Advertisement

ಸೂರು ನಿರ್ಮಿಸಿ ಸೌಕರ್ಯ ಕಲ್ಪಿಸಿ

03:13 PM Feb 16, 2020 | Naveen |

ಬೆಳಗಾವಿ: ಒಂದು ಮನೆ ಎಂದರೆ ನಾಲ್ಕು ಗೋಡೆಗಳನ್ನು ಕಟ್ಟಿ ನಿರ್ಮಾಣ ಮಾಡುವುದಲ್ಲ. ಅದಕ್ಕೆ ಅಗತ್ಯ ಇರುವ ಶುದ್ಧ ಕುಡಿಯುವ ನೀರು, ವಿದ್ಯುತ್‌ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಬೇಕು. ದೇಶದ ಪ್ರತಿ ಕುಟುಂಬಕ್ಕೂ 2022ರ ವೇಳೆಗೆ ಮನೆ ಒದಗಿಸುವ ಕೆಲಸ ಆಗಬೇಕು ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಸೂಚನೆ ನೀಡಿದರು.

Advertisement

ಇಲ್ಲಿಯ ಸುವರ್ಣ ವಿಧಾನಸೌಧ ಸಭಾಂಗಣದಲ್ಲಿ ಶನಿವಾರ ನಡೆದ 2019-20ನೇ ಸಾಲಿನ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ)ಯ ತ್ತೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರತಿಯೊಂದು ಕುಟುಂಬಕ್ಕೆ ಸೂರು ಕಲ್ಪಿಸುವ ಗುರಿ ಪ್ರಧಾನಿ ಮೋದಿ ಹೊಂದಿದ್ದಾರೆ. ಈ ಕನಸು ನನಸಾಗಿಸಲು ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು ಎಂದರು.

ಯಾವುದೇ ಯೋಜನೆಗಳಿರಲಿ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ವಸತಿ ಹಾಗೂ ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸಲು ಸಂಬಂಧಿಸಿದಂತೆ
ಸಮಗ್ರ ಯೋಜನೆಯನ್ನು ಮಾ.31ರೊಳಗೆ ರೂಪಿಸಬೇಕು ಎಂದು ಹೇಳಿದರು.

ನಗರ ವಸತಿ ಯೋಜನೆಯಡಿ ಜಿಲ್ಲೆಯಲ್ಲಿ 16,660 ಮನೆಗಳು ಅನುಮೋದನೆಗೊಂಡಿದ್ದು, 2,624 ಮನೆಗಳು ಪ್ರಗತಿ ಹಂತದಲ್ಲಿವೆ. ಮಾರ್ಚ್‌ ಅಂತ್ಯಕ್ಕೆ ಶೇ.100 ಗುರಿ ಸಾಧಿ ಸಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 3.50 ಲಕ್ಷ ಹಾಗೂ ಸಾಮಾನ್ಯ ವರ್ಗದವರಿಗೆ ಮನೆ ನಿರ್ಮಿಸಿಕೊಡಲು 2.70 ಲಕ್ಷ ನೆರವು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಮಾತನಾಡಿ, ಜಿಲ್ಲೆಯಲ್ಲಿ 16 ಸಾವಿರ ಜನ ಅರ್ಜಿ
ಸಲ್ಲಿಸಿದ್ದು, ಈಗಾಗಲೇ ಇವುಗಳನ್ನು ಪರಿಶೀಲಿಸಿ ಮೂರು ಸಮಗ್ರ ಯೋಜನೆಗಳನ್ನು ಅನುಮೋದನೆಗಾಗಿ ಕಳುಹಿಸಲಾಗಿದೆ. ಬೆಳಗಾವಿಯಲ್ಲಿ ನಿವೇಶನ ಹೊಂದಿಲ್ಲದೇ ಇರುವ 19,656 ಜನರು ಮನೆಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ. ಇದರಲ್ಲಿ 1,808 ಜನರ ಅರ್ಜಿ ಪರಿಶೀಲಿಸಿ ಅನುಮೋದಿಸಲಾಗಿದೆ ಎಂದರು.

Advertisement

ಆಗ ಸಚಿವ ಸುರೇಶ ಅಂಗಡಿ ಮಾತನಾಡಿ, ಯೋಜನೆಗಳ ಅನುಷ್ಠಾನ ಸುಗಮವಾಗಿ
ನಡೆಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತಿದೆ. ಯೋಜನೆಗೆ ಸಂಬಂಧಿಸಿದಂತೆ ಏನಾದರೂ ತಾಂತ್ರಿಕ ತೊಂದರೆಗಳಿದ್ದರೆ ಜನಪ್ರತಿನಿ ಧಿಗಳ ಗಮನಕ್ಕೆ ತರಬೇಕು. ಕೇಂದ್ರ ಸರ್ಕಾರದ 33 ಯೋಜನೆಗಳ ಅನುಷ್ಠಾನಕ್ಕೆ ಸಂಬಂ ಧಿಸಿದಂತೆ ದಿಶಾ ಸಮಿತಿ ಸಭೆಯಲ್ಲಿ ಚರ್ಚಿಸಿ, ಸೂಕ್ತ ಕ್ರಮ ವಹಿಸಲಾಗುವುದು ಎಂದರು.

ಜಿಪಂ ಉಪ ಕಾರ್ಯದರ್ಶಿ ಎಸ್‌.ಬಿ. ಮುಳ್ಳಳ್ಳಿ ಮಾತನಾಡಿ, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 2.20 ಲಕ್ಷ ಮನೆಗಳ ನಿರ್ಮಾಣ ಅಗತ್ಯವಿದೆ. ಉದ್ಯೋಗ ಖಾತ್ರಿ ಯೋಜನೆಯಡಿ 71.46 ಲಕ್ಷ ಮಾನವ ದಿನಗಳ ಗುರಿ ಸಾಧನೆ ಮಾಡಲಾಗಿದ್ದು, ಪ್ರವಾಹದಿಂದ 45 ಲಕ್ಷ ಮಾನವ ದಿನಗಳ ಸೃಷ್ಟಿ ಸಾಧ್ಯವಾಗಿಲ್ಲ. ಇನ್ನೊಂದು ತಿಂಗಳಲ್ಲಿ ಒಂದು ಕೋಟಿ ಮಾನವ ದಿನಗಳನ್ನು ಸೃಷ್ಟಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಸಂಸದ ಅಣ್ಣಾಸಾಹೇಬ್‌ ಜೊಲ್ಲೆ ಮಾತನಾಡಿ, ವೇತನ ಹಾಗೂ ಯಂತ್ರೋಪಕರಣಗಳ ಹಣ ಪಾವತಿ ವಿಳಂಬಕ್ಕೆ ಏನು ಕಾರಣ ಎಂದು ಪ್ರಶ್ನಿಸಿದರಲ್ಲದೇ ಅನುದಾನ ಲಭ್ಯವಿದ್ದರೆ ತಕ್ಷಣ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಮಾತನಾಡಿ, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಂದ ವೈಯಕ್ತಿಕವಾಗಿ ವ್ಯಾಪಾರ-ವಹಿವಾಟು ಆರಂಭಿಸುವ ಬದಲು ಸಾಮೂಹಿಕವಾಗಿ ತೊಡಗಿಕೊಂಡರೆ ದೊಡ್ಡ ಪ್ರಮಾಣ ವ್ಯವಹಾರ ಸಾಧ್ಯವಾಗಲಿದ್ದು, ಇದರಿಂದ ಇನ್ನೂ ಹೆಚ್ಚಿನ ಉದ್ಯೋಗಾವಕಾಶ ಮತ್ತು ಸ್ವಾವಲಂಬನೆ ಸಾಧ್ಯವಾಗಲಿದೆ ಎಂದು ಸಲಹೆ ನೀಡಿದರು.

ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ರಸ್ತೆಗಳನ್ನು ಆಯ್ಕೆ ಮಾಡುವಾಗ ಸಂಬಂಧಪಟ್ಟ ಕ್ಷೇತ್ರದ ಸಂಸದರ ಸಲಹೆ ಪಡೆದುಕೊಳ್ಳಬೇಕು ಎಂದು ಸಚಿವ ಅಂಗಡಿ ಸೂಚನೆ ನೀಡಿದರು. ಈ ಯೋಜನೆಯಡಿ ಪ್ರತಿ ತಾಲೂಕಿನಲ್ಲಿ 30 ಕಿ.ಮೀ. ರಸ್ತೆ ನಿರ್ಮಿಸಲಾಗುತ್ತಿದ್ದು, ಕೆಲವು ತಾಲೂಕುಗಳಲ್ಲಿ 45 ಕಿ.ಮೀ. ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟಾರೆ 330 ಕಿ.ಮೀ. ರಸ್ತೆ ನಿರ್ಮಿಸಲಾಗುವುದು. ಪ್ರತಿ ಕಿ.ಮೀ. 60 ರಿಂದ 70 ಸಾವಿರ ರೂಪಾಯಿ ಅನುದಾನ ಲಭ್ಯವಾಗಲಿದೆ ಎಂದು ಅಧಿ ಕಾರಿಗಳು ವಿವರಿಸಿದರು.

ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಮಾತನಾಡಿ, ಸ್ಮಾರ್ಟ್‌ಸಿಟಿ
ಯೋಜನೆಯಡಿ ಬೆಳಗಾವಿ ನಗರದಲ್ಲಿ 959 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಲಮಿತಿಯಲ್ಲಿ ಎಲ್ಲ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಕೋಟೆ(ಕಿಲ್ಲಾ) ಪ್ರದೇಶವನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲು ಅನುಮತಿ
ನೀಡಲು ಹಿರಿಯ ಸೇನಾಧಿ ಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದಷ್ಟು ಬೇಗ ಪ್ರತ್ಯೇಕ ಸಭೆ ಕರೆದು ಈ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವ ಅಂಗಡಿ ತಿಳಿಸಿದರು.
ಉತ್ತರ ಶಾಸಕ ಅನಿಲ ಬೆನಕೆ ಮಾತನಾಡಿ, ನಗರದಲ್ಲಿ ವಸತಿ ಹಾಗೂ ಕುಡಿಯುವ ನೀರು ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸ್ವತ್ಛ ಭಾರತ ಯೋಜನೆ, ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ, ಕೃಷಿ ಸಿಂಚಾಯಿ ಯೋಜನೆ, ಮಳೆನೀರು ಕೊಯ್ಲು, ಡಿಜಿಟಲ್‌ ಇಂಡಿಯಾ, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸುವುದು, ಬೆಳೆ ವಿಮೆ ಯೋಜನೆ, ಸ್ಮಾರ್ಟ್‌ಸಿಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಕುರಿತು ಚರ್ಚಿಸಲಾಯಿತು. ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖಾ¤ರ ಪಠಾಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next