Advertisement

ಮತ್ತೆ ಯಮರೂಪಿಯಾದ ಬಿಬಿಎಂಪಿ ಕಸದ ಲಾರಿ: ಬೈಕ್ ಗೆ ಲಾರಿ ಢಿಕ್ಕಿ ಹೊಡೆದು ಮಹಿಳೆ ಸಾವು

02:34 PM Apr 19, 2022 | Team Udayavani |

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಢಿಕ್ಕಿಯಾದ ಪರಿಣಾಮ ದ್ವಿಚಕ್ರವಾಹನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ದೇಹದ ಮೇಲೆ ಲಾರಿ ಚಕ್ರ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಆರ್‌. ಆರ್‌.ನಗರ ನಿವಾಸಿ ಪದ್ಮಿನಿ (40) ಮೃತ ದುರ್ದೈವಿ. ಖಾಸಗಿ ಬ್ಯಾಂಕ್‌ವೊಂದರ ಉಪ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪದ್ಮಿನಿ ಕೆಲಸ ಮುಗಿಸಿ ದ್ವಿಚಕ್ರವಾಹನದಲ್ಲಿ ಮನೆಗೆ ತೆರಳುವಾಗ ನಾಯಂಡಹಳ್ಳಿ ರೈಲ್ವೆ ಅಂಡರ್‌ ಪಾಸ್‌ ಬಳಿ ಈ ದುರ್ಘ‌ಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆ 7.10ರ ಸುಮಾರಿಗೆ ನಾಯಂಡಹಳ್ಳಿ ರಿಂಗ್‌ ರಸ್ತೆಯಲ್ಲಿ ನಾಗರಬಾವಿ ಕಡೆಯಿಂದ ನಾಯಂಡಹಳ್ಳಿ ಕಡೆಗೆ ತೆರಳುತ್ತಿದ್ದ ಬಿಬಿಎಂಪಿ ಕಸದ ಲಾರಿ, ನಾಯಂಡಹಳ್ಳಿ ರೈಲ್ವೆ ಅಂಡರ್‌ ಪಾಸ್‌ ಬಳಿ ವೇಗವಾಗಿ ಬಂದು ಪದ್ಮಿನಿ ಅವರು ಚಲಾಯಿಸುತ್ತಿದ್ದ ದ್ವಿಚಕ್ರವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರವಾಹನ ಸಹಿತ ಪದ್ಮಿನಿ ರಸ್ತೆಗೆ ಬಿದ್ದಿದ್ದು, ಈ ವೇಳೆ ಕಸದ ಲಾರಿಯ ಮುಂದಿನ ಎಡಭಾಗದ ಚಕ್ರ ಪದ್ಮಿನಿ ಅವರ ಸೊಂಟದ ಮೇಲೆ ಹರಿದಿದೆ.

ಇದನ್ನೂ ಓದಿ: ಅಣ್ಣ-ತಂಗಿ ಪ್ರಯಾಣಿಸುತ್ತಿದ್ದ ಬೈಕ್ ಗೆ ಬಸ್ ಢಿಕ್ಕಿ: ಚಕ್ರ ಹರಿದು ಅಣ್ಣನ ಎದುರೇ ತಂಗಿ ಸಾವು

ಹೀಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಪದ್ಮಿನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಅಪಘಾತದ ಸುದ್ದಿ ತಿಳಿದು ಬ್ಯಾಟರಾಯನಪುರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ.

Advertisement

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತಕ್ಕೆ ಬಿಬಿಎಂಪಿ ಕಸದ ಲಾರಿ ಚಾಲಕನ ವೇಗದ ಚಾಲನೆ ಹಾಗೂ ಅಜಾಗರೂಕತೆಯೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಅಪಘಾತದ ಬಳಿಕ ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಲಾರಿಯನ್ನು ಜಪ್ತಿ ಮಾಡಿದ್ದು, ಚಾಲಕನ ಬಂಧನಕ್ಕೆ ಬಲೆ ಬೀಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next