Advertisement

ಬಿಬಿಎಂಪಿ ಚುನಾವಣೆಗೆ ಸದ್ಯಕ್ಕಿಲ್ಲ ಮುಕ್ತಿ?

12:05 PM Jun 20, 2023 | Team Udayavani |

ಬೆಂಗಳೂರು: ಕಳೆದ ಎರಡೂವರೆ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬಿಬಿಎಂಪಿ ಚುನಾವಣೆಗೆ ಹೊಸ ಸರ್ಕಾರದಲ್ಲೂ ಬೇಗ ಮುಕ್ತಿ ಕಾಣುವ ಲಕ್ಷಣಗಳು ಗೋಚರಿಸುತ್ತಿಲ್ಲ. ಏಕೆಂದರೆ, ವಾರ್ಡ್‌ ಗಳ ಮರುವಿಂಗಡಣೆ ಮಾಡಲು ರಾಜ್ಯ ಸರ್ಕಾರ ಬರೋಬ್ಬರಿ ಮೂರು ತಿಂಗಳು ಕಾಲಾವಕಾಶ ಕೇಳಿದೆ.

Advertisement

ಸರ್ಕಾರದ ಮನವಿಯಂತೆ ಹೈಕೋರ್ಟ್‌ ಕೂಡ ಕಾಲಾವಕಾಶ ಕೊಟ್ಟಿದೆ. ಬಿಬಿಎಂಪಿ ವಾರ್ಡ್‌ ಮರುವಿಂಗಣೆ ಮಾಡಿ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು 2022ರ ಜು.14ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಎತ್ತಿಹಿಡಿದ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮಾಜಿ ಮೇಯರ್‌ ಬಿ.ಎನ್‌. ಮಂಜುನಾಥ ರೆಡ್ಡಿ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿಯು ಸೋಮವಾರ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆಯಲ್ಲಿ ಕೆಲವೊಂದು ಲೋಪದೋಷಗಳಾಗಿವೆ. ಅವು ಸರ್ಕಾರದ ಗಮನಕ್ಕೆ ಬಂದಿವೆ.

ಕಾಲಮಿತಿಯೊಳಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಆದರೆ, ಲೋಪಗಳನ್ನು ಸರಿಪಡಿಸಿಕೊಂಡು ಹೊಸದಾಗಿ ವಾರ್ಡ್‌ ಮರು ವಿಂಗಡಣೆ ಮಾಡುವುದು ಅನಿವಾರ್ಯವಾಗಿದೆ. ಆ ನಂತರವೇ ಚುನಾವಣೆ ವಿಚಾರಣೆಯಲ್ಲಿ ಸರ್ಕಾರ ಮುಂದುವರಿಯುತ್ತದೆ. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಈ ಹೇಳಿಕೆ ದಾಖಲಿಸಿಕೊಂಡ ವಿಭಾಗೀಯ ನ್ಯಾಯಪೀಠ, ರಾಜ್ಯ ಸರ್ಕಾರಕ್ಕೆ 12 ವಾರ (ಮೂರು ತಿಂಗಳು) ಕಾಲಾವಕಾಶ ನೀಡಿ ಮೇಲ್ಮನವಿ ವಿಚಾರಣೆ ಮುಂದೂಡಿದೆ. ಈ ಅವಧಿಯಲ್ಲಿ ವಾರ್ಡ್‌ ಮರುವಿಂಗಡಣೆಗೆ ಸಂಬಂಧಿಸಿದಂತೆ ಏನೆಲ್ಲಾ ಬೆಳವಣಿಗೆಗಳು ಆಗಿವೆ ಎಂಬ ಬಗ್ಗೆಯೂ ವರದಿ ನೀಡುವಂತೆ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿತು. ಇದರೊಂದಿಗೆ ಬಿಬಿಎಂಪಿ ಚುನಾವಣೆ ಮತ್ತಷ್ಟು ಕಾಲ ವಿಳಂಬವಾಗುವುದು ಖಚಿತವಾಗಿದೆ. ಇದಕ್ಕೂ ಮೊದಲು ಮೇಲ್ಮನವಿದಾರರ ಪರ ಹಿರಿಯ ವಕೀಲ ಉದಯ್‌ ಹೊಳ್ಳ ವಾದ ಮಂಡಿಸಿ, ವಾರ್ಡ್‌ ಮರು ವಿಂಗಡಣೆಯಲ್ಲಿ ಕೆಲವೊಂದು ಲೋಪದೋಷಗಳಾಗಿವೆ. ಈ ಅಂಶಗಳನ್ನು ಏಕ ಸದಸ್ಯ ನ್ಯಾಯಪೀಠವು ತನ್ನ ತೀರ್ಪಿನಲ್ಲಿ ಉಲ್ಲೇ ಖೀಸಿದೆ. ಆದರೂ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಲೋಪಗಳು ಕಂಡುಬಂದಾಗ ಅದನ್ನು ಸರಿಪಡಿಸುವುದು ಅನಿವಾರ್ಯ ಎಂದು ವಿಭಾಗೀಯ ನ್ಯಾಯಪೀಠದ ಗಮನಕ್ಕೆ ತಂದರು. ಮೇಲ್ಮನವಿದಾರರ ಪರ ವಕೀಲ ಶತಾಭಿಶ್‌ ಶಿವಣ್ಣ ವಕಾಲತ್ತು ವಹಿಸಿದ್ದರು.

ಪ್ರಕರಣವೇನು?: ಬಿಬಿಎಂಪಿ ವಾರ್ಡ್‌ಗಳನ್ನು ಪುನರ್‌ ರಚಿಸಿ 2022ರ ಜು.14ರಂದು ಹಿಂದಿನ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಮಾಜಿ ಶಾಸಕಿ ಸೌಮ್ಯಾರೆಡ್ಡಿ ಹಾಗೂ ಹಾಲಿ ಸಚಿವರಾದ ಜಮೀರ್‌ ಅಹ್ಮದ್‌ ಖಾನ್‌, ಮಾಜಿ ಮೇಯರ್‌ ಬಿ.ಎನ್‌. ಮಂಜುನಾಥ ರೆಡ್ಡಿ, ಬಿಜೆಪಿ ಶಾಸಕ ಎಂ.ಸತೀಶ್‌ ರೆಡ್ಡಿ ಸೇರಿದಂತೆ ಹಲವರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ್ದ ನ್ಯಾ. ಹೇಮಂತ್‌ ಚಂದನಗೌಡರ್‌ ಅವರ ಏಕಸದಸ್ಯ ನ್ಯಾಯಪೀಠ, ಸರ್ಕಾರದ ಅಧಿಸೂಚನೆಯಲ್ಲಿ ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡುಬರುತ್ತಿಲ್ಲ ಎಂದು ತಿಳಿಸಿ 2022ರ ಸೆ.16ರಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ವಿಭಾಗೀಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.

Advertisement

ಅರ್ಜಿಯಲ್ಲಿ ವಾದ ಏನಾಗಿತ್ತು?: ಬಿಬಿಎಂಪಿ ವ್ಯಾಪ್ತಿಯ 84 ಲಕ್ಷ ಜನಸಂಖ್ಯೆಯನ್ನು ಒಟ್ಟು 243 ವಾರ್ಡ್ ಗಳಿಂದ ಭಾಗಿಸಿದರೆ ಪ್ರತಿ ವಾರ್ಡ್‌ಗೆ ಅಂದಾಜು 34,500 ಜನಸಂಖ್ಯೆಯಾಗುತ್ತದೆ. ವಾರ್ಡ್‌ ವಿಂಗಡಣೆಯಲ್ಲಿ ಜನಸಂಖ್ಯೆಯ ಪರಿಗಣಿಸುವಲ್ಲಿ ಶೇ.10ರಷ್ಟು ಏರಿಳಿತದ ಅನುಪಾತ ಅನುಸರಿಸಲಾಗಿದೆ ಎಂಬುದಾಗಿ ಸರ್ಕಾರ ಹೇಳಿದೆ. ಸರ್ಕಾರ ಹೇಳಿದಂತೆ ಶೇ.10ರಷ್ಟು ಏರಿಳಿತ ಅನುಪಾತ ಪರಿಗಣಿಸಿದರೂ ವಾರ್ಡ್‌ ಜನಸಂಖ್ಯೆ 31 ಸಾವಿರದಿಂದ 37 ಸಾವಿರದ ಆಸುಪಾಸಿಗೆ ಬರುತ್ತದೆ. ಆದರೆ, ಕೆಲ ವಾರ್ಡ್‌ಗಳಲ್ಲಿ 30 ಸಾವಿರ ಜನ ಸಂಖ್ಯೆಯಿದೆ. ಮತ್ತೆ ಕೆಲ ವಾರ್ಡ್‌ಗಳಲ್ಲಿ 39 ಸಾವಿರ ಜನಸಂಖ್ಯೆ ನಿಗದಿಪಡಿಸಲಾಗಿದೆ.

ಇನ್ನೂ ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಲ್ಲಿ ಸಂಖ್ಯೆ ಕಡಿತಗೊಳಿಸಲಾಗಿದೆ. ಆಡಳಿತ ಪಕ್ಷದ ಶಾಸಕರ ಕ್ಷೇತ್ರಗಳ ವಾರ್ಡ್‌ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ರಾಜಕೀಯ ಲಾಭಕ್ಕಾಗಿ ಹೀಗೆ ಮಾಡಲಾಗಿದೆ ಎಂಬುದು ತಕರಾರು ಅರ್ಜಿಯಲ್ಲಿ ದೂರಲಾಗಿತ್ತು.

ಏಕಸದಸ್ಯ ನ್ಯಾಯಪೀಠ ಏನು ಹೇಳಿತ್ತು?: ವಾರ್ಡ್‌ ಮರು ವಿಂಗಡಣೆ ಸಂಕೀರ್ಣ ಕೆಲಸ. ಎಲ್ಲ ವಾರ್ಡ್‌ಗಳನ್ನೂ ಸಮಾನ ಜನಸಂಖ್ಯೆಗೆ ಅನುಗುಣವಾಗಿ ವಿಂಗಡಿಸುವುದು ಸುಲಭವಲ್ಲ. ಹಲವು ಅಂಶಗಳ ಆಧಾರದಲ್ಲಿ ವಿಸ್ತಾರವಾದ ಪ್ರದೇಶಗಳನ್ನು ವಿಂಗಡಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಉದ್ಭವಿ ಸುವುದು ಸಹಜ. ಆದ್ದರಿಂದ, ಸಣ್ಣಪಟ್ಟ ಲೋಪ ವಿದ್ದರೆ ನ್ಯಾಯಾಲಯ ಮಧ್ಯ ಪ್ರವೇಶಿಸುವುದಿಲ್ಲ. ಗಂಭೀರ ಲೋಪ ಕಂಡುಬಂದರೆ ಮಾತ್ರ ಮಧ್ಯ ಪ್ರವೇಶಿಸಲಾಗುವುದು ಎಂದು ಏಕಸದಸ್ಯ ನ್ಯಾಯಪೀಠ 2022ರ ಸೆ.19ರ ಆದೇಶದಲ್ಲಿ ಅಭಿಪ್ರಾಯಪಟ್ಟಿತ್ತು.

Advertisement

Udayavani is now on Telegram. Click here to join our channel and stay updated with the latest news.

Next