Advertisement

ಕೊಣಜೆ : ಲಂಚ ಸ್ವೀಕಾರ ಆರೋಪ ಸಾಬೀತು :  ಪ್ರೊ.ಡಾ. ಅನಿತಾ ರವಿಶಂಕರ್ ಗೆ ಐದು ವರ್ಷ ಶಿಕ್ಷೆ

06:15 PM Jul 09, 2021 | Team Udayavani |

ಕೊಣಜೆ : ದಿನಾಂಕ 04-12-2012ರಂದು ಪ್ರಕರಣದ ಪಿರ್ಯಾದಿ ಪಿ.ಹೆಚ್.ಡಿ. ವಿದ್ಯಾರ್ಥಿನಿ ಪ್ರೇಮ ಡಿ’ಸೋಜ ಎಂಬವರಿಂದ ಅವರ ಪ್ರಭಂದ ಅಂಗೀಕಾರ ಆಗಬೇಕಾದರೆ ಮೈಸೂರಿನಿಂದ ಬರುವ ಬಾಹ್ಯ ಪರಿವೀಕ್ಷಕರ ಖರ್ಚಿನ ಬಾಬ್ತು ರೂ. 16,800/- ಲಂಚದ ಹಣಕ್ಕೆ ಬೇಡಿಕೆ ಇಟ್ಟು ಮುಂಗಡ ಹಣ ರೂ. 5,000/- ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ದಾಳಿ ಮಾಡಿ ಪ್ರಸ್ತುತ ಕೊಣಾಜೆ ಮಂಗಳೂರು ಯುನಿವರ್ಸಿಟಿಯ ಸಮಾಜ ಶಾಸ್ತ್ರದ ಸಹಾಯಕ ಪ್ರೊಪೆಸರ್ ಆಗಿರುವ ಡಾ. ಅನಿತಾ ರವಿಶಂಕರ್ ರವರನ್ನು ಬಂದಿಸಿದ್ದರು.

Advertisement

ಸದ್ರಿ ಆರೋಪಿ ಮೊದಲು ರೂ. 10,000/-, ನಂತರ ರೂ 4,000/- ಮತ್ತು ತದನಂತರ ರೂ. 16,800/- ಕ್ಕೆ ಪಿರ್ಯಾದಿಯ ಬಳಿ ಬೇಡಿಕೆ ಇಟ್ಟಿದ್ದಳು ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆಗೆ ಒಳ ಪಡಿಸಲಾಗಿತ್ತು.

ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಭೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 7 ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 2 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ. ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ.ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳುಗಳ ಸಾದಾ ಸಜೆ ಅನುಭವಿಸಬೇಕೆಂದು ದಿನಾಂಕ 09-07-2021 ರಂದು ನ್ಯಾಯಾಲಯ ಆದೇಶಿಸಿದೆ.

ಆದರೆ ಎರಡೂ ಅಪರಾಧಕ್ಕೆ ಸಂಬಂದಿಸಿದ ಶಿಕ್ಷೆಗಳನ್ನು ಅಪರಾಧಿ ಜೊತೆಯಾಗಿ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಉಮೇಶ್ ಜಿ. ಶೇಟ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next