Advertisement

ಅರಸು ಜಯಂತಿ: ಪೂರ್ವಭಾವಿ ಸಭೆ

05:55 PM Aug 14, 2019 | Team Udayavani |

ಕೊಪ್ಪಳ: ಜಿಲ್ಲಾಡಳಿತದಿಂದ ಡಿ. ದೇವರಾಜ ಅರಸು ಅವರ 104ನೇ ಜಯಂತಿಯನ್ನು ಆ.20ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕೊಪ್ಪಳ ಎಡಿಸಿ ಸೈಯದಾ ಅಯಿಷಾ ಹೇಳಿದರು.

Advertisement

ಡಿ. ದೇವರಾಜ ಅರಸು ಅವರ ಜಯಂತಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾ ಕೇಂದ್ರವಾದ ಕೊಪ್ಪಳದಲ್ಲಿ ದಿ| ಡಿ. ದೇವರಾಜ ಅರಸುರವರ ಜಯಂತಿ ದಿನದಂದು ಬೆಳಗ್ಗೆ 9ಗಂಟೆಗೆ ಡಿ. ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆ ನಗರದ ಗವಿಮಠದಿಂದ ಪ್ರಾರಂಭಗೊಂಡು ಸಾಹಿತ್ಯ ಭವನದ ವರೆಗೆ ನಡೆಯಲಿದೆ. ಅಂದು ಬೆಳಗ್ಗೆ 11ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಏರ್ಪಡಿಸಲಾಗಿದ್ದು, ಶಿಷ್ಟಾಚಾರದಂತೆ ಗಣ್ಯರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸು ಅವರ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ಮೆರವಣಿಗೆಯಲ್ಲಿ ಎರಡು ವಿಶೇಷ ಕಲಾ ತಂಡಗಳನ್ನು ಆಯ್ಕೆ ಮಾಡಿ ಮೆರವಣಿಗೆಯನ್ನು ಆಕರ್ಷಕಗೊಳಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಡಿ. ದೇವರಾಜ ಅರಸು ಜನ್ಮದಿನಾಚರಣೆಯಂದು ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದರು.

ಕಾರ್ಯಕ್ರಮದಲ್ಲಿ ದಿ| ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿದ್ಯಾರ್ಥಿ ನಿಲಯಗಳ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಈಶಪ್ಪ ಆಶಾಪುರ ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಡಾ| ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಪಿ. ರಮೇಶ, ನಗರ ಪೊಲೀಸ್‌ ಠಾಣೆಯ ಪಿಐ ಶಿವಾನಂದ ವಾಲಿಕಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next