Advertisement

ಮಲ್ಲೇಶ್ವರಂ: ಸಚಿವರ ತರಾಟೆಯ ಬೆನ್ನಲ್ಲೇ ಐದು ಕಡೆ ರಸ್ತೆ ಉಬ್ಬನ್ನು ಸರಿಪಡಿಸಿದ ಬಿಬಿಎಂಪಿ

02:50 PM Feb 08, 2022 | Team Udayavani |

ಬೆಂಗಳೂರು: ಮಲ್ಲೇಶ್ವರಂನ ಮಾರ್ಗೋಸಾ ರಸ್ತೆಯ ವೀಣಾ ಸ್ಟೋರ್ಸ್ ಜಂಕ್ಷನ್ನಿನಲ್ಲಿ ಅವೈಜ್ಞಾನಿಕ ರಸ್ತೆ ಉಬ್ಬನ್ನು ಬಿಬಿಎಂಪಿ ಸಿಬ್ಬಂದಿ ಸೋಮವಾರ ತಡ ರಾತ್ರಿಯೇ ಸರಿಪಡಿಸಿದ್ದು, ವಾಹನ ಸವಾರರಿಗೆ ಇದು ಸ್ಪಷ್ಟವಾಗಿ ಕಾಣಿಸುವಂತೆ ಬಿಳಿ ಬಣ್ಣದ ಪಟ್ಟೆಗಳನ್ನು ಕೂಡ ಬಳಿದಿದ್ದಾರೆ. ಜತೆಗೆ, ರಸ್ತೆ ಉಬ್ಬಿಗೂ ಸ್ವಲ್ಪ ಮೊದಲೇ ವಾಹನ ಸವಾರರು ತಮ್ಮ ವೇಗವನ್ನು ನಿಯಂತ್ರಿಸಲು ಅನುಕೂಲವಾಗುವಂತೆ ಈಗ ರಂಬ್ಲರ್ ಕೂಡ ಹಾಕಲಾಗಿದೆ.

Advertisement

ಈ ಅವೈಜ್ಞಾನಿಕ ರಸ್ತೆ ಉಬ್ಬಿಗೆ ಸಂಬಂಧಿಸಿದಂತೆ ಕ್ಷೇತ್ರದ ಶಾಸಕ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸೋಮವಾರ ಸಂಜೆ ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದ್ದರು.

ಮುಖ್ಯವಾಗಿ ಅವರು, ಬಿಬಿಎಂಪಿ ಬೃಹತ್ ರಸ್ತೆಗಳ ವಿಭಾಗದ ಎಂಜಿನಿಯರ್ ಪ್ರವೀಣ್ ಅವರಿಗೆ ಎಚ್ಚರಿಕೆ ನೀಡಿ, ಸಮಸ್ಯೆಯನ್ನು ತ್ವರಿತವಾಗಿ ಸರಿಪಡಿಸಲು ಸೂಚಿಸಿದ್ದರು. ಅಲ್ಲದೆ, ಇಲ್ಲಿ ಇತ್ತೀಚೆಗೆ ಒಂದಿಷ್ಟು ಅಪಘಾತಗಳು ಸಂಭವಿಸಿದ್ದರೂ ಈ ಅಧಿಕಾರಿಯು ಸ್ಥಳಕ್ಕೆ ಭೇಟಿ ನೀಡದೆ ಇದ್ದುದನ್ನು ಸಚಿವರು ಗಂಭೀರವಾಗಿ ಪರಿಗಣಿಸಿದ್ದರು.

ಇದರಿಂದ ಕೂಡಲೇ ಎಚ್ಚೆತ್ತುಕೊಂಡ ಬಿಬಿಎಂಪಿ ಸಿಬ್ಬಂದಿ, ಸೋಮವಾರ ರಾತ್ರಿಯೇ ಮಾರ್ಗೋಸಾ ರಸ್ತೆಯಲ್ಲಿ ಕೆಲದಿನಗಳ ಹಿಂದೆ ತಾವೇ ಅವೈಜ್ಞಾನಿಕವಾಗಿ ನಿರ್ಮಿಸಿದ್ದ ರಸ್ತೆ ಉಬ್ಬನ್ನು ಸರಿಪಡಿಸಿದ್ದಾರೆ.

ಇದರ ಜತೆಗೆ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಮಮೋಹನಪುರ, ಮಹಾಕವಿ ಕುವೆಂಪು ರಸ್ತೆ, ಶ್ರೀರಾಂಪುರದ 3ನೇ ಮುಖ್ಯ ರಸ್ತೆ, ಗಾಯತ್ರೀನಗರ `ಡಿ’ ಬ್ಲಾಕ್, ರಾಜಾಜಿನಗರ 2ನೇ ಬ್ಲಾಕ್ ಮುಂತಾದ ಕಡೆಗಳಲ್ಲೂ ರಸ್ತೆ ಉಬ್ಬುಗಳಿಗೆ ಬಿಳಿ ಬಣ್ಣದ ಪಟ್ಟೆಗಳನ್ನು ಹಾಕಲಾಗಿದೆ. ಸಮಸ್ಯೆಗೆ ಸ್ಪಂದಿಸಿ, ಕ್ಷಿಪ್ರ ಗತಿಯಲ್ಲಿ ಬಗೆಹರಿಸಿದ್ದಕ್ಕಾಗಿ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

ಅಭಿನಂದನೆ: ಸಚಿವರ ಸೂಚನೆ ಮೇರೆಗೆ ತಕ್ಷಣ ರಸ್ತೆ ಉಬ್ಬು ಸರಿಪಡಿಸಿದ ಅಧಿಕಾರಿಗಳನ್ನು ಸಚಿವರು ಅಭಿನಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next