Advertisement

25ರಂದು ಅಮೃತ ಭಾರತಿಗೆ ಕನ್ನಡದ ಆರತಿ: ಶೈಲಜಾ

06:04 PM Jun 22, 2022 | Team Udayavani |

ಮಂಡ್ಯ: ಭಾರತದ 75ನೇ ಸ್ವಾತಂತ್ರ್ಯೋತ್ಸವದ ಭಾಗವಾಗಿ ಜಿಲ್ಲೆಯಲ್ಲಿ ಜೂ.25ರಂದು ಅಮೃತ ಭಾರತಿಗೆ ಕನ್ನಡದ ಆರತಿ ಶೀರ್ಷಿಕೆಯಡಿ ಅಮೃತ ಮಹೋತ್ಸವ ಆಚರಿಸಲಾಗುತ್ತಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೊಂದಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಅಪರ ಜಿಲ್ಲಾಧಿ ಕಾರಿ ವಿ.ಆರ್‌. ಶೈಲಜಾ ಹೇಳಿದರು.

Advertisement

ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಶೀರ್ಷಿಕೆಯಡಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಜಿಲ್ಲೆಯಲ್ಲಿ ಆಚರಿಸುವ ಸಂಬಂಧ ನಡೆಸಲಾದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೆನಪಿನಾರ್ಥ: ಭಾರತವು ದಾಸ್ಯದ ಸಂಕೋಲೆಯಿಂದ ಬಿಡುಗಡೆಯಾದ 75ನೇ ವರ್ಷದ ಅಮೃತ ಮಹೋತ್ಸವದ ಹೊತ್ತಿನಲ್ಲಿ ದೇಶದೆಲ್ಲೆಡೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮುಂದುವರೆದ ಭಾಗವಾಗಿ ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಸಭಾಂಗಣ ಹಾಗೂ ಮದ್ದೂರು ತಾಲೂಕಿನ ಶಿವಪುರ ಸತ್ಯಾಗ್ರಹಸೌಧದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ನೆನಪಿನಾರ್ಥವಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಅಂದು ಬೆಳಗ್ಗೆ 9ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ನಾಲ್ವಡಿ ಕೃಷ್ಣರಾಜ ಒಡೆಯರ ಸಭಾಂಗಣದವರೆಗೆ ಕನ್ನಡಾಂಬೆಯ ಕಂಚಿನ ವಿಗ್ರಹ ಒಳಗೊಂಡ ಮೆರವಣಿಗೆ ಸಾಗಲಿದೆ. ಮದ್ದೂರಿನ ನರಸಿಂಹಸ್ವಾಮಿ ದೇವಸ್ಥಾನದಿಂದ ಶಿವಪುರ ಸತ್ಯಾಗ್ರಹಸೌಧದವರೆಗೆ ಕನ್ನಡಾಂಬೆಯ ಭಾವಚಿತ್ರವನ್ನೊಳಗೊಂಡ ಮೆರವಣಿಗೆ ಸಾಗಲಿದೆ ಎಂದು ಹೇಳಿದರು.

ವೇದಿಕೆಗೆ ವಿಶೇಷ ಅಲಂಕಾರ: ಮುಖ್ಯ ಭಾಷಣಕಾರರಾಗಿ ರಾಜೇಶ್‌ ಅಧಾರ್‌ ಹಾಗೂ ಪಿ.ವಿ.ವಸಂತ್‌ಕುಮಾರ್‌ ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಒಳಗೊಂಡಂತೆ ಗಣ್ಯರನ್ನು ಆಹ್ವಾನಿಸಲಾಗುವುದು. ಎಂದಿನಂತೆ ಮೆರವಣಿಗೆಯಲ್ಲಿ ಕಲಾತಂಡಗಳೊಂದಿಗೆ ಎನ್‌ಸಿಸಿ ವಿದ್ಯಾರ್ಥಿಗಳು, ನೆಹರು ಯುವ ಕೇಂದ್ರ, ಶಾಲಾ ಕಾಲೇಜು ಮಕ್ಕಳು ಭಾಗವಹಿಸಲಿದ್ದಾರೆ. ವೇದಿಕೆಯನ್ನು ತಳಿರು ತೋರಣದಿಂದ ಸಿಂಗರಿಸಲಾಗುವುದು ಎಂದು ತಿಳಿಸಿದರು.

Advertisement

ಹಲವು ಕಾರ್ಯಕ್ರಮ: ವೇದಿಕೆ ಕಾರ್ಯಕ್ರಮದಲ್ಲಿ ಸ್ವತಂತ್ರ ಅಮೃತ ಮಹೋತ್ಸವದ ಸಂಕಲ್ಪ ಪ್ರತಿಜ್ಞಾ ವಿಧಿ ಬೋಧನೆ ಹಾಗೂ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಗುವುದು. ಸ್ವಾತಂತ್ರ್ಯ ಹೋರಾಟದ ಸ್ಮರಣೆ, ಸ್ಮಾರಕ ಶಿಲಾಫಲಕ ಅನಾವರಣ, ದೇಶಭಕ್ತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಉಪವಿಭಾಗಾಧಿಕಾರಿ ಐಶ್ವರ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಉದಯ್‌ಕುಮಾರ್‌, ನಗರಾಭಿವೃದ್ಧಿ ಕೋಶ ಯೋಜನಾಧಿಕಾರಿ ತುಷಾರಮಣಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್‌.ರಾಜಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಎನ್‌. ಧನಂಜಯ, ಜಿಲ್ಲೆಯ ವಿವಿಧ ಇಲಾಖೆಗಳ  ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next