ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿಯವರು ಅತ್ಯಂತ ಬೇಜವಾಬ್ದಾರಿಯಿಂದ ಸ್ಯಾಂಟ್ರೊ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳನ್ನು ಹೇಳುವುದರ ಮೂಲಕ ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟನೆ ಬಿಡುಗಡೆ ಮಾಡಿರುವ ಅವರು, ಕುಮಾರಸ್ವಾಮಿಯವರು ನನ್ನ ಮೇಲೆ ಮಾಡಿದ ಆಪಾದನೆಯನ್ನು ಸಾಬೀತು ಪಡಿಸಬೇಕು. ಸಾಂಟ್ರೋ ರವಿಯ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಿ ವಿಚಾರಣೆ ಮಾಡಿ ಎಂದು ಪೊಲೀಸರಿಗೆ ತಿಳಿಸಿದ್ದೇನೆ. ನನ್ನ ಮನೆಯಲ್ಲಿ ಆತ ಹಣದ ಗಂಟನ್ನು ಬಿಚ್ಚಿದ್ದಾನೆ ಎಂದು ಕುಮಾರಸ್ವಾಮಿ ಸತ್ಯಕ್ಕೆ ಅಪ್ರಚಾರವಾಗುವಂತಹ ಆಪಾದನೆ ಮಾಡಿದ್ದಾರೆ. ನನ್ನನ್ನು ಯಾವ ಕಾರಣದಿಂದ ತೇಜೋವಧೆ ಮಾಡುತ್ತಿದ್ದಾರೆ ಎಂದು ತಿಳಿದಿಲ್ಲ. ಇದರಿಂದ ಅವರಿಗೆ ಯಾವ ರೀತಿ ಲಾಭವಾಗುತ್ತದೆ ಗೊತ್ತಿಲ್ಲ ಎಂದಿದ್ದಾರೆ.
ಗೃಹ ಸಚಿವನಾದ ನನ್ನನ್ನು ಸಮಾಜದ ಕಟ್ಟಕಡೆಯ ಜನರೂ ಒಳಗೊಂಡಂತೆ ದಿನನಿತ್ಯ ನೂರಾರು ಮಂದಿ ಭೇಟಿ ಮಾಡುತ್ತಾರೆ. ಪ್ರತಿಯೊಬ್ಬರ ಹಿನ್ನೆಲೆಯನ್ನು ಇಣುಕಿ ನೋಡಲಾಗುವುದಿಲ್ಲ ಎಂದಿದ್ದಾರೆ.