Advertisement

Bellary: ರಾಮುಲು v/s ನಾಗೇಂದ್ರ: ಹಳೆ ದೋಸ್ತಿಗಳ ನಡುವೆ ಕದನ?

12:33 AM Jan 28, 2024 | Team Udayavani |

ಬಳ್ಳಾರಿ: ಗಣಿನಾಡಿನ ಬಳ್ಳಾರಿ ಲೋಕಸಭಾ ಕ್ಷೇತ್ರ ರಾಜ್ಯದಲ್ಲಿ ಮಾತ್ರವಲ್ಲ, ರಾಷ್ಟ್ರದಲ್ಲೂ ಹೆಸರು ಮಾಡಿದ್ದ ಕ್ಷೇತ್ರ. 1999ರಲ್ಲಿ ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಸ್ಪರ್ಧೆಯಿಂದ ಇಡೀ ದೇಶದ ಗಮನ ಸೆಳೆದಿದ್ದ ಈ ಕ್ಷೇತ್ರ, ಅಲ್ಲಿಂದ ನಿರಂತರವಾಗಿ ಕಾಂಗ್ರೆಸ್‌ ಮತ್ತು ಬಿಜೆಪಿಯ ನಡುವಿನ ತುರುಸಿನ ಪೈಪೋಟಿಯ ಕ್ಷೇತ್ರವಾಗಿ ಪರಿಣಮಿಸಿದೆ.

Advertisement

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯ ಐದು ಹಾಗೂ ವಿಜಯನಗರ ಜಿಲ್ಲೆಯ ಎರಡು ಸಹಿತ ಒಟ್ಟು ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದಿದೆ. ಈ ಮೂಲಕ ಅವಳಿ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಹೊಂದಿದೆ. ಗಣಿನಾಡು ಎರಡು ಜಿಲ್ಲೆಗಳಾಗಿ ಹೋಳಾದ ಬಳಿಕ ಅವಳಿ ಜಿಲ್ಲೆಯ ವ್ಯಾಪ್ತಿಯನ್ನು ಹೊಂದಿ ಮೊದಲ ಬಾರಿಗೆ ಲೋಕಸಭೆ ಚುನಾವಣೆ ಯನ್ನು ಎದುರಿಸುತ್ತಿರುವ ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದಿವೆ.

ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಪೈಪೋಟಿ ಜೋರಾಗಿದೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವಾರು ಆಕಾಂಕ್ಷಿಗಳು ತೆರೆಮರೆಯ ಪ್ರಯತ್ನದಲ್ಲಿ ತೊಡಗಿದ್ದಾರೆ.

2018ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪ ರ್ಧಿಸಿದ್ದ ವಿ.ಎಸ್‌.ಉಗ್ರಪ್ಪ, ಬಿಜೆಪಿಯ ಜೆ. ಶಾಂತಾ ವಿರುದ್ಧ ಭರ್ಜರಿ ಮತಗಳ ಅಂತರದಿಂದ ಗೆದ್ದು ಸಂಸತ್‌ ಪ್ರವೇಶಿಸಿದ್ದರು. ಅದಾಗಿ ಒಂದು ವರ್ಷದಲ್ಲೇ ನಡೆದ ಲೋಕಸಭೆ ಚುನಾ ವಣೆಯಲ್ಲಿ ಹಾಲಿ ಸಂಸದ ದೇವೇಂದ್ರಪ್ಪ ವಿರುದ್ಧ ಪರಾಭವಗೊಂಡಿದ್ದರು. ಈಗ ಈ ಬಾರಿಯೂ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಸೋತರೂ ಕ್ಷೇತ್ರದಿಂದ ದೂರ ಉಳಿಯದ ಅವರು, ವಾರಕ್ಕೊಮ್ಮೆ ಆಗಮಿಸಿ ಸಾರ್ವಜನಿಕವಾಗಿ ಕಾಣಿಸಿ ಕೊಳ್ಳುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ಸಹೋದರ ವೆಂಕಟೇಶ್‌ ಪ್ರಸಾದ್‌ ಕೂಡ ಕಾಂಗ್ರೆಸ್‌ ಟಿಕೆಟ್‌ನ ಪ್ರಬಲ ಆಕಾಂಕ್ಷಿ ಯಾಗಿದ್ದಾರೆ. 2018ರ ಉಪ ಚುನಾವಣೆ ಹಾಗೂ 2019ರ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲೂ ಟಿಕೆಟ್‌ಗೆ ಪ್ರಯತ್ನಿಸಿದ್ದರೂ ಸಿಕ್ಕಿರಲಿಲ್ಲ. ಈಗ ಮತ್ತೂಮ್ಮೆ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದಾರೆ.

Advertisement

ಸಚಿವ ನಾಗೇಂದ್ರ ಸ್ಪರ್ಧೆ?
ಇನ್ನೊಂದೆಡೆ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ಶ್ರೀರಾಮುಲು ಸ್ಪರ್ಧಿಸಿದರೆ ಅವರ ವಿರುದ್ಧ ಸಚಿವ ಬಿ.ನಾಗೇಂದ್ರ ಅವರನ್ನೇ ಕಣಕ್ಕಿಳಿಸುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ವರಿಷ್ಠರಿದ್ದಾರೆ. ಇವರಿಬ್ಬರೂ ಹಳೆಯ ದೋಸ್ತಿಗಳು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮುಖಾಮುಖೀ ಆಗಿದ್ದು ನಾಗೇಂದ್ರ ಗೆದ್ದಿದ್ದರು. ಆದರೆ ಸ್ಪರ್ಧೆ ಬಗ್ಗೆ ಅಷ್ಟಾಗಿ ಆಸಕ್ತಿ ತೋರದ ನಾಗೇಂದ್ರ ಅವರು, ಸಹೋದರ ವೆಂಕಟೇಶ್‌ ಪ್ರಸಾದ್‌ ಅವರಿಗೆ ಟಿಕೆಟ್‌ ನೀಡುವಂತೆ ಪಕ್ಷದ ವರಿಷ್ಠರಲ್ಲಿ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀರಾಮುಲು ಕಣಕ್ಕೆ
ಬಿಜೆಪಿ ಅವಳಿ ಜಿಲ್ಲೆಗಳಲ್ಲಿ ತನ್ನದೇ ಆದ ಸಂಘಟನೆ ಶಕ್ತಿ ಹೊಂದಿದೆಯಾದರೂ ಕಳೆದ ವಿಧಾನಸಭೆ ಚುನಾವಣೆಯ ಹೀನಾಯ ಸೋಲು ಪಕ್ಷದ ಕಾರ್ಯಕರ್ತರು, ಮುಖಂಡರಲ್ಲಿ ನಿರುತ್ಸಾಹ ಮೂಡಿಸಿದೆ. ಪರಿಣಾಮ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್‌ಗಾಗಿ ಹೆಚ್ಚು ಪೈಪೋಟಿ ಕಂಡು ಬರುತ್ತಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಸೋತಿರುವ ಶ್ರೀರಾಮುಲು 2014ರಂತೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಈ ಮೊದಲು ರಾಯಚೂರಿನಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದರೂ ಈಗ ಬಳ್ಳಾರಿಯಲ್ಲೇ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ. ಪರಿಣಾಮ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರಣವಾದ ವಿಜಯನಗರ ಜಿಲ್ಲೆಯ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ ಕ್ಷೇತ್ರಗಳಲ್ಲಿ ಹೆಚ್ಚು ಓಡಾಟ ನಡೆಸುತ್ತಿದ್ದಾರೆ. ಪಕ್ಷದ ವರಿಷ್ಠರು ಕೂಡ ಶ್ರೀರಾಮುಲು ಸ್ಪರ್ಧೆಗೆ ಒಲವು ಹೊಂದಿದ್ದಾರೆ ಎಂದು ಪಕ್ಷದ ಬಲ್ಲ ಮೂಲಗಳು ಖಚಿತಪಡಿಸಿವೆ.

ಇನ್ನು ಹಾಲಿ ಸಂಸದ ವೈ.ದೇವೇಂದ್ರಪ್ಪ ಅವರು ವರಿಷ್ಠರು ಅವಕಾಶ ನೀಡಿದರೆ ಸ್ಪ ರ್ಧಿಸುವ ಆಸಕ್ತಿ ತೋರಿದ್ದರೂ ವಯಸ್ಸಿನ ಕಾರಣದಿಂದ ಅವರಿಗೆ ಟಿಕೆಟ್‌ ತಪ್ಪುವ ಸಾಧ್ಯತೆಯಿದೆ. ಸಿರುಗುಪ್ಪ ಶಾಸಕ ಎಂ.ಎಸ್‌.ಸೋಮಲಿಂಗಪ್ಪ ಟಿಕೆಟ್‌ ಆಕಾಂಕ್ಷಿ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದರಾದರೂ ಪಕ್ಷದ ವರಿಷ್ಠರು ಅಷ್ಟಾಗಿ ಪರಿಗಣಿಸಿದಂತಿಲ್ಲ.

ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವುದು ನಿಶ್ಚಿತ. ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಪಕ್ಷದಿಂದ ಅಭ್ಯರ್ಥಿ ಹಾಕುತ್ತಾರೋ, ತಾವೇ ಬಿಜೆಪಿ ಸೇರಿ ಅಭ್ಯರ್ಥಿಯಾಗುತ್ತಾರೋ ಎಂಬುದೂ ಕುತೂಹಲಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next