Advertisement

ಅಕ್ಟೋಬರ್‌ನಲ್ಲಿ ಬೆಳಗಾವಿ ಅಧಿವೇಶನ?

11:39 PM Aug 31, 2019 | Team Udayavani |

ಬೆಂಗಳೂರು: ರಾಜ್ಯದ ನೂತನ ಬಿಜೆಪಿ ಸರ್ಕಾರ ಅಕ್ಟೋಬರ್‌ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಚಿಂತನೆ ನಡೆಸಿದೆ. ಬಜೆಟ್‌ಗೆ ಮೂರು ತಿಂಗಳು ಮಾತ್ರ ಅನುಮೋದನೆ ಪಡೆದುಕೊಂಡಿರುವುದರಿಂದ ಪೂರ್ಣ ಪ್ರಮಾಣದ ಬಜೆಟ್‌ಗೆ ಒಪ್ಪಿಗೆ ಪಡೆಯುವ ಸಲುವಾಗಿ ಬೆಳಗಾವಿಯಲ್ಲಿಯೇ ಅಧಿವೇಶನ ನಡೆಸಲು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆದಿವೆ ಎಂದು ತಿಳಿದು ಬಂದಿದೆ.

Advertisement

ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹ ಬಂದು ಸುಮಾರು 40 ಸಾವಿರ ಕೋಟಿಯಷ್ಟು ಹಾನಿಯಾಗಿದ್ದು, ಜನ-ಜಾನುವಾರುಗಳ ಜೀವ ಹಾನಿಯಾಗಿರುವುದರಿಂದ ಪ್ರತಿಪಕ್ಷ ಕಾಂಗ್ರೆಸ್‌ ತಕ್ಷಣವೇ ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ರಾಜ್ಯ ಸರ್ಕಾರ ವಿಶೇಷ ಅಧಿವೇಶನ ಕರೆಯುವ ಬದಲು ಅಕ್ಟೋಬರ್‌ನಲ್ಲಿ ಬೆಳಗಾವಿಯಲ್ಲಿಯೇ ಅಧಿವೇಶನ ಕರೆಯುವ ಬಗ್ಗೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಅಷ್ಟರಲ್ಲಿ ಪ್ರವಾಹ ಪರಿಹಾರಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರದ ಅನುದಾನ ಪಡೆದುಕೊಂಡರೆ ಪ್ರತಿಪಕ್ಷಗಳ ಆರೋಪದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಅದೇ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿರುವುದರಿಂದ ಬೆಳಗಾವಿಯಲ್ಲಿ ಅಧಿವೇಶನದಲ್ಲಿಯೇ ಪ್ರವಾಹ ಪರಿಸ್ಥಿತಿಯ ಬಗ್ಗೆ ಚರ್ಚಿಸುವ ಮೂಲಕ ರಾಜ್ಯ ಸರ್ಕಾರ ಸಂತ್ರಸ್ತರಿಗೆ ಎಲ್ಲ ರೀತಿಯ ಪುನರ್ವಸತಿ ಕಾರ್ಯ ಕೈಗೊಳ್ಳುತ್ತಿದೆ ಎನ್ನುವುದನ್ನು ಬಿಂಬಿಸಿದಂತಾಗಲಿದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಈ ಆಲೋಚನೆ ಮಾಡಿದೆ ಎಂದು ತಿಳಿದು ಬಂದಿದೆ.

ಹೊಸ ಬಜೆಟ್‌ ಗೊಂದಲ: ಮೈತ್ರಿ ಸರ್ಕಾರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮಂಡಿಸಿರುವ ಬಜೆಟ್‌ಗೆ ಬಿಜೆಪಿ ಮೂರು ತಿಂಗಳಿಗಾಗಿ ವಿಧಾನ ಮಂಡಲದ ಅನುಮೋದನೆ ಪಡೆದುಕೊಂಡಿದ್ದು, ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಕ್ಟೋಬರ್‌ನಲ್ಲಿ ಹೊಸ ಬಜೆಟ್‌ ಮಂಡನೆಗೆ ಸಿದ್ಧತೆ ನಡೆಸಲಾಗಿದೆ. ಪ್ರವಾಹ ಪರಿಸ್ಥಿತಿಯಿಂದ ಪುನರ್ವಸತಿಗೆ ಸಾಕಷ್ಟು ಹಣಕಾಸಿನ ಅಗತ್ಯವಿದ್ದು, ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ನೀಡುವ ಪರಿಹಾರದಿಂದ ಸಂಪೂರ್ಣ ಪುನರ್ವಸತಿ ಕಲ್ಪಿಸಲು ಸಾಧ್ಯವಾಗುವುದಿಲ್ಲ.

ಹೀಗಾಗಿ, ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರ ಪುನರ್ವಸತಿಗೆ ಹೆಚ್ಚಿನ ಪ್ರಮಾಣದಲ್ಲಿ ಹಣ ಮೀಸಲಿಡಬೇಕಿದೆ. ಅಲ್ಲದೇ ರಾಜ್ಯದಲ್ಲಿ ತೆರಿಗೆ ಸಂಗ್ರಹವೂ ಕುಂಠಿತವಾಗಿರುವುದರಿಂದ ಹೊಸ ಬಜೆಟ್‌ ಮಂಡನೆ ಮಾಡಿ ಹೊಸ ಯೋಜನೆಗಳನ್ನು ಘೋಷಿಸಿದರೆ ಹಣಕಾಸಿನ ತೊಂದರೆ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ, ಹೊಸ ಬಜೆಟ್‌ ಮಂಡನೆಯ ಬಗ್ಗೆ ಇನ್ನೂ ಗೊಂದಲ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next