Advertisement

ಪ್ರಭಾವಿ ಖಾತೆ ಜತೆಗೆ ಕೊಠಡಿಗೂ ಪಟ್ಟು

11:55 PM Feb 03, 2020 | Lakshmi GovindaRaj |

ಬೆಂಗಳೂರು: ಒಂದೆಡೆ ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳು ಪೈಪೋಟಿ ನಡೆಸುತ್ತಿದ್ದರೆ ಇನ್ನೊಂದೆಡೆ ಪ್ರಭಾವಿ ಖಾತೆಗಳಿಗೆ ಕೆಲ ನಾಯಕರು ಪಟ್ಟು ಹಿಡಿಯುತ್ತಿರುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇನ್ನಷ್ಟು ಒತ್ತಡ ಸೃಷ್ಟಿಸಿದಂತಿದೆ.

Advertisement

ಈ ಹಿಂದೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ನಿರ್ವಹಿಸಿದ್ದ ಜಲಸಂಪನ್ಮೂಲ ಖಾತೆ ಮಾತ್ರವಲ್ಲದೇ ವಿಧಾನಸೌಧದಲ್ಲಿ ಅವರು ಕಾರ್ಯ ನಿರ್ವಹಿಸುತ್ತಿದ್ದ ಕಚೇರಿಯನ್ನೇ ಹಂಚಿಕೆ ಮಾಡಬೇಕು ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಲಸಂಪನ್ಮೂಲ ಖಾತೆ ನಿಭಾಯಿಸಿದ್ದ ಬಸವರಾಜ ಬೊಮ್ಮಾಯಿ ಅವರು ಇದೇ ಖಾತೆಗಾಗಿ ಪಟ್ಟು ಹಿಡಿದಿದ್ದು, ಯಡಿಯೂರಪ್ಪ ಅವರಿಗೆ ತಲೆನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.

ಅಂತಾರಾಜ್ಯ ನದಿ ವಿವಾದಗಳ ನಿರ್ವಹಣೆ ಜತೆಗೆ ರಾಜ್ಯದ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವ ಮಹತ್ತರ ಜವಾಬ್ದಾರಿಯಿರುವ ಖಾತೆಯನ್ನು ಸಮರ್ಥರಿಗೆ ನೀಡಬೇಕು ಎಂದು ಬಿಜೆಪಿ ಶಾಸಕರು ಒತ್ತಡ ಹೇರುತ್ತಿದ್ದಾರೆ. ಹಾಗಾಗಿ ಜಲಸಂಪನ್ಮೂಲ ಖಾತೆಯನ್ನು ಸದ್ಯಕ್ಕೆ ತಮ್ಮ ಬಳಿಯೇ ಇರಿಸಿಕೊಳ್ಳಲು ಮುಖ್ಯಮಂತ್ರಿಗಳು ಚಿಂತಿಸಿದ್ದಾರೆ ಎಂದು ಹೇಳಲಾಗಿದೆ.

ಡಿ.ಕೆ.ಶಿವಕುಮಾರ್‌ ಈ ಹಿಂದೆ ಬಳಸಿದ್ದ ಕಚೇರಿಯನ್ನು ಸದ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್‌ ಅವರಿಗೆ ಹಂಚಿಕೆ ಮಾಡಲಾಗಿದೆ. ಆ ಕಚೇರಿಯ ಮೇಲೆ ಕಣ್ಣಿಟ್ಟಿರುವ ರಮೇಶ್‌ ಜಾರಕಿಹೊಳಿ ಅವರು ಇತ್ತೀಚೆಗೆ ಆ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next