Advertisement

ಬಿಜೆಪಿಗೆ ತಕ್ಕ ಉತ್ತರ ಕೊಡಿ; ಸಚಿವರಿಗೆ ಕೆಪಿಸಿಸಿ ಖಡಕ್‌ ಸೂಚನೆ

06:00 AM Aug 20, 2017 | Team Udayavani |

ಬೆಂಗಳೂರು: ಅತ್ತ ಬಿಜೆಪಿ, ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನೇ ಮುಂದಿರಿಸಿಕೊಂಡು ಹೋರಾಟಕ್ಕೆ ಸಜ್ಜಾಗುತ್ತಿರುವಾಗಲೇ ಕಾಂಗ್ರೆಸ್‌ ಕೂಡ ಮಾಧ್ಯಮಗಳ ಮುಂದೆ ಕೇಂದ್ರ ಸರ್ಕಾರದ ವೈಫ‌ಲ್ಯಗಳನ್ನು ಬಿಚ್ಚಿಡಲು ತಯಾರಾಗುತ್ತಿದೆ.

Advertisement

ಇನ್ನು ಮುಂದೆ ತಿಂಗಳಿಗೆ ಎರಡು ಸಚಿವರು ಕೆಪಿಸಿಸಿ ಕಚೇರಿಗೆ ಬಂದು ಪತ್ರಿಕಾಗೋಷ್ಠಿ ನಡೆಸುವ ಮೂಲಕ ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಕೇಂದ್ರ ಸರ್ಕಾರದ ವೈಫ‌ಲ್ಯಗಳನ್ನು ಜನರ ಮುಂದಿಡುವಂತೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಎಲ್ಲ ಸಚಿವರಿಗೆ ಪತ್ರ ಬರೆದಿರುವ ಅವರು, ನಾಲ್ಕು ವರ್ಷದಲ್ಲಿ ರಾಜ್ಯ ಸರ್ಕಾರ ಮಾಡಿರುವ ಸಾಧನೆಗಳ ಬಗ್ಗೆ ವಿರೋಧ ಪಕ್ಷ ಮಾಡುತ್ತಿರುವ ಟೀಕೆಗಳಿಗೆ ತಿರುಗೇಟು ನೀಡಿ, ರಾಜ್ಯದ ಜನತೆಗೆ ವಾಸ್ತವ ತಿಳಿಸುವಂತೆ ಹೇಳಿದ್ದಾರೆ.

ಈ ಹಿಂದೆಯೂ ತಿಂಗಳಲ್ಲಿ ಒಂದು ಬಾರಿಯಾದರೂ ಪಕ್ಷದ ಕಚೇರಿಗೆ ಆಗಮಿಸಿ ಕಾರ್ಯಕರ್ತರ ಅಹವಾಲು ಸ್ವೀಕರಿಸುವಂತೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಸಚಿವರಿಗೆ ಪತ್ರ ಬರೆದಿದ್ದರು. ಆದರೆ, ಬಹುತೇಕ ಸಚಿವರು ಬಂದಿರಲಿಲ್ಲ. ಇದೀಗ ಕಟ್ಟುನಿಟ್ಟಾಗಿ ಸೂಚನೆ ಪಾಲಿಸಲು ನಿರ್ದೇಶನ ನೀಡಲಾಗಿದೆ.

ತಿಂಗಳಾಂತ್ಯಕ್ಕೆ ಬೂತ್‌ ಕಮಿಟಿ ಪೂರ್ಣ
ಬಿಜೆಪಿ ವಿಸ್ತಾರಕ ಕಾರ್ಯಕ್ರಮಕ್ಕೆ ಪ್ರತಿಯಾಗಿ ರೂಪುಗೊಂಡ ಕಾಂಗ್ರೆಸ್‌ನ ಬೂತ್‌ ಕಮಿಟಿ ರಚನೆಯನ್ನು ತಿಂಗಳಾಂತ್ಯಕ್ಕೆ ಪೂರ್ಣಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಸೂಚನೆ ನೀಡಿದ್ದಾರೆ. ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿದ ಅವರು, ಆಗಸ್ಟ್‌ 30 ರೊಳಗೆ ಎಲ್ಲ ಜಿಲ್ಲೆಗಳಲ್ಲಿಯೂ ಬೂತ್‌ ಸಮಿತಿ, ಪಂಚಾಯತ್‌ ಹಾಗೂ ವಾರ್ಡ್‌ಗಳ ಸಮಿತಿ ನೇಮಕ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಸೆಪ್ಟಂಬರ್‌ನಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ 66 ಸಾವಿರ ಬೂತ್‌ ಸಮಿತಿ ಸದಸ್ಯರ ಸಮಾವೇಶ ಉದ್ದೇಶಿಸಿ ಮಾತನಾಡುವ ಯೋಜನೆಯನ್ನು ಕಾಂಗ್ರೆಸ್‌ ಹಮ್ಮಿಕೊಂಡಿದೆ.

ಕೆಲವು ಜಿಲ್ಲೆಗಳಲ್ಲಿ ಇನ್ನೂ ಶೇಕಡಾ 50 ರಷ್ಟು ಬೂತ್‌ ಮಟ್ಟದ ಸಮಿತಿಗಳ ರಚನೆಯಾಗದಿರುವ ಬಗ್ಗೆ ಪರಮೇಶ್ವರ್‌ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲಸ ಮಾಡಲು ಇಷ್ಟವಿಲ್ಲದವರು ಹುದ್ದೆ ಬಿಟ್ಟು ಹೋಗಬಹುದು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರತಿ ತಿಂಗಳಲ್ಲಿ ಒಂದು ವಾರ ಪದಾಧಿಕಾರಿಗಳು ತಮಗೆ ವಹಿಸಿರುವ ಜಿಲ್ಲೆಯಲ್ಲಿಯೇ ವಾಸ್ತವ್ಯ ಹೂಡಿ, ಪಕ್ಷದ ಸಂಘಟನೆ ಹಾಗೂ ರಾಜ್ಯ ಸರ್ಕಾರದ ನಾಲ್ಕು ವರ್ಷಗಳ ಸಾಧನೆ ಹಾಗೂ ಕೇಂದ್ರ ಸರ್ಕಾರದ ಮೂರು ವರ್ಷಗಳ ವೈಫ‌ಲ್ಯವನ್ನು ಜಿಲ್ಲಾ ಮತ್ತು ಬ್ಲಾಕ್‌ ಮಟ್ಟದ ಅಧ್ಯಕ್ಷರ ಸಹಕಾರದೊಂದಿಗೆ ಭೂತ್‌ ಸಮಿತಿ ಸದಸ್ಯರ ಮೂಲಕ ಜನರಿಗೆ ತಲುಪಿಸುವಂತೆ ಸೂಚನೆ ನೀಡಿದ್ದಾರೆ.

Advertisement

ಯಾವ ಯಾವ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ಸರಿಯಾಗಿ ಕೆಲಸ ಮಾಡುವುದಿಲ್ಲ ಅಂತವರ ಬದಲಾವಣೆ ಮಾಡುವಂತೆ ಶೀಘ್ರವೇ ಕೆಪಿಸಿಸಿಗೆ ವರದಿ ನೀಡಬೇಕೆಂದು ಪರಮೇಶ್ವರ್‌ ಸೂಚಿಸಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್‌ ಗುಂಡೂರಾವ್‌ ಮತ್ತು ಎಸ್‌.ಆರ್‌. ಪಾಟೀಲ್‌, ಜಿಲ್ಲಾ ಘಟಕಗಳ ಅಧ್ಯಕ್ಷರು ಸಭೆಯಲ್ಲಿ ಹಾಜರಿದ್ದರು.

ಜಿಲ್ಲಾಧ್ಯಕ್ಷರ ಬದಲಾವಣೆಗೆ ನಿರ್ಧಾರ ?
ವಿಧಾನಸಭೆ ಚುನಾವಣೆಗಾಗಿ ಪಕ್ಷದ ಸಂಘಟನೆಯನ್ನು ಚುರುಕುಗೊಳಿಸಲು ನಿರ್ಧರಿಸಿರುವ ಪರಮೇಶ್ವರ್‌, 20ಕ್ಕೂ ಹೆಚ್ಚು ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಎರಡು ಹುದ್ದೆ ಹೊಂದಿರುವವರು ಮತ್ತು ಸಕ್ರಿಯರಲ್ಲದ ಜಿಲ್ಲಾಧ್ಯಕ್ಷರನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಇದಕ್ಕೆ ಪೂರಕ ಎನ್ನುವಂತೆ ಶನಿವಾರ ಹಾಸನ, ಮಂಡ್ಯ, ಬಳ್ಳಾರಿ ಹಾಗೂ ವಿಜಯಪುರ ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ ಶಾಸಕರ ಜೊತೆ ಪರಮೇಶ್ವರ್‌ ಸಭೆ ನಡೆಸಿದರು. ಹಾಸನ ಜಿಲ್ಲಾಧ್ಯಕ್ಷ ಗಂಡಸಿ ಶಿವರಾಮ್‌ ಕೆಪಿಸಿಸಿ ಉಪಾಧ್ಯಕ್ಷರಾಗಿದ್ದಾರೆ, ಮಂಡ್ಯ ಜಿಲ್ಲಾಧ್ಯಕ್ಷ ಆತ್ಮಾನಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ, ವಿಜಯಪುರ ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲ್‌ ಕೆಪಿಸಿಸಿ ಕಾರ್ಯದರ್ಶಿಯಾಗಿ ಹಾಗೂ ಬಳ್ಳಾರಿ ಜಿಲ್ಲಾಧ್ಯಕ್ಷ ಆಂಜನೇಯಲು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿರುವುದರಿಂದ ಅವರನ್ನು ಜಿಲ್ಲಾಧ್ಯಕ್ಷ ಹುದ್ದೆಯಿಂದ ತೆರವುಗೊಳಿಸಲು ಪರಮೇಶ್ವರ್‌ ಜಿಲ್ಲಾ ಶಾಸಕರು ಮತ್ತು ಮುಖಂಡರ ಜೊತೆ ಚರ್ಚಿಸಿದ್ದು, ಶೀಘ್ರವೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಮಂಡ್ಯ ಜಿಲ್ಲಾ ಮುಖಂಡರ ಸಭೆಗೆ ಶಾಸಕ ಅಂಬರೀಶ್‌ ಮಾಜಿ ಸಂಸದೆ ರಮ್ಯಾ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯೆ ಮಲ್ಲಾಜಮ್ಮ ಗೈರು ಹಾಜರಾಗಿದ್ದರು.

ಬಿಜೆಪಿಯವರು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ತಾನೆ ನಮ್ಮನ್ನು ಜೈಲಿಗೆ ಕಳುಹಿಸುವುದು. ರಾಜ್ಯದಲ್ಲಿ ಬಿಜೆಪಿ ಸ್ಥಿತಿ ಕಂಡು ಅಮಿತ್‌ ಶಾ ಬೈದಿರುವುದರಿಂದ ಯಡಿಯೂರಪ್ಪ ಹತಾಶರಾಗಿದ್ದಾರೆ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್‌ ವಿಚಾರದಲ್ಲಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ನೀಡಿರುವ ದೂರಿಗೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿಯವರೇ ಅವರ ವಿರುದ್ಧ ದೂರು ದಾಖಲಿಸಿರಬಹುದು.
– ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಕಾರ್ಯಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next