ಯಾದಗಿರಿ: ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಆಗ್ರಹಿಸಿ ಆಲ್ ಇಂಡಿಯಾ ಯುನೈಟೆಡ್ಟ್ರೇಡ್ ಯೂನಿಯನ್ ಸೆಂಟರ್ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಅನಿರ್ದಿಷ್ಟ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಹೋರಾಟ ಆರಂಭವಾಗಿದೆ. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಎದುರು ಜಮಾಯಿಸಿದ ಆಶಾ ಕಾರ್ಯಕರ್ತೆಯರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತ ನಾಡಿದ ಜಿಲ್ಲಾಧ್ಯಕ್ಷೆ ಡಿ. ಉಮಾದೇವಿ, ಪ್ರಮುಖವಾಗಿ ಆಶಾಕಾರ್ಯಕರ್ತೆಯರಿಗೆ ಮಾಸಿಕ 12ಸಾವಿರ ಗೌರವಧನ ಖಾತರಿಪಡಿಸಬೇಕು ಹಾಗೂ ಕೋವಿಡ್ 19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿನೀಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಹಲವು ಬಾರಿ ಸರ್ಕಾರದ ಗಮನೆ ಸೆಳೆದರೂ ಆಶಾಗಳ ಸಮಸ್ಯೆಗೆ ಯಾವುದೇ ಸ್ಪಂದನೆ ಸಿಗುತ್ತಿಲ್ಲ ಎಂದು ಹಾಗಾಗಿ ಅನಿವಾರ್ಯವಾಗಿ ರಾಜ್ಯದಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ಹಾದಿ ಹಿಡಿಯಬೇಕಾಯಿತು ಎಂದು ಹೇಳಿದರು.
ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಿ ಅಂತಾರಾಜ್ಯ ಪ್ರಯಾಣಿಕರು, ವಲಸೆ ಕಾರ್ಮಿಕರು ಮತ್ತು ಇತರರನ್ನು ಸ್ಕ್ರೀನಿಂಗ್ ಮಾಡಿ ಸೋಂಕು ಪತ್ತೆ ಹಚ್ಚುವಲ್ಲಿ ಸಕ್ರಿಯವಾಗಿರುವರು ಎಂದು ಸರ್ಕಾರ ಕೊಂಡಾಡಿದೆ. ಹಿರಿಯ ನಾಗರಿಕರು, ಹೈ-ರಿಸ್ಕ್ ವರ್ಗದವರ ಸಮೀಕ್ಷೆ ನಡೆಸಿ ಗಂಭೀರ ರೋಗ ಇರುವವರನ್ನು ಪತ್ತೆ ಹಚ್ಚಲಾಗಿದೆ. ಕಂಟೇನ್ಮೆಂಟ್ ಪ್ರದೇಶದಲ್ಲಿ ಪ್ರತೀ ದಿನ ಮಾಹಿತಿ ಸಂಗ್ರಹಿಸುತ್ತಿದ್ದು, ಇನ್ಪ್ಲುಯೆಂಜಾ ತೀವ್ರ ಉಸಿರಾಟದ ಸೋಂಕು ಇರುವವರ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿರುವುದರಿಂದ ಸೋಂಕು ಹರಡುವುದನ್ನು ತಡೆಯಲು ಸಾಧ್ಯವಾಗಿದೆ ಎಂದು ಶ್ಲಾಘಿಸಲಾಗಿದೆ.
ಆದರೇ ವೇತನ ಸೇರಿ ಇತರೆ ಸೌಕರ್ಯ ಮಾತ್ರ ಒದಗಿಸಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾದ್ಯಂತ ತಾಲೂಕು ಕೇಂದ್ರಗಳಲ್ಲಿಯೂ ಮನವಿ ಸಲ್ಲಿಸಲಾಯಿತು.
ಮುಖಂಡ ರಾಮಲಿಂಗಪ್ಪ ಬಿ.ಎನ್. ಮಂಗಳ, ಮುನಿಯಮ್ಮ, ಸರಸ್ವತಿ, ಶಾರದಾ, ಲಲಿತ, ರೇಣುಕಾ, ಸರೋಜ, ಯಶೋಧಾ, ಗೀತ, ಬಸ್ಸಮ್ಮ, ಸುಭದ್ರಾ ಇದ್ದರು.