Advertisement

ಬಿಜೆಪಿ ಸೇರಲ್ಲ, ವಿಷಯಾಧಾರಿತ ಬೆಂಬಲ ನೀಡಬಹುದು: ಸುಮಲತಾ

01:45 AM May 27, 2019 | Sriram |

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಸುಮಲತಾ ಅಂಬರೀಷ್‌, ತಮ್ಮ ಗೆಲುವಿಗೆ ಬೆಂಬಲ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿದರು.

Advertisement

ಇಬ್ಬರೂ ನಾಯಕರ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮಂಡ್ಯದ ಜನತೆ ನನಗೆ ಆಶೀರ್ವಾದ ಮಾಡಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಲಿದ್ದೇನೆ. ಪಕ್ಷೇತರ ಅಭ್ಯರ್ಥಿಯಾಗಿ ಯಾವುದೇ ಪಕ್ಷ ಸೇರಲು ಅವಕಾಶ ಇಲ್ಲದಿರುವುದರಿಂದ ವಿಷಯಾಧಾರಿತ ಬೆಂಬಲಿಸಲು ಅವಕಾಶವಿದೆ. ನಾನು ಏನೇ ನಿರ್ಧಾರ ಕೈಗೊಂಡರೂ ನನಗೆ ಮತ ನೀಡಿದ ಮಂಡ್ಯ ಕ್ಷೇತ್ರದ ಜನತೆಯನ್ನು ಕೇಳಿ, ನಂತರ ನಿರ್ಧರಿಸುತ್ತೇನೆ’ ಎಂದರು.

‘ಈ ಚುನಾವಣೆಯಲ್ಲಿ ಬಿಜೆಪಿಯವರು ನನಗೆ ಬಹಿರಂಗ ಬೆಂಬಲ ಕೊಟ್ಟಿರುವುದರಿಂದ ಮುಂದೆಯೂ ಬಿಜೆಪಿಯವರು ಮಂಡ್ಯದ ಅಭಿವೃದ್ಧಿಗೆ ಸಹಕಾರ ನೀಡುತ್ತಾರೆ ಎನ್ನುವ ವಿಶ್ವಾಸ ಇದೆ. ಎಲ್ಲ ಪಕ್ಷದವರೂ ನನ್ನ ಗೆಲುವಿಗೆ ಶ್ರಮಿಸಿದ್ದಾರೆ. ಪರೋಕ್ಷವಾಗಿ ನನಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್‌ ನಾಯಕರಿಗೂ ನನ್ನ ಅಭಿನಂದನೆ ಸಲ್ಲಿಸುತ್ತೇನೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದು ಅಭಿವೃದ್ಧಿಗೆ ಒಳ್ಳೆಯ ಸಂದೇಶ ನೀಡಿದಂತೆ’ ಎಂದರು.

‘ಕೇಂದ್ರದಲ್ಲಿ ಮಂತ್ರಿ ಸ್ಥಾನ ನೀಡುವ ಬಗ್ಗೆ ಊಹಾತ್ಮಕ ವಿಚಾರಗಳ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಮಂಡ್ಯದ ಅಭಿವೃದ್ಧಿಗಾಗಿ ಮಂಡ್ಯದ ಜನತೆ ಏನು ಹೇಳುತ್ತಾರೋ ಅದನ್ನು ನಾನು ಮಾಡುತ್ತೇನೆ. ನಾನು ಉತ್ತರ ಕೊಡಬೇಕಾಗಿರುವುದು ನನ್ನನ್ನು ಆಯ್ಕೆ ಮಾಡಿರುವ ಜನರಿಗೆ. ಯಾರೋ ಹೇಳಿದರು ಎನ್ನುವುದಕ್ಕೆ ಅವರು ಹೇಳಿದಂತೆ ಕೇಳುವ ಅಗತ್ಯವಿಲ್ಲ’ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಮಾತಿಗೆ ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next