Advertisement

ಎಲ್ಲೆಡೆ ಜಯ ಗಳಿಸುವುದು ನಮ್ಮ ಗುರಿ

05:33 PM Jul 25, 2022 | Team Udayavani |

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೇವಲ ಬೆಳಗಾವಿ ದಕ್ಷಿಣ ನಮ್ಮ ಗುರಿಯಲ್ಲ. ಸವದತ್ತಿ, ರಾಯಬಾಗ ಸೇರಿದಂತೆ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಜಯಗಳಿಸುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಪಕ್ಷದ ಸಂಘಟನೆಯ ಸಭೆಗಳನ್ನು ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

Advertisement

ಇಲ್ಲಿಯ ಖಾಸಬಾಗದ ಸಾಯಿ ಸಭಾಭವನದಲ್ಲಿ ರವಿವಾರ ನಡೆದ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ನವಸಂಕಲ್ಪ ಚಿಂತನಾ ಶಿಬಿರದಲ್ಲಿ ಮಾತನಾಡಿದ ಅವರು, ಈಗಾಗಲೇ ನಮ್ಮ ಪಕ್ಷದ ನಾಯಕರು ಸುಮಾರು ವಿಷಯಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದ್ದಾರೆ. ಮೇಲಿಂದ ಮೇಲೆ ಇಂತಹ ಕಾರ್ಯಕ್ರಮಗಳು ನಡೆದು ಕಾರ್ಯಕರ್ತರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು ಎಂದರು.

ಪಕ್ಷದ ನಾಯಕರೇ ಕಾರ್ಯಕರ್ತರ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಮೇಲಿಂದ ಮೇಲೆ ಪಕ್ಷದ ಸಭೆ, ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಪಕ್ಷ ಸಂಘಟನೆ ಮಾಡಬೇಕು. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬರುವಂತೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ಚರ್ಚೆ ಮಾಡುವ ಮೂಲಕ ಪಕ್ಷದ ಸಂಘಟನೆ ಮಾಡಲಾಗುತ್ತಿದೆ. ಚುನಾವಣೆಗೆ ಮೊದಲೇ ಪಕ್ಷವನ್ನು ಬೇರುಮಟ್ಟದಲ್ಲಿ ಸಂಘಟಿಸುವ ಕೆಲಸ ನಡೆಯಬೇಕಿದೆ ಎಂದರು.

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ನಾವು ಗೆಲ್ಲುವುದು ಅನಿವಾರ್ಯವಾಗಿದೆ. ಈ ಕ್ಷೇತ್ರದಲ್ಲಿ ನಮ್ಮ ಮತಗಳ ಪ್ರಮಾಣ ಹೆಚ್ಚು ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಅಡಿಪಾಯ ಗಟ್ಟಿಯಾಗಿದ್ದರೆ ಆಗ ನಮ್ಮ ಅಭ್ಯರ್ಥಿಗಳು ಬರುತ್ತಾರೆ. ಬೆಳಗಾವಿ ದಕ್ಷಿಣದಲ್ಲಿ ನಾವು ಸೋತಿರುವುದಕ್ಕೆ ಹಲವಾರು ಕಾರಣಗಳಿವೆ. ಕಳೆದ ಮೂರು ಚುನಾವಣೆಗಳಲ್ಲಿ ಮೂವರು ಬೇರೆ ಬೇರೆ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಇದೆಲ್ಲವನ್ನು ಗಮನಿಸಿ ಈ ಬಾರಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದ್ದೇವೆ ಎಂದು ಹೇಳಿದರು.

Advertisement

ವಿಧಾನಸಭೆ ಚುನಾವಣೆಗಿಂತ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಾವು ಒಳ್ಳೆಯ ಮತ ಪಡೆದಿದ್ದೇವೆ. ಬೆಳಗಾವಿ ದಕ್ಷಿಣದಲ್ಲಿ ಎರಡು ಸ್ಥಾನಗಳಲ್ಲಿ ಗೆದ್ದಿದ್ದೇವೆ. ಉತ್ತರ ಕ್ಷೇತ್ರದಲ್ಲಿಯೂ ಅದೇ ರೀತಿಯಾಗಿದೆ. ನಮ್ಮ ಪ್ರಕಾರ ಕನಿಷ್ಠ 18 ರಿಂದ 20 ಸ್ಥಾನಗಳನ್ನು ಗೆಲ್ಲಬೇಕಿತ್ತು. ಆದರೆ ನಮ್ಮಲ್ಲಿನ ಹೊಂದಾಣಿಕೆ ಕೊರತೆಯಿಂದಾಗಿ ನಾವು ಸೋತಿದ್ದೇವೆ. ಇದು ನಮಗೆ ಪಾಠವಾಗಿದೆ. ಲೋಕಸಭೆ ಉಪಚುನಾವಣೆ, ಪಾಲಿಕೆ ಚುನಾವಣೆ ಎದುರಿಸಿರುವುದರಿಂದ ನಮಗೆ ಈಗ ಒಂದು ಅಂದಾಜು ಗೊತ್ತಾಗಿದೆ ಎಂದರು.

ಆಗಾಗ ಇಂತಹ ಸಭೆ ಮತ್ತು ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಪಕ್ಷದ ಕಾರ್ಯಕರ್ತರ ಸಮಸ್ಯೆಗಳು, ಬಡವರು, ನೇಕಾರರು, ಜಿಎಸ್‌ಟಿ ಸಮಸ್ಯೆ ಕುರಿತು ಚರ್ಚಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ಹಾಲು, ಮೊಸರು ಹೀಗೆ ಯಾವುದನ್ನೂ ಬಿಡದೇ ಜಿಎಸ್‌ಟಿ ವಿಧಿಸಿದ್ದಾರೆ. ಈ ಕುರಿತು ಜನಜಾಗೃತಿ ಮೂಡಿಸಲು ಸಮಾವೇಶ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಷ್ಟು ಸಾಧ್ಯವಾಗುತ್ತದೆಯೋ ಅಷ್ಟು ಬಡವರಿಗೆ ಹೊರೆ ಮಾಡಿದ್ದಾರೆ. ಶ್ರೀಮಂತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಟೀಕಿಸಿದರು.

ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಕಾಂಗ್ರೆಸ್‌ ಪಕ್ಷ ದಿನದಿಂದ ದಿನಕ್ಕೆ ಬಲಿಷ್ಠಗೊಳ್ಳುತ್ತಿದೆ. ಬೇರೆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್‌ ಕಡೆಗೆ ಮುಖ ಮಾಡಿದ್ದಾರೆ. ಕಾಂಗ್ರೆಸ್‌ ಎಂದರೆ ಶಕ್ತಿ. ಹಲವಾರು ಮಹನೀಯರು ಪಕ್ಷವನ್ನ ಕಟ್ಟಿ ಅಮೋಘವಾದ ಕೊಡುಗೆಗಳನ್ನು ನೀಡಿ ಕೊನೆಗೆ ತಮ್ಮ ಜೀವಗಳನ್ನೇ ದೇಶಕ್ಕೆ ಸಮರ್ಪಿಸಿದ್ದಾರೆ. ಇವರೆಲ್ಲರ ತ್ಯಾಗ ಬಲಿದಾನಗಳನ್ನು ಸ್ಮರಿಸುವ ಮೂಲಕ ಪಕ್ಷವನ್ನು ಇನ್ನೂ ಉತ್ತುಂಗಕ್ಕೆ ಏರಿಸುವ ಕೆಲಸ ಮಾಡೋಣ ಎಂದರು.

ಸಭೆಯಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ., ಮಾಜಿ ಶಾಸಕ ರಮೇಶ ಕುಡಚಿ, ಸುನೀಲ ಹಣಮನ್ನವರ, ರವೀಂದ್ರ ನಾಯ್ಕರ್‌, ಬಿ.ಎಸ್‌ .ನಾಡಕರ್ಣಿ, ಸರಳಾ ಸಾತಪುತೆ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next