Advertisement

ಕಾಂಗ್ರೆಸ್‌ ಪಕ್ಷಕ್ಕೆ ಅದೇ ಧಾಟಿಯಲ್ಲಿ ಪ್ರತ್ಯುತ್ತರ

06:10 AM Dec 11, 2017 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರನ್ನು ಅನಗತ್ಯವಾಗಿ ಕೀಳು ಪದಗಳಿಂದ ಟೀಕಿಸುತ್ತಾ ನಕರಾತ್ಮಕ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್‌ಗೆ ಅದೇ ಧಾಟಿಯಲ್ಲಿ ಪ್ರತ್ಯುತ್ತರ ನೀಡಲು ಬಿಜೆಪಿ ಮುಂದಾಗಿದೆ.

Advertisement

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸಂಜೆ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ನೇತೃತ್ವದಲ್ಲಿ ನಡೆದ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಈ ಕುರಿತು ಸುದೀರ್ಘ‌ ಚರ್ಚೆ ನಡೆಸಲಾಗಿದೆ. ಬಿಜೆಪಿ ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದರಿಂದ ಕಾಂಗ್ರೆಸ್‌ ನಾಯಕರು ವಿಚಲಿತರಾಗಿ ಪ್ರಧಾನಿ ಮತ್ತು ಯಡಿಯೂರಪ್ಪ ಅವರ ವಿರುದ್ಧ ಏಕವಚನ, ಕೀಳು ಪದಗಳ ಬಳಕೆ ಮಾಡುತ್ತಿದ್ದಾರೆ. ಈ ಟೀಕೆಗಳಿಗೆ ಅದೇ ಧಾಟಿಯಲ್ಲಿ ಉತ್ತರ ನೀಡಲು ಸಭೆಯಲ್ಲಿ ಸೂಚಿಸಲಾಗಿದೆ. ಇದರ ಜತೆಗೆ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಗಳನ್ನು ಜನರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ತಿಳಿಸಲು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮುರಳೀಧರರಾವ್‌ ಅವರು ಪಕ್ಷದ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ.

ಗುಜರಾತ್‌ ಚುನಾವಣಾ ಫ‌ಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳಾಗುವ ಸಾಧ್ಯತೆ ಇದ್ದು, ಅಲ್ಲಿ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಅನ್ಯ ಪಕ್ಷಗಳಿಂದ ಬಿಜೆಪಿ ಸೇರುವವರ ಸಂಖ್ಯೆ ಹೆಚ್ಚಾಗಬಹುದು. ಈ ಸಂದರ್ಭದಲ್ಲಿ ಗೊಂದಲವಾಗಿ ಪಕ್ಷದ ನಿಷ್ಠಾವಂತರು ಬೇಸರಗೊಳ್ಳದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಕೋರ್‌ ಕಮಿಟಿ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷ ಗೆಲ್ಲುವ ಸಾಮರ್ಥ್ಯ ಹೊಂದಿಲ್ಲದ ಕಡೆ ಪಕ್ಷ ಸೇರ್ಪಡೆಗೆ ಆದ್ಯತೆ ನೀಡುವಂತೆ ಮುರಳೀಧರರಾವ್‌ ಅವರು ಸೂಚಿಸಿದ್ದಾರೆ.

ಪ್ರಸ್ತುತ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪರಿವರ್ತನಾ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ, ಈ ಹಿಂದೆ ನಿರ್ಧರಿಸಿದಂತೆ ರಾಜ್ಯ ನಾಯಕರು ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಈ ಕಾರಣದಿಂದಾಗಿ ಯಾತ್ರೆಯ ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಎಲ್ಲಾ ನಾಯಕರೂ 10 ದಿನಗಳನ್ನು ಯಾತ್ರೆಗೆ ಮೀಸಲಿಡಬೇಕು. ಅದಕ್ಕಾಗಿ ದಿನಾಂಕಗಳನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಗಳಿಗೆ ನೀಡುವಂತೆ ಸೂಚಿಸಲು ಮತ್ತು ಯಾತ್ರೆ ಸಂದರ್ಭದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ನವಶಕ್ತಿ ಸಮಾವೇಶ:
ಪಕ್ಷದ ಪರಿವರ್ತನಾ ಯಾತ್ರೆ ಪೂರ್ಣಗೊಂಡ ಕಡೆ ನವಶಕ್ತಿ ಸಮಾವೇಶಗಳನ್ನು ನಡೆಸಲು ಈಗಾಗಲೇ ತೀರ್ಮಾನಿಸಿದ್ದು, ಇದಕ್ಕೆ ರಾಷ್ಟ್ರೀಯ ನಾಯಕರನ್ನು ಕರೆಸುವ ಬಗ್ಗೆ ಚರ್ಚಿಸಲಾಗಿದೆ. ಪರಿವರ್ತನಾ ಯಾತ್ರೆಯಲ್ಲಿ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳಬೇಕಾಗಿತ್ತಾದರೂ ದಿನಗಳು ಹೊಂದಾಣಿಕೆಯಾಗದ ಕಾರಣ ಇದುವರೆಗೆ ಒಂದಿಬ್ಬರು ಹೊರತುಪಡಿಸಿ ಬೇರೆ ಯಾರೂ ಬಂದಿಲ್ಲ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಅವರ ದಿನಾಂಕ ಹೊಂದಾಣಿಕೆ ಮಾಡಿಕೊಂಡು ನವಶಕ್ತಿ ಸಮಾವೇಶಗಳ ದಿನಾಂಕ ಮತ್ತು ಸ್ಥಳ ನಿಗದಿ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

Advertisement

ಅರುಣ್‌ ಸಿಂಗ್‌ ರಾಜ್ಯಕ್ಕೆ:
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರು ಡಿ. 20ರಿಂದ 22ರವರೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಚಿತ್ರದುರ್ಗ, ದಾವಣಗೆರೆ, ಧಾರವಾಡ ಮತ್ತು ಬೆಂಗಳೂರು ಜಿಲ್ಲಾ ಸಮಿತಿ ಸಭೆಗಳಲ್ಲಿ ಪಾಲ್ಗೊಳ್ಳುತ್ತಾರೆ. ಜತೆಗೆ ಆಯ್ದ ಕೆಲವು ವಿಧಾನಸಭಾ ಕ್ಷೇತ್ರ ಮಟ್ಟದ ಸಭೆ, ಬೂತ್‌ ಕಮಿಟಿ ಸಭೆ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿಯಲ್ಲೂ ಭಾಗವಹಿಸಲಿದ್ದಾರೆ ಎಂಬುದನ್ನು ಸಭೆಯಲ್ಲಿ ತಿಳಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next