Advertisement

ಮತ್ತೆ ಮೂರು ಸೇತುವೆ ಜಲಾವೃತ

08:48 AM Jul 29, 2019 | Suhan S |

ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಭಾಗದ ಕೊಯ್ನಾ, ಮಹಾಬಳೇಶ್ವರ, ವಾರಣಾ, ನವಜಾ ಮತ್ತು ರಾಧಾನಗರಿ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆ ಸುರಿದಿದ್ದರಿಂದ ಕೃಷ್ಣಾ, ದೂದಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಒಂದೇ ದಿನ 10 ಅಡಿಯಷ್ಟು ನೀರು ಏರಿಕೆಯಾಗಿದೆ.

Advertisement

ಗಡಿ ಭಾಗದ ನದಿಗಳ ನೀರಿನ ಹರಿವು ದಿಢೀರ್‌ ಹೆಚ್ಚಳಗೊಂಡಿದ್ದರಿಂದ ಚಿಕ್ಕೋಡಿ ತಾಲೂಕಿನ ಮೂರು ಸೇತುವೆಗಳು ರವಿವಾರ ಮುಳುಗಡೆಯಾಗಿ ಸಂಚಾರ ಕಡಿತಗೊಂಡಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಲ್ಲೋಳ-ಯಡೂರ ಸೇತುವೆ, ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಭೋಜ, ಮಲಿಕವಾಡ-ದತ್ತವಾಡ ಸೇತುವೆ ರವಿವಾರ ನಸುಕಿನ ಜಾವ ಮುಳುಗಡೆಗೊಂಡಿವೆ.

ಮೂರೂ ಸೇತುವೆ ಮೇಲೆ ಯಾರೂ ಸಂಚರಿಸದಂತೆ ನದಿ ತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ಡಂಗೂರ ಸಾರಿದೆ.

ವೇದಗಂಗಾ ನದಿ ನೀರಿನ ಹರಿವು ಸಹ ಜೋರಾಗಿರುವುದರಿಂದ ಜತ್ರಾಟ-ಭಿವಸಿ, ಅಕ್ಕೋಳ-ಸಿದ್ನಾಳ, ಬೋಜವಾಡಿ-ಕುನ್ನೂರ ಸೇತುವೆ ಮುಳುಗುವ ಸಾಧ್ಯತೆ ಹೆಚ್ಚಿದೆ.

ಮಹಾರಾಷ್ಟ್ರದ ಶಿರೋಳ ತಾಲೂಕಿನ ಸುಕ್ಷೇತ್ರ ನರಸಿಂಹವಾಡಿ ಹತ್ತಿರ ಕೃಷ್ಣಾ ನದಿ ಸೇರುವ ಪಂಚಗಂಗಾ ನದಿ ನೀರಿನ ಮಟ್ಟ ಹೆಚ್ಚಳವಾಗಿ ನಾಲ್ಕು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ.

Advertisement

ಮಹಾರಾಷ್ಟ್ರ ರಾಜಾಪೂರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ 81,286 ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ದೂದಗಂಗಾ ಮತ್ತು ವೇದಗಂಗಾ ನದಿಗಳಿಂದ 11,968 ಕ್ಯೂಸೆಕ್‌ ನೀರು ಹರಿದು ಕೃಷ್ಣಾ ನದಿಗೆ ಸೇರುತ್ತದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಒಟ್ಟು 93,254 ಕ್ಯೂಸೆಕ್‌ ನೀರು ಹರಿದು ಹಿಪ್ಪರಗಿ ಬ್ಯಾರೇಜ್‌ಗೆ ಹೋಗುತ್ತಿದೆ. ಹಿಪ್ಪರಗಿ ಬ್ಯಾರೇಜ್‌ದಿಂದ 8 ಗೇಟ್‌ಗಳ ಮೂಲಕ 65 ಸಾವಿರ ಕ್ಯೂಸೆಕ್‌ ನೀರು ಹರಿದು ಬಿಡಲಾಗುತ್ತಿದೆ ಎಂದು ತಹಶೀಲ್ದಾರ್‌ ಡಾ|ಸಂತೋಷ ಬಿರಾದಾರ ಮಾಹಿತಿ ನೀಡಿದರು.

ಚಿಕ್ಕೋಡಿ, ರಾಯಬಾಗ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿ ಜಿಟಿಜಿಟಿ ಮಳೆ ಸುರಿಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next