Advertisement

ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಎಐಡಿಎಸ್‌ಒ ಪ್ರತಿಭಟನೆ

06:52 PM Jul 31, 2022 | Shwetha M |

ವಿಜಯಪುರ: ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಅಭಿಯಾನದ ಮೂಲಕ ಎಐಡಿಎಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶನಿವಾರ ನಗರದಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾ ಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

Advertisement

ಸಂಘಟನೆ ಜಿಲ್ಲಾಧ್ಯಕ್ಷೆ ಸುರೇಖಾ ಕಡಪಟ್ಟಿ ಮಾತನಾಡಿ, ಪ್ರಸಕ್ತ ವರ್ಷ ರಾಜ್ಯದಲ್ಲಿ 13,800 ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದಾಗಿ ಸರ್ಕಾರ ಹೇಳಿದೆ.

ಸದರಿ ವಿಷಯ ರಾಜ್ಯದ ಲಕ್ಷಾಂತರ ಬಡ ವಿದ್ಯಾರ್ಥಿಗಳು, ಪೋಷಕರ ಪಾಲಿಗೆ ಮಾರಕವಾಗಲಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಶಾಶ್ವತವಾಗಿ ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳಲ್ಲಿ ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ದಾಖಲಾತಿ ಪ್ರಮಾಣ ಕುಸಿಯುತ್ತಿದೆ. ದಾಖಲಾತಿ 25ಕ್ಕಿಂತ ಕಡಿಮೆ ಇರುವ ಶಾಲೆಗಳನ್ನು ಒಂದೇ ಸ್ಥಳದಲ್ಲಿ ಸೇರಿಸಿ ದೊಡ್ಡ ಶಾಲೆಯೊಂದಿಗೆ ವಿಲೀನ ಮಾಡಲಾಗುತ್ತದೆ ಎಂದು ಸರ್ಕಾರಿ ಶಾಲೆಗಳ ವಿಲೀನಕ್ಕೆ ಸರ್ಕಾರ ಕಾರಣ ಹೇಳುತ್ತಿದೆ. ಶಿಕ್ಷಣ ಸಚಿವರು ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಂತೆ ಹಾಗೂ ಸರ್ಕಾರವೇ ಒಪ್ಪಿಕೊಂಡಂತೆ, ಶಾಲೆಗಳಲ್ಲಿ ಮೂಲ ಸೌಕರ್ಯದ ಕೊರತೆ ಇದೆ. ಹಾಗಾಗಿ, ಕಳಪೆ ಗುಣಮಟ್ಟ ಇರುವ ನೆಪ ಹೇಳಿಕೊಂಡು ಶಾಲೆ ಮುಚ್ಚದಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸ್ನೇಹಾ ಕಟ್ಟಿಮನಿ ಮಾತನಾಡಿ, ಸರ್ಕಾರದ ಅಂಕಿ ಅಂಶಗಳ ಪ್ರಕಾರ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 35,000 ಶಿಕ್ಷಕರ ಕೊರತೆ ಇದೆ. 4767 ಶಾಲೆಗಳು ಒಬ್ಬರೇ ಶಿಕ್ಷಕರಿರುವ ಶಾಲೆಗಳಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಬ್ಬ ಸಹ ಶಿಕ್ಷಕರು ಇಲ್ಲದ ಶಾಲೆಗಳಿವೆ. ಒಂದು ಶಾಲೆಗೆ 5 ಮತ್ತು 10 ಮಕ್ಕಳು ದಾಖಲಾಗುತ್ತಿರುವ ಅಂಶಗಳು ಬೆಳಕಿಗೆ ಬಂದಿದೆ. ಈ ಎಲ್ಲ ಅಂಶಗಳನ್ನು ನೋಡಿದಾಗ ಸಹಜವಾಗಿ ಮೂಡುವ ಪ್ರಶ್ನೆ, ಈ ಕೊರತೆಗಳನ್ನು ಸರಿಪಡಿಸಲು, ಸರ್ಕಾರಿ ಶಾಲೆಗಳ ಗುಣಮಟ್ಟ ಏರಿಸಲು ಸರ್ಕಾರಗಳು ಏಕೆ ಕ್ರಮ ವಹಿಸುತ್ತಿಲ್ಲ? ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಏಕೆ ಆದ್ಯತೆ ಕೊಡುತ್ತಿಲ್ಲ? ಶಾಲೆಗಳ ವಿಲೀನ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಆಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಎಂದು ಆಗ್ರಹಿಸಿದರು.

Advertisement

ಕಡಿಮೆ ದಾಖಲಾತಿ ಇರುವ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವ ಮೂಲಕ ಮಾದರಿ ಶಾಲೆ ರಚಿಸುತ್ತೇವೆ ಎಂಬ ಸರ್ಕಾರದ ನಿಲುವಿನ ಹಿಂದೆ ಶಾಶ್ವತವಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರವಿದೆ . ಈ ಅಪಾಯವನ್ನು ನಾವು ಕಡೆಗಣಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಕೈಬಿಡಬೇಕು. ಆರ್ಥಿಕ ಸ್ವಾಯತ್ತತೆ ಹೆಸರಿನಲ್ಲಿ ವಿದ್ಯಾರ್ಥಿ ಶುಲ್ಕ ಕಾಲೇಜುಗಳ ಅಭಿವೃದ್ಧಿ ನಿಧಿ ಯಾಗಿ ಬಳಸುವ ನಿರ್ಧಾರವನ್ನು ಕೂಡಲೇ ಕೈಬಿಡಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿ, ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜ್‌ನ್ನು ಸ್ಥಾಪಿಸಬೇಕು. ಜಿಲ್ಲೆಯಲ್ಲಿ ಪ್ರೌಢ ಹಾಗೂ ಪದವಿ ಶಿಕ್ಷಣಕ್ಕೆ ಪ್ರತ್ಯೇಕವಾಗಿ ಕಟ್ಟಡ ನಿರ್ಮಿಸಬೇಕು. ಹಳ್ಳಿಗಳಿಂದ ನಿತ್ಯವೂ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ವಿಜಯಪುರ ನಗರಕ್ಕೆ ಆಗಮಿಸುವ ಕಾರಣ ಸೂಕ್ತ ಬಸ್‌ ಸೌಲಭ್ಯ ಒದಗಿಸಬೇಕು. 2022-23ನೇ ಸಾಲಿನ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶ ಆರಂಭಿಸಿ ವ್ಯವಸ್ಥೆ ಒದಗಿಸಿಬೇಕೆಂದು ಒತ್ತಾಯಿಸಿದರು. ಕಾವೇರಿ ರಜಪೂತ, ದೀಪಾ ವಡ್ಡರ, ಅಕ್ಷತಾ, ಪೂಜಾ, ರೇಣುಕಾ, ಅಮೃತಾ ಸೇರಿದಂಥೆ ಇತರರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next