Advertisement

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

08:09 AM Oct 23, 2024 | Team Udayavani |

ಬೆಂಗಳೂರು: ಬೆಂಗಳೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಅ.23ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಹಾಗೂ ಖಾಸಗಿ ಅಥವಾ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ರವರು ಆದೇಶಿಸಿದ್ದಾರೆ.

Advertisement

ಉಳಿದಂತೆ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಎಂಜಿನಿಯರಿಂಗ್‌ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಲಾಗಿದೆ. ಕಾಲೇಜು ಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜು ಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸಬೇಕು. ದುರ್ಬಲ ಅಥವಾ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಸೂಕ್ತವೆಂದು ಜಿಲ್ಲಾಧಿಕಾರಿ ಜಗದೀಶ್‌ ಸೂಚಿಸಿದ್ದಾರೆ.

ರಜೆ ನೀಡುವುದಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ
ನಗರದಲ್ಲಿ ಸುರಿಯತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡುತ್ತಿರುವ ಜಿಲ್ಲಾಧಿಕಾರಿಗಳ ಕ್ರಮವನ್ನು ಕರ್ನಾಟಕ ರಾಜ್ಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್‌) ವಿರೋಧಿಸಿದೆ. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌, ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ರಜೆ ಘೋಷಿಸುತ್ತಿರುವುದು ನಮಗೆ ಅಸಮಾಧಾನ ತಂದಿದೆ. ನಗರದ ಹಲವು ಶಾಲೆಗಳಿಗೆ ಮಳೆಯಿಂದಾಗಿ ಯಾವುದೇ ಸಮಸ್ಯೆ ಆಗುತ್ತಿಲ್ಲ. ಈಗಾಗಲೇ ದಸರಾ, ಮಳೆ ಮತ್ತೆ ಮುಂದೆ ದೀಪಾವಳಿ ರಜೆ ಎಂದು ಈ ತಿಂಗಳ ಶೈಕ್ಷಣಿಕ ಚಟುವಟಿಕೆಗೆ ಧಕ್ಕೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ.ಮಳೆಯಿಂದ ಯಾವ ಶಾಲೆಗಳಿಗೆ ಸಮಸ್ಯೆ ಆಗುತ್ತಿದೆ, ತಗ್ಗು ಪ್ರದೇಶಗಳಲ್ಲಿರುವ ಶಾಲೆಗಳು ಸ್ವಯಂಪ್ರೇರಿತವಾಗಿ ಮಕ್ಕಳಿಗೆ ರಜೆ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇಂದೂ ನಗರದಲ್ಲಿ ಮಳೆ ಆರ್ಭಟ: ಹಳದಿ ಅಲರ್ಟ್‌
ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಆರ್ಭಟ ಬುಧವಾರವೂ ಮುಂದುವರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಅ.24ರ ವರೆಗೂ ಸಾಧಾರಣ ಮಳೆ ಮುಂದುವರಿಯಲಿದೆ. ಬುಧವಾರವೂ ಭಾರಿ ಮಳೆಯಾಗುವ ಸಂಭವವಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಹಳದಿ ಅಲರ್ಟ್‌ ಘೋಷಿಸಿದೆ. ಇನ್ನು ಮಂಗಳವಾರ ಮಧ್ಯಾಹ್ನ3 ಗಂಟೆಗೆ ನಗರದೆಲ್ಲೆಡೆ ಕೆಲ ಕಾಲ ಉತ್ತಮ ಮಳೆ ಸುರಿ ದಿದೆ. ಜನ ಸಾಮಾನ್ಯರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಲಾಖೆ ನಿರ್ದೇಶಕ ಪಾಟೀಲ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next