Advertisement

ಟ್ರೊಮಾಕೇರ್‌ ಸೆಂಟರ್‌ಗೆ ಕೋವಿಡ್‌ ಆಸತ್ರೆ ಸ್ಥಳಾಂತರಕ್ಕೆ ಚಿಂತನೆ

04:16 PM Jun 10, 2020 | Naveen |

ಬಳ್ಳಾರಿ: ನಗರ ಹೃದಯಭಾಗದಲ್ಲಿನ ಜಿಲ್ಲಾಸ್ಪತ್ರೆಯಲ್ಲಿನ ಕೋವಿಡ್‌-19 ಆಸ್ಪತ್ರೆಯನ್ನು ಹೊರವಲಯದ ಟಿಬಿ ಸ್ಯಾನಿಟೋರಿಯಂ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಟ್ರೊಮಾಕೇರ್‌ ಸೆಂಟರ್‌ಗೆ ಸ್ಥಳಾಂತರಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ತಿಳಿಸಿದರು.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಹೊರವಲಯದ ಟಿಬಿಸ್ಯಾನಿಟೋರಿಯಂ (ವೆಲ್ಲೆಸ್ಲಿ) ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಟ್ರಾಮಾಕೇರ್‌ ಆಸ್ಪತ್ರೆ ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಇದ್ದ ವಿದ್ಯುತ್‌ ಇತರೆ ಕಾಮಗಾರಿಗಳು ಸಹ ಪೂರ್ಣಗೊಂಡಿವೆ. ಕ್ಲಿನೀಕ್‌ಗೆ ಸಂಬಂಧಿಸಿದ ಕಾಮಗಾರಿಗಳನ್ನು ಸಹ ಕೈಗೊಳ್ಳಲಾಗಿದ್ದು, ಆರೋಗ್ಯ ಇಲಾಖೆಯವರು ಪರಿಶೀಲಿಸಿದ ಬಳಿಕ ಜಿಲ್ಲಾಸ್ಪತ್ರೆಯಲ್ಲಿನ ಕೋವಿಡ್‌ ಸೋಂಕಿತರನ್ನು ಟ್ರಾಮಾಕೇರ್‌ ಸೆಂಟರ್‌ಗೆ ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗುವುದು ಎಂದವರು ಸ್ಪಷ್ಟಪಡಿಸಿದರು.

ವಿಮ್ಸ್‌ಗೆ ಹೆಚ್ಚಿದ ಒತ್ತಡ: ಈ ಮೊದಲು ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ಮತ್ತು ಮಕ್ಕಳ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಹೆಚ್ಚಿನ ಪ್ರಮಾಣದಲ್ಲಿ ಹೆರಿಗೆಗಳು ಸಹ ನಡೆಯುತ್ತಿದ್ದವು. ಜತೆಗೆ ಹೊರ ರೋಗಿಗಳಿಗೂ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕೋವಿಡ್‌ ಆಸ್ಪತ್ರೆಯನ್ನಾಗಿ ಮಾಡಿದ್ದರಿಂದ ಇವರಿಗೆಲ್ಲ ತೊಂದರೆಯಾಗಿದ್ದು, ವಿಮ್ಸ್‌ ಆಸ್ಪತ್ರೆ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್‌ ಆಸ್ಪತ್ರೆಯನ್ನು ಸ್ಥಳಾಂತರಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಜಿಂದಾಲ್‌ ಸಂಸ್ಥೆಯ ನೌಕರರಿಗೆ ಕೋವಿಡ್‌ ಸೋಂಕು ಆವರಿಸಿದೆ. ಸೋಂಕು ಬಂದ ಕಾರಣಕ್ಕೆ ಕೈಗಾರಿಕೆಯನ್ನು ಬಂದ್‌ ಮಾಡುವ ಅಗತ್ಯವಿಲ್ಲ ಎಂದ ಡಿಸಿ ನಕುಲ್‌, ಕೈಗಾರಿಕೆಯಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗ ಜಿಂದಾಲ್‌ನ 3 ಕಾರ್ಮಿಕರಲ್ಲಿ ಸೋಂಕು ಕಾಣಿಸಿಕೊಂಡಿದೆ. ಸಂಸ್ಥೆಯ ಕೊರೆಕ್ಸ್‌ ಘಟಕದ ಮೂರು ಪಾಳೆಯಲ್ಲಿ 207 ಕಾರ್ಮಿಕರು, 60 ಜನ ಯೂನಿಟ್‌ ಮುಖ್ಯಸ್ಥರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ಸೋಂಕು ಕಾಣಿಸಿಕೊಂಡವರ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಸಂಸ್ಥೆಯಲ್ಲಿ ಒಟ್ಟು 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್‌ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.

ಅಂತರ ರಾಜ್ಯದಿಂದ ಬರುವವರಿಗೆ ಮೂರು ಕಡೆ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ನಡೆಯುತ್ತಿದೆ. ಆಂಧ್ರದಿಂದ ಬರುವವರಿಗೆ ಹೋಂ ಕ್ವಾರಂಟೈನ್‌, ಮಹಾರಾಷ್ಟ್ರದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈವರೆಗೆ 11,010 ಜನರ ಗಂಟಲು ದ್ರವ ಪರೀಕ್ಷೆ ಮಾಡಿದ್ದು, 68 ಜನರಿಗೆ ಪಾಸಿಟಿವ್‌ ಬಂದಿದೆ. ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಕೋವಿಡ್‌ ಪ್ರಕರಣಗಳು ಬರುವ ಸಾಧ್ಯತೆ ಇದೆ ಎಂದು ಭಾವಿಸಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿನ ಆಸ್ಪತ್ರೆಗಳಲ್ಲಿ ಐಸೋಲೇಷನ್‌ ವಾರ್ಡ್‌ಗಳನ್ನು ಸಿದ್ಧಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next