Advertisement

ಬಿಟ್‌ಕಾಯಿನ್ ವಿಚಾರವಾಗಿ ವಿಪಕ್ಷಗಳಿಂದ ಗಾಳಿಯಲ್ಲಿ ಗುಂಡು ಹೊಡೆದಂತೆ ಆರೋಪ:ಬಿ.ವೈ.ರಾಘವೇಂದ್ರ

12:55 PM Nov 11, 2021 | Team Udayavani |

ದಾವಣಗೆರೆ: ಬಿಟ್‌ ಕಾಯಿನ್ ವಿಚಾರವಾಗಿ ವಿಪಕ್ಷಗಳು ಗಾಳಿಯಲ್ಲಿ ಗುಂಡು ಹೊಡೆದಂತೆ ಆರೋಪ ಮಾಡುತ್ತಿವೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ದೂರಿದ್ದಾರೆ.

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್‌ ಕಾಯಿನ್ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ನಡೆದಿದ್ದಲ್ಲ. ಮೂರು ನಾಲ್ಕು ವರ್ಷಗಳ ಹಿಂದಿನದು. ಹಿಂದಿನಿಂದಲೂ ತನಿಖೆ ನಡೆಯುತ್ತಿದೆ. ತನಿಖೆ ನಡೆಯುತ್ತಿರುವಾಗ ಪ್ರತಿಕ್ರಿಯೆ ನೀಡಲು ಬರುವುದಿಲ್ಲ. ಕಾಂಗ್ರೆಸ್ ಮುಖಂಡರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

ಕಾಂಗ್ರೆಸ್‌ ನವರು ಯಾವುದೇ ಹುರುಳಿಲ್ಲದ, ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಬಿಟ್‌ ಕಾಯಿನ್ ಬಗ್ಗೆ ತನಿಖೆ ನಡೆದರೆ ಯಾರು ತಪ್ಪು ಮಾಡಿದ್ದಾರೆ ಎಂಬ ಸತ್ಯ ಸ್ಪಷ್ಟವಾಗುತ್ತದೆ. ಜನರಲ್ಲಿ ತಪ್ಪು ಕಲ್ಪನೆ ಬರುವಂತಹ ಕೆಲಸವನ್ನು ಕಾಂಗ್ರೆಸ್‌ ನವರು ಮಾಡುತ್ತಿದ್ದಾರೆ. ಯಾವುದೂ ಯಶಸ್ವಿಯಾಗುವುದಿಲ್ಲ. ಎಲ್ಲದಕ್ಕೂ ಸಮಯ ಬೇಕು. ಅಲ್ಲಿಯವರೆಗೆ ಕಾಯಬೇಕಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ:ಬಿಟ್ ಕಾಯಿನ್; ಆರೋಪ ಬಿಟ್ಟು ಕಾಂಗ್ರೆಸ್ ನಾಯಕರು ದಾಖಲೆ ಬಿಡುಗಡೆ ಮಾಡಲಿ: ಶೆಟ್ಟರ್ ಸವಾಲು

ಈಗ ವಿಧಾನ ಪರಿಷತ್ತು ಚುನಾವಣೆ ಘೋಷಣೆಯಾಗಿದೆ. ವಿರೋಧ ಪಕ್ಷದವರಿಗೆ ಯಾವುದಾದರೂ ವಿಷಯ ಬೇಕಾಗಿದೆ. ಮೊಸರಲ್ಲಿ ಕಲ್ಲು ಹುಡುಕುತ್ತಿರುವ ಕಾಂಗ್ರೆಸ್ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್‌ನಿಂದ ಗಾಳಿಯಲ್ಲಿ ಗುಂಡು ಹೊಡೆದಂತೆ ಆರೋಪಗಳು ನಡೆಯುತ್ತಿವೆ ಎಂದು ತಿಳಿಸಿದರು.

Advertisement

ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಟ್‌ ಕಾಯಿನ್ ಆರೋಪ ಕುರಿತಂತೆ ವಿಚಾರಣೆ ನಡೆಯಲಿ ಎಂದು ಬಗ್ಗೆ ಅತ್ಯಂತ ಸ್ಪಷ್ಟವಾಗಿ ಹೇಳಿದ್ದಾರೆ. ವಿಚಾರಣೆ ನಡೆಯಲಿ. ತಪ್ಪು ಯಾರದ್ದು ಎಂಬುದು ಸ್ಪಷ್ಟವಾಗುತ್ತದೆ. ಸತ್ಯ ಏನು ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಟ್‌ ಕಾಯಿನ್ ಬಗ್ಗೆ ಕಾಂಗ್ರೆಸ್ ಮುಖಂಡರು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ವಿಚಿತ್ರ ಏನು ಎಂದರೆ ಕಾಂಗ್ರೆಸ್ ಮುಖಂಡರೇ ಅದರಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಸ್ವತಃ ಮುಖ್ಯಮಂತ್ರಿಯವರೇ ತನಿಖೆ ಆಗುತ್ತಿದೆ. ಯಾರೇ, ಎಷ್ಟೇ ಪ್ರಭಾವಿಗಳು ಇದ್ದರೂ ಬಿಡುವ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಮುಖಂಡರು ಬಿಜೆಪಿಯವರು ಭಾಗಿಯಾಗಿದ್ದಾರೆ ಎಂದು ಹೇಳುವ ಮೂಲಕ ರಾಜ್ಯದ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ವಿಧಾನ ಪರಿಷತ್ತು ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ವ್ಯಕ್ತವಾಗುತ್ತಿದೆ. ಮೇಲ್ಮನೆಯಲ್ಲೂ ಬಹುಮತ ಬೇಕು. ಸ್ಪಷ್ಟವಾದ ಬಹುಮತ ಕೊಟ್ಟರೆ ಜನರ ಹಿತದೃಷ್ಟಿಯಿಂದ ಮತ್ತು ಸರ್ಕಾರಕ್ಕೂ ಒಳ್ಳೆಯದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next