Advertisement

ಬಡೇರಿಯಾ ಪುತ್ರಗೆ ನಿರೀಕ್ಷಣಾ ಜಾಮೀನು

02:50 AM Jul 13, 2017 | Team Udayavani |

ಬೆಂಗಳೂರು: ಜಂತಕಲ್‌ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಿರಿಯ ಐಎಎಸ್‌ ಅಧಿಕಾರಿ ಗಂಗಾರಾಮ್‌ ಬಡೇರಿಯಾ ಪುತ್ರ ಗಗನ್‌ ಬಡೇರಿಯಾಗೆ ಹೈಕೋರ್ಟ್‌ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Advertisement

ಗಗನ್‌ ಬಡೇರಿಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ, ಎಸ್‌ಐಟಿ ಅಧಿಕಾರಿಗಳ ಅಪೇಕ್ಷೆಯಂತೆ ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಮಂಗಳವಾರ ತನಿಖಾಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಪ್ರಕರಣದ ಸಾಕ್ಷಿಗಳ ಮೇಲೆ
ಪ್ರಭಾವ ಬೀರಬಾರದು, ಸಾಕ್ಷ್ಯನಾಶಕ್ಕೆ ಯತ್ನಿಸಬಾರದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ
ಜಾಮೀನು ಮಂಜೂರು ಮಾಡಿತು. ಎಸ್‌ಐಟಿ ಪರ ವಾದಿಸಿದ ವಿಶೇಷ ಅಭಿಯೋಜಕ ಪಿ.ಗೋವಿಂದನ್‌, ಗಗನ್‌ ಬಡೇರಿಯಾರ ಮೇಲೆ ಜಂತಕಲ್‌ ಎಂಟರ್‌ಪ್ರೈಸಸ್‌ ಹಾಗೂ ಮತ್ತೂಂದು ಗಣಿ ಕಂಪನಿಗೆ ಪರವಾನಗಿ ನೀಡಲು 20 ಲಕ್ಷ ರೂ. ಕಿಕ್‌ಬ್ಯಾಕ್‌ ಪಡೆದಿದ್ದಾರೆ ಎಂಬ ಆರೋಪವಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು. ಆದರೆ
ಅರ್ಜಿದಾರರು ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದಾರೆ.

ಪ್ರಕರಣದ ಸಂಬಂಧ ಮತ್ತಷ್ಟು ಮಾಹಿತಿ ಪಡೆದುಕೊಳ್ಳಲು ಅವರನ್ನು ಕಸ್ಟೋಡಿಯಲ್‌ ವಿಚಾರಣೆ ನಡೆಸಬೇಕಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡದಂತೆ ಕೋರಿದರು. ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ
ಎಂ.ಟಿ.ನಾಣಯ್ಯ, ಅರ್ಜಿದಾರರು ಕಿಕ್‌ ಬ್ಯಾಕ್‌ ಪಡೆದಿದ್ದಾರೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಧಾರಗಳಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವೇನಿಲ್ಲ. ಅಲ್ಲದೆ ಎಸ್‌ಐಟಿ ಮುಂದೆ ಅರ್ಜಿದಾರರು ವಿಚಾರಣೆಗೆ ಹಾಜರಾಗಲು ಸಿದ್ಧರಿದ್ದಾರೆ. ಆದರೆ ತನಿಖಾಧಿಕಾರಿಗಳು, ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ಅರ್ಜಿದಾರರ ತಂದೆ ಗಂಗಾರಾಮ್‌ ಬಡೇರಿಯಾ ಅವರನ್ನು, ವಿಚಾರಣೆಗೆ ಕರೆಸಿ ಬಂಧಿಸಿದ್ದಾರೆ. ಅದೇ ರೀತಿ ಅರ್ಜಿದಾರರನ್ನು ಬಂಧಿಸುವ ಭೀತಿಯಿದೆ. ಹೀಗಾಗಿ
ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರೆ ವಿಚಾರಣೆಗೆ ಸಹಕರಿಸುವುದಾಗಿ ನ್ಯಾಯಪೀಠಕ್ಕೆ ಭರವಸೆ ನೀಡಿದರು. ನಂತರ ನ್ಯಾಯಪೀಠ, ಅರ್ಜಿದಾರರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಅರ್ಜಿ ಇತ್ಯರ್ಥಗೊಳಿಸಿತು.

Advertisement

Udayavani is now on Telegram. Click here to join our channel and stay updated with the latest news.

Next