಈ ಹಿಂದೆ ರಾಜ್ಯ ಮಟ್ಟದಲ್ಲಿ ಮೊರಾರ್ಜಿ ವಸತಿ ಶಾಲೆಯ ಪ್ರವೇಶಕ್ಕೆ ಪರೀಕ್ಷೆ ನಡೆಸಿ ಆಯ್ಕೆಯಾದ ಮಕ್ಕಳಿಗೆ ದೂರದ ಊರುಗಳಲ್ಲಿರುವ ವಸತಿ ಶಾಲೆಗಳಲ್ಲಿ ಪ್ರವೇಶ ನೀಡಲಾಗುತ್ತಿತ್ತು. ಇದರಿಂದ ಮಕ್ಕಳಿಗೆ ಹಾಗೂ ಪೋಷಕರಿಗೆ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಸರ್ಕಾರ ವಸತಿ ಶಾಲೆಗಳ ಸೀಟು ಹಂಚಿಕೆಯನ್ನು ಜಿಲ್ಲೆಯ ಒಳಗೆ ನೀಡಲು ಕ್ರಮ ವಹಿಸಿದೆ. ಉತ್ತಮ ಪರಿಸರದಲ್ಲಿ ಯಲ್ಲದಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ನೂತನ ಕಟ್ಟಡ ನಿರ್ಮಿಸಲಾಗಿದೆ ಎಂದರು.

ಭವ್ಯ ಕಟ್ಟದ ಜೊತೆಗೆ ಇತರೆ ಎಲ್ಲಾ ಮೂಲಭೂತ ಸೌಲಭ್ಯ ನೀಡಲು ಸರ್ಕಾರ ಬದ್ಧವಾಗಿದೆ. ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರ ಅಚಲ ಪ್ರಯತ್ನದಿಂದಾಗಿ ವಸತಿ ಶಾಲೆ ನಿರ್ಮಾಣಕ್ಕೆ ಜಾಗ ಲಭಿಸಿದೆ. ಕ್ಷೇತ್ರದ ಜನರೊಂದಿಗೆ ಒಡನಾಟಕ್ಕಾಗಿ ಹಿರಿಯೂರಿನಲ್ಲಿ ಮನೆ ನಿರ್ಮಿಸಿಕೊಂಡು ಇದ್ದಾರೆ. ಸರ್ಕಾರ 90 ಕೋಟಿ ವೆಚ್ಚದ ಧರ್ಮಪುರ ನೀರಾವರಿ ಯೋಜನೆ ಮಂಜೂರಾತಿ ನೀಡಿದೆ. ವಾಣಿ ವಿಲಾಸ ಸಾಗರ ಅಣೆಕಟ್ಟಿಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು ನೀಡಲಾಗಿದೆ. ಇದರಿಂದ ಈ ಭಾಗದ ಕೃಷಿ ಚಟುವಟಿಕೆಗೆ ಸಹಕಾರಿಯಾಗಿದೆ. ರೈತರು ಸಮಗ್ರ ಕೃಷಿ ಪದ್ದತಿ ಅಳವಡಿಕೊಳ್ಳಬೇಕು. ಒಂದು ಎಕರೆಯಲ್ಲಿ ಹಲವು ಬೆಳೆ ಬೆಳೆಯುವುದರೊಂದಿಗೆ, ಉಪಕಸುಬು, ಪಶುಸಂಗೋಪನೆ ಕೈಗೊಳ್ಳಬೇಕು ಎಂದು ಕರೆ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌.ನವೀನ್‌ ಮಾತನಾಡಿ ವಸತಿ ಶಾಲೆ ನಿರ್ಮಾಣದಿಂದ ಈ ಭಾಗದ ಮಕ್ಕಳ ಜೀವನ ಉಜ್ವಲವಾಗಿದೆ. ಉಡುವಳ್ಳಿ ನವೋದಯಶಾಲೆ ಮಾದರಿಯಲ್ಲಿಯೇ ಮೊರಾರ್ಜಿ ವಸತಿ ಶಾಲೆಯಲ್ಲೂ ಉತ್ತಮ ಶಿಕ್ಷಣ ದೊರಕುವುದು. ದಟ್ಟಕಾಡು, ವಾಣಿ ವಿಲಾಸ ಸಾಗರದ ಹಿನ್ನೀರಿನ ಪರಿಸರ ಇರುವ ಪ್ರಕೃತಿ ಮಧ್ಯೆ ಶಾಲೆಯಿದೆ. ಕ್ರೈಸ್‌ ಸಂಸ್ಥೆ ಶಾಲೆಯ ಕಟ್ಟಡದ ಜೊತೆಗೆ ಇತರೆ ಮೂಲಭೂತ ಸೌಕರ್ಯಗಳನ್ನು ಸಂಪೂರ್ಣವಾಗಿ ನೀಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌, ಜವಗೊಂಡನಹಳ್ಳಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರು ಹೆಚ್ಚಿನ ಜನಸಂಖ್ಯೆಯಲ್ಲಿದ್ದಾರೆ. ಹೋಬಳಿ ವ್ಯಾಪ್ತಿಯಲ್ಲಿ 25 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

Advertisement

ಯಲ್ಲದಕೆರೆ ಪಂಚಾಯತಿ ವ್ಯಾಪ್ತಿಯಲ್ಲಿ 28 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ. ಅಲೆಮಾರಿ ಕುಟುಂಬಗಳಿಗೆ 400 ಮನೆಗಳನ್ನು ಮಂಜೂರ ಮಾಡಲಾಗಿದೆ. ಪರಿಶಿಷ್ಟ ಜಾತಿ ವರ್ಗದ ಕುಟುಂಬಗಳಿಗೆ 50 ಮನೆಗಳನ್ನು ನೀಡಲಾಗಿದೆ. 1.50 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ಅಭಿವೃದ್ಧಿ ಮಾಡಲಾಗಿದೆ. ಬಹುಗ್ರಾಮ ಯೋಜನೆಯಡಿ ಈ ಭಾಗದ 131 ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಕೇಂದ್ರ ಸರ್ಕಾರ 131 ಕೋಟಿ ವೆಚ್ಚದಲ್ಲಿ ಹಿರಿಯೂರು ಹುಳಿಯಾರ ರಸ್ತೆ ಮೇಲ್ದರ್ಜೆಗೆ ಏರಿಸಲಿದೆ. ಶಾಸಕಿಯಾಗಿ ಕ್ಷೇತ್ರದ ನೀರಾವರಿ, ಶಾಲೆ, ಆಸ್ಪತ್ರೆಗಳ ಅಭಿವೃದ್ಧಿ ಒತ್ತು ನೀಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಯಲ್ಲದಕೆರೆ ಗ್ರಾಪಂ ಅಧ್ಯಕ್ಷೆ ಸುನಂದಮ್ಮ ಚಿಕ್ಕರಂಗಪ್ಪ, ಉಪಾಧ್ಯಕ್ಷ ಜಯಣ್ಣ, ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಅಪರ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳು ಸಂಘದ ಅಧೀಕ್ಷಕ ಅಭಿಯಂತರ ಎಚ್.ಎಲ್. ವೆಂಕಟೇಶ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾಗೇಂದ್ರ ನಾಯ್ಕ ಟಿ.ಎಚ್., ಹಿರಿಯೂರು ತಹಶೀಲ್ದಾರ ಎನ್‌. ಶಿವಕುಮಾರ್‌, ತಾಪಂ ಇಒ ಬಿ.ಎಲ್. ಈಶ್ವರ್‌ ಪ್ರಸಾದ್‌, ಕ್ಷೇತ್ರಶಿಕ್ಷಣಾಧಿಕಾರಿ ನಾಗಭೂಷಣ್‌ ಸೇರಿದಂತೆ ಇತರೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮವಾಗಿರುವುದು ದುರದೃಷ್ಟಕರ ಸಂಗತಿ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರು ಯಾವುದೇ ರಾಜಕೀಯ ಹಿನ್ನಲೆ ಹೊಂದಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಅಕ್ರಮದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಅನ್ಯಾಯವಾಗುತ್ತದೆ. – ಬಿ.ಸಿ. ಪಾಟೀಲ್‌, ಕೃಷಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next