Advertisement

ಕೆ.ಸಿ ಜನರಲ್ ಆಸ್ಪತ್ರೆಯ ಕೋವಿಡ್ ವಾರ್ಡ್ ಗೆ ತೆರಳಿ ಸೋಂಕಿತರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ

03:18 PM Apr 25, 2021 | Team Udayavani |

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಭಾನುವಾರ ಬೆಳಗ್ಗೆ ಕೆ.ಸಿ.ಜನರಲ್‌ ಆಸ್ಪತ್ರೆಯ ಕೋವಿಡ್‌ ಚಿಕಿತ್ಸಾ ಘಟಕಗಳಿಗೆ ಭೇಟಿ ನೀಡಿ ಸೋಂಕಿತರ ಯೋಗ ಕ್ಷೇಮ ವಿಚಾರಿಸಿದರು.

Advertisement

ಬೆಂಗಳೂರು ಸೆಂಟ್ರಲ್‌ ಸಂಸದ ಪಿ.ಸಿ.ಮೋಹನ್‌ ಅವರೊಂದಿಗೆ ಆಸ್ಪತ್ರೆಗೆ ಬಂದ ಅವರು ಪಿಪಿಎ ಕಿಟ್‌ ಧರಿಸಿ ಸೋಂಕಿತರನ್ನು ಭೇಟಿ ಮಾಡಿ ಮಾತನಾಡಿದರು. ಚಿಕಿತ್ಸೆಯ ಬಗ್ಗೆ ಅವರೊಂದಿಗೆ ಮಾಹಿತಿ ಪಡೆದುಕೊಂಡರು.

ಆಸ್ಪತ್ರೆ ಆವರಣದಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಮಾಡ್ಯೂಲರ್‌ ಕೋವಿಡ್‌ ಐಸಿಯು ಘಟಕಗಳಿಗೂ ಅವರು ತೆರಳಿ ಅಲ್ಲಿನ ವ್ಯವಸ್ಥೆಯನ್ನು ಕೂಲಂಕಶವಾಗಿ ಪರಿಶೀಲನೆ ಮಾಡಿದರು.

ಕೆಸಿ ಜನರಲ್ ಆಸ್ಪತ್ರೆಯಲ್ಲಿ ಹೆಚ್ಚು ತಜ್ಞ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು, ಅತ್ಯುತ್ತಮ ಸೌಲಭ್ಯಗಳು ಕೂಡ ಇವೆ. ಹೀಗಾಗಿ ಇಲ್ಲಿಯೇ ಇನ್ನೊಂದು ದೊಡ್ಡ ಪ್ರಮಾಣದ ಹೊರ ರೋಗಿಗಳ ವಿಭಾಗ (ಒಪಿಡಿ)ವನ್ನು ತೆರೆಯಲು ಸರಕಾರ ನಿರ್ಧರಿಸಿದೆ ಎಂದು ಡಿಸಿಎಂ ಹೇಳಿದರು.

ಮನ್‌ ಕೀ ಬಾತ್‌ನಲ್ಲಿ ನರ್ಸ್‌ ಬಗ್ಗೆ ಪಿಎಂ ಮೆಚ್ಚುಗೆ: ಈ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಖಾ ಎಂಬ ನರ್ಸ್‌ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ʼಮನ್‌ ಕೀ ಬಾತ್‌ʼ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದು ಅತ್ಯಂತ ಸಂತೋಷದ ಸಂಗತಿ. ಅವರಿಗೆ ಸರಕಾರದ ಮೆಚ್ಚುಗೆ ಇದೆ. ಹಾಗೆಯೇ ಆಸ್ಪತ್ರೆಯ ಎಲ್ಲ ವೈದ್ಯರು, ನರ್ಸ್‌ಗಳು ಹಾಗೂ ಪ್ಯಾರಾ ಮಡಿಕಲ್‌ ಸಿಬ್ಬಂದಿ ತಮ್ಮ ಜೀವವನ್ನು ಒತ್ತೆ ಇಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

Advertisement

ಬೆಡ್‌ ಕೊರತೆ ನೀಗಿಸುತ್ತೇವೆ: ಬೆಂಗಳೂರು ನಗರದಲ್ಲಿ ಕೋವಿಡ್‌ ಸೋಂಕಿತರಿಗೆ ಹಾಸಿಗೆಗಳ ಕೊರತೆ ಇದೆ. ಅದನ್ನು ಇಲ್ಲ ಎಂದು ಹೇಳುತ್ತಿಲ್ಲ. ಆದರೆ, ಆ ಸಮಸ್ಯೆಯನ್ನು ಬಗೆಹರಿಸಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಲಾಗುತ್ತಿದೆ. ಒಂದು ವೇಳೆ ಬೆಡ್‌ ಸಿಗದಿದ್ದರೂ ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ ಯಾರೇ ಬಂದರೂ ಅವರನ್ನು ತಪಾಸಣೆ ಮಾಡಿ ಉತ್ತಮ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವೆ ಎಂದು ಡಾ.ಅಶ್ವತ್ಥನಾರಾಯಣ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಈ ಆಸ್ಪತ್ರೆಯಲ್ಲಿ 450 ಬೆಡ್‌ ಇದೆ. ಸಾಕಾಗುತ್ತಿಲ್ಲ ನಿಜ, ಆದರೆ ದಿನಕ್ಕೆ ಕೊನೆಪಕ್ಷ 2,000 ಜನರಿಗೆ ಚಿಕಿತ್ಸೆ ಸಿಗುವ ವ್ಯವಸ್ಥೆ ಆಗಬೇಕು. ಅದಕ್ಕೆ ಅಗತ್ಯವಾದ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಒಪಿಡಿಗೆ ಬಂದು ಚಿಕಿತ್ಸೆ ಪಡೆದು ಮನೆಯಲ್ಲೇ ಹೋಮ್‌ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯಬಹುದು. ಉತ್ತಮ ಔಷಧಿಯನ್ನು ನೀಡಲಾಗುತ್ತಿದೆ. ರೋಗ ಲಕ್ಷಣಗಳಿದ್ದವರೆಲ್ಲ ಬಂದು ಆಸ್ಪತ್ರೆಗೆ ದಾಖಲಾಗಬೇಕು ಎಂದಲ್ಲ, ಮನೆಯಲ್ಲೇ ಇದ್ದು ಉತ್ತಮ ಚಿಕಿತ್ಸೆ ಪಡೆಯಬಹುದು ಎಂದರು.

ರೆಮಿಡಿಸಿವಿರ್‌ ಕೊರತೆಯಾಗಲ್ಲ: ರಾಜ್ಯದಲ್ಲಿ ರೆಮಿಡಿಸಿವಿರ್‌ ಕೊರತೆ ಬಹುತೇಕ ನೀಗುತ್ತಿದೆ. ಕೇಂದ್ರ ಸರಕಾರದಿಂದ ಇವತ್ತು 1,50,000ಕ್ಕಿಂತ ಹೆಚ್ಚಿನ ರೆಮಿಡಿಸಿವಿರ್‌ ವೇಲ್ಸ್‌ ರಾಜ್ಯಕ್ಕೆ ಹಂಚಿಕೆಯಾಗಿದೆ. ಇನ್ನು ಕೊರತೆಯಾಗದು, ಅಗತ್ಯ ಇರುವವರಿಗೆ ನೀಡಲಾಗುವುದು. ಅದಕ್ಕೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next