ಕೂಡ್ಲಿಗಿ : ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಚಿವ ಬಿ.ಶ್ರೀರಾಮುಲು, ಕೂಡ್ಲಿಗಿ ಶಾಸಕ ಎನ್.ವೈ. ಗೋಪಾಲಕೃಷ್ಣ ಹಾಗೂ ಕೂಡ್ಲಿಗಿ ತಾಲೂಕಿನ ಬಿಜೆಪಿ ಮುಖಂಡರು ಗುರುವಾರ ಸಂಜೆ 5 ಗಂಟೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು, ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಪುಷ್ಪಗುತ್ಛ ನೀಡಿ ಸನ್ಮಾನಿಸಿದರು. ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಹಾಗೂ ಬರಪೀಡಿತ ಕೂಡ್ಲಿಗಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ತಾವು ಒಪ್ಪಿಗೆ ಸೂಚಿಸಿದ್ದರಿಂದ ಕೂಡ್ಲಿಗಿ ತಾಲೂಕಿನ ಇತಿಹಾಸದಲ್ಲಿ ತಮ್ಮ ಹೆಸರನ್ನು ಯಾರೂ ಮರೆಯಲಾರರು.
ಬಿಜೆಪಿ ಆಡಳಿತಾವಧಿಯಲ್ಲಿ ರೈತರು, ಕೃಷಿ ಕಾರ್ಮಿಕರು ಸೇರಿ ಎಲ್ಲರಿಗೂ ಅನುಕೂಲ ಮಾಡಿಕೊಟ್ಟಿರುವ ತಮಗೆ ತಾಲೂಕಿನ ಜನತೆಯ ಪರವಾಗಿ ಹೃದಯ ತುಂಬಿದ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು.
ಕೂಡ್ಲಿಗಿ ತಾಲೂಕಿನ ಬಿಜೆಪಿ ಹಿರಿಯ ಮುಖಂಡರಾದ ಕೆ.ಎಂ.ತಿಪ್ಪೇಸ್ವಾಮಿ, ವೀರನಗೌಡ್ರು, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಗುಂಡುಮುಣುಗು ತಿಪ್ಪೇಸ್ವಾಮಿ, ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಬಂಗಾರು ಹನುಮಂತು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಮದುರ್ಗ ಸೂರ್ಯಪಾಪಣ್ಣ, ಬಿಜೆಪಿ ಕೂಡ್ಲಿಗಿ ಮಂಡಲ ಅಧ್ಯಕ್ಷ ಚನ್ನಪ್ಪ, ಯುವಮೋರ್ಚಾ ತಾಲೂಕು ಅಧ್ಯಕ್ಷ ಸುನೀಲ್ ಗೌಡ್ರು, ಮುಖಂಡರಾದ ಭೀಮೇಶ್, ಎಸ್.ದುರುಗೇಶ್, ಬಡೇಲಡುಕು ದೀನಾ ಮಂಜುನಾಥ, ಟಿ.ಜಿ.ಮಲ್ಲಿಕಾರ್ಜುನ ಗೌಡ, ಮಂಡಲ ಪ್ರಧಾನ ಕಾರ್ಯದರ್ಶಿ ಪಿ.ಮಂಜುನಾಥ ನಾಯಕ, ಜಿಲ್ಲಾ ಪಂಚಾಯಿತಿ ಸದಸ್ಯ ಹುರುಳಿಹಾಳು ರೇವಣ್ಣ, ತಾಲೂಕು ಪಂಚಾಯಿತಿ ಸದಸ್ಯ ಹುಡೇಂ ಪಾಪನಾಯಕ ಇತರರಿದ್ದರು.