Advertisement

Delhi ತಲುಪಿದ ಅಶೋಕ್‌ ನಿಯೋಗ: ವರಿಷ್ಠರ ಬಳಿ ಆಂತರಿಕ ವಿಚಾರ ಚರ್ಚೆ ಸಾಧ್ಯತೆ

12:22 AM Aug 29, 2024 | Team Udayavani |

ಬೆಂಗಳೂರು: ವಿಪಕ್ಷ ನಾಯಕ ಆರ್‌. ಅಶೋಕ್‌ ನೇತೃತ್ವದ ಬಿಜೆಪಿ ನಿಯೋಗ ಬುಧವಾರ ದಿಲ್ಲಿಗೆ ತಲುಪಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಟಿಕೆಟ್‌ ವಿಚಾರವೂ ಸೇರಿದಂತೆ ಪಕ್ಷದ ಆಂತರಿಕ ವಿದ್ಯಮಾನಗಳ ಬಗ್ಗೆ ವರಿಷ್ಠರ ಗಮನ ಸೆಳೆಯಲಿದ್ದಾರೆ. ಪಕ್ಷವನ್ನು ಯಾರೂ ಹೈಜಾಕ್‌ ಮಾಡದಂತೆ ನೋಡಿಕೊಳ್ಳಿ ಎಂದು ಹೈಕಮಾಂಡ್‌ಗೆ ಮನವಿ ಸಲ್ಲಿಸುವುದು ಈ ಭೇಟಿಯ ಉದ್ದೇಶ ಎಂದು ಹೇಳಲಾಗುತ್ತಿದೆ.

Advertisement

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌, ಮಾಜಿ ಡಿಸಿಎಂ ಡಾ|ಸಿ.ಎನ್‌.ಅಶ್ವತ್ಥನಾರಾಯಣ, ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್‌, ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಸೇರಿದಂತೆ ಪ್ರಮುಖ ನಾಯಕರು ಈ ನಿಯೋಗದಲ್ಲಿ ಇದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡುವ ಉದ್ದೇಶವನ್ನು ಈ ನಿಯೋಗ ಹೊಂದಿದೆ. ಇದು ಕೇವಲ ಉಪ ಚುನಾವಣ ವಿಚಾರಕ್ಕೆ ಮಾತ್ರ ಸೀಮಿತವಾಗಿಲ್ಲ, ಪಕ್ಷದ ಒಟ್ಟಾರೆ ಬೆಳವಣಿಗೆ ಬಗ್ಗೆ ವರಿಷ್ಠರ ಗಮನ ಸೆಳೆಯುವ ಪ್ರಯತ್ನ ಎಂದು ತಿಳಿದು ಬಂದಿದೆ.ಚನ್ನಪಟ್ಟಣ ಕ್ಷೇತ್ರಕ್ಕೆ ಈ ಬಾರಿ ಜೆಡಿಎಸ್‌ಗೆ ಟಿಕೆಟ್‌ ನೀಡುವುದು ಬೇಡ ಎಂಬುದು ಬಹುತೇಕ ಬಿಜೆಪಿ ನಾಯಕರ ಅಭಿಪ್ರಾಯವಾಗಿದೆ.

ಕುಮಾರಸ್ವಾಮಿಯವರ ಪ್ರತಿಷ್ಠೆಗೆ ಕಟ್ಟುಬಿದ್ದು ಟಿಕೆಟ್‌ ಅವರಿಗೆ ಬಿಟ್ಟುಕೊಟ್ಟರೆ ಕಾಂಗ್ರೆಸ್‌ ಸುಲಭವಾಗಿ ಗೆಲುವು ಸಾಧಿಸುತ್ತದೆ ಎಂಬುದು ಬಿಜೆಪಿ ನಿಯೋಗದ ಅಭಿಪ್ರಾಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next