Advertisement

Udupi: ಸರಕಾರಿ ಯೋಜನೆಗಳ ಸಮರ್ಪಕ ಅನುಷ್ಠಾನ: ರೆಜು ಸೂಚನೆ

12:51 AM Sep 08, 2023 | Team Udayavani |

ಉಡುಪಿ: ಸರಕಾರ ಜನಪರ ಯೋಜನೆ, ಕಾರ್ಯಕ್ರಮ ಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು. ಶೇ. 100ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಎಂ.ಟಿ. ರೆಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಗುರುವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಅಡಿ 2,56,850 ಗುರಿ ಹೊಂದಿ 2,11,478 ಮಂದಿ ನೋಂದಣಿಯಾಗಿ ಶೇ. 82.34 ಪ್ರಗತಿಯಾಗಿದೆ. ರೇಷನ್‌ ಕಾರ್ಡ್‌ ಸಮಸ್ಯೆಗಳು ಅಥವಾ ಆನ್‌ಲೈನ್‌ ಪೋರ್ಟಲ್‌ನಲ್ಲಿ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿಯವರ ಗಮನಕ್ಕೆ ತರಬೇಕು. ಅಂಗನವಾಡಿಗಳಲ್ಲಿ ಮಕ್ಕಳಿಗೆ ನೀಡುವ ಆಹಾರ ಕಿಟ್‌ ಬಗ್ಗೆ ಮೇಲ್ವಿಚಾರಕರಿಗೆ ಸರಿಯಾಗಿ ಮಾಹಿತಿ ನೀಡಬೇಕು. ಕಿಟ್‌ ಸರಬರಾಜು, ಆಹಾರ ವಿತರಣೆ ಮಾಡುತ್ತಿರುವ ಬಗ್ಗೆ ಸಂಬಂಧಿಸಿದ ದಾಖಲೆ ಸರಿಯಾಗಿ ನಿರ್ವಹಣೆ ಮಾಡದಿರುವುದು ಕಂಡು ಬಂದಿದೆ. ಈ ಬಗ್ಗೆ ಪರಿಶೀಲಿಸಿ ಜಿಲ್ಲಾಧಿಕಾರಿಯವರಿಗೆ ವರದಿ ನೀಡಬೇಕು ಎಂದು ಸೂಚಿಸಿದರು.

ಶಿಶು ಅಭಿವೃದ್ಧಿ ಅಧಿಕಾರಿಗಳು ಹಾಗೂ ಉಪ ನಿರ್ದೇಶಕರು ಆಗಿಂದಾಗ್ಗೆ ಅಂಗನವಾಡಿಗೆ ಭೇಟಿ ನೀಡಬೇಕು. ಸರಕಾರದ ಯೋಜನೆಗಳು ಸುತ್ತೋಲೆಗಳ ಬಗ್ಗೆ ಕೆಳಸ್ತರದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಂಗನವಾಡಿಯ ಸ್ವತ್ಛತೆಗೆ ಆದ್ಯತೆ ನೀಡಿ, ಮಕ್ಕಳಿಗೆ ಆಟಿಕೆಗಳನ್ನು ಆಟ ಆಡಲು ನೀಡಬೇಕು ಎಂದರು.

ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಕಾರದ ಸೂಚನೆಯ ಅನ್ವಯದಲ್ಲಿ ನೀಡಬೇಕು. ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳನ್ನು ಸ್ವಂತ ಕಟ್ಟಡವಾಗಿ ಪರಿವರ್ತಿಸಲು ಮುಂದಾಗಬೇಕು. ಅಗತ್ಯವಿದ್ದಲ್ಲಿ ಶಿಕ್ಷಣ ಇಲಾಖೆಯ ಜಾಗಗಳನ್ನು ಬಳಸಿಕೊಳ್ಳಲು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಎಂದು ಸೂಚನೆ ನೀಡಿದರು.

Advertisement

ಖಾಸಗಿ ಬಸ್ಸಲ್ಲಿ “ಶಕ್ತಿ”: ಸರಕಾರದ ಗಮನಕ್ಕೆ
ಜಿಲ್ಲೆಗೆ ಹೆಚ್ಚುವರಿ 50 ಕೆಎಸ್ಸಾರ್ಟಿಸಿ ಬಸ್‌ ಬೇಕೆಂಬ ಬೇಡಿಕೆಯಿದೆ. ಜಿಲ್ಲೆಯಲ್ಲಿ ಖಾಸಗಿ ಬಸ್‌ನಲ್ಲಿಯೂ ಶಕ್ತಿ ಯೋಜನೆ ಜಾರಿಗೆ ತರಬೇಕು ಎಂಬ ಬೇಡಿಕೆ ಇದ್ದು ಸರಕಾರದ ಗಮನಕ್ಕೆ ತರಲಾಗುವುದು ಎಂದರು.

ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಮರಣ ಸಂಖ್ಯೆ ಹೆಚ್ಚಿರುವುದು ಕಂಡು ಬಂದಿದೆ. ಗರ್ಭಿಣಿಯರಿಗೆ ಸಕಾಲದಲ್ಲಿ ತಾಯಿ ಕಾರ್ಡನ್ನು ವಿತರಿಸಿ ಕಾಲಕಾಲಕ್ಕೆ ಅವರಿಗೆ ಆರೋಗ್ಯ ತಪಾಸಣೆ ಮಾಡಬೇಕು. ಗರ್ಭಿಣಿಯರ ಆರೋಗ್ಯ ಸುಧಾರಣೆ ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಸಿಬಂದಿ ವರ್ಗಕ್ಕೆ ಕಾರ್ಯಾಗಾರ ಆಯೋಜಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ, ಜಿಪಂ ಸಿಇಒ ಪ್ರಸನ್ನ ಎಚ್‌., ಅಪರ ಜಿಲ್ಲಾಧಿಕಾರಿ ಮಮತಾದೇವಿ, ಜಿಲ್ಲಾ ಮಟ್ಟದ ಅನುಷ್ಠಾನಾಧಿ ಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next