ಬೆಂಗಳೂರು: ರಾಮನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ರಾಮನಗರ ಮುಖಂಡರ ಜತೆ ಸಮಾಲೋಚನೆ ನಡೆಸಿದ ಅವರು, ಅನಿತಾ ಕುಮಾರಸ್ವಾಮಿಯವರ ಸ್ಪರ್ಧೆಗೆ ಒಪ್ಪಿಗೆ ಪಡೆದು ಅ.15 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ರಾಮನಗರದಲ್ಲಿ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಪುತ್ರ ಚಂದ್ರಶೇಖರ್ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಬುಧವಾರ ರಾತ್ರಿ ಪಕ್ಷದ ಕಚೇರಿಯಲ್ಲಿ ರಾಮನಗರ ಮುಖಂಡರ ಸಭೆ ನಡೆಸಿದ ಅವರು, ರಾಮನಗರದಿಂದ ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಅಥವಾ ಲಿಂಗಪ್ಪ ಪುತ್ರ ಸ್ಪರ್ಧೆ ಮಾಡುವ ಸಾಧ್ಯತೆ ಇರುವುದರಿಂದ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು. ನಿರ್ಲಕ್ಷ್ಯ ಮಾಡಬಾರದು ಎಂದು ತಾಕೀತು ಮಾಡಿದರು.
ರಾಮನಗರದ ಸಭೆಯಲ್ಲಿ ವ್ಯಕ್ತವಾದ ಅಸಮಾಧಾನದ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪಿಸಿ ಆ ರೀತಿಯ ಬಹಿರಂಗ ಅಸಮಾಧಾನ ಸರಿಯಲ್ಲ. ಏನೇ ಸಮಸ್ಯೆ ಇದ್ದರೆ ನನ್ನ ಬಳಿ ನೇರವಾಗಿ ಬಂದು ಚರ್ಚಿಸಿ ಎಂದು ಸೂಚಿಸಿದರು ಎಂದು ತಿಳಿದು ಬಂದಿದೆ.
ಅನಿತಾ ಕುಮಾರಸ್ವಾಮಿಯವರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಎಲ್ಲ ಮುಖಂಡರೂ ಹಾಜರಿದ್ದು ಒಗ್ಗಟ್ಟು ಪ್ರದರ್ಶಿಸಬೇಕು. ತಕ್ಷಣದಿಂದಲೇ ಪ್ರಚಾರದಲ್ಲಿ ತೊಡಗಬೇಕು ಎಂದು ಮುಖಂಡರಿಗೆ ತಿಳಿಸಿದರು ಎಂದು ಹೇಳಲಾಗಿದೆ