ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ನಿಂದ ಗೆಲ್ಲುವ ಸಾಮರ್ಥ್ಯ ಹಾಗೂ ಕ್ಷೇತ್ರಗಳಲ್ಲಿ ವೈಯಕ್ತಿಕ ವರ್ಚಸ್ಸು ಹೊಂದಿರುವ ಮತ್ತಷ್ಟು ಶಾಸಕರು ಹಾಗೂ ಮಾಜಿ ಶಾಸಕರನ್ನು ಸೆಳೆಯಲು ಮುಂದಾಗಿರುವ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಸ್ವಲ್ಪ ಮುಂದಕ್ಕೆ ಹಾಕಿದೆ ಎಂದು ಮೂಲಗಳು ತಿಳಿಸಿವೆ.
ಮಾಲೀಕಯ್ಯ ಗುತ್ತೇದಾರ್, ಮಲ್ಲಿಕಾರ್ಜುಕ ಖೂಬಾ, ಎ.ಎಸ್.ಪಾಟೀಲ್ ನಡಹಳ್ಳಿ ಅವರಂತೆ ಕ್ಷೇತ್ರದಲ್ಲಿ ವರ್ಚಸ್ಸು ಹೊಂದಿರುವ ಸ್ವಂತ ಶಕ್ತಿಯ ಮೇಲೆ ಗೆಲ್ಲಬಲ್ಲ ಕೆಲವು ಹಾಲಿ ಶಾಸಕರು ಹಾಗೂ ಮಾಜಿ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ.
ಹೀಗಾಗಿ, ಸ್ವಲ್ಪ ದಿನ ಕಾದು ನೋಡಿ ಆಪರೇಷನ್ ಕಮಲ ಕಾರ್ಯಾಚರಣೆ ಪೂರ್ಣಗೊಂಡ ನಂತರ ಅಭ್ಯರ್ಥಿಗಳ ಪಟ್ಟಿ ಘೋಷಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ಈಗಾಗಲೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿಯ ಕೆಲವು ಹಾಲಿ ಶಾಸಕರ ಬಗ್ಗೆಯೂ ಮತದಾರರ ವಿರೋಧ ಇದೆ. ಹೀಗಾಗಿ, ಅಂತಹ ಕ್ಷೇತ್ರಗಳಲ್ಲಿ ಇತರೆ ಪಕ್ಷಗಳ ಹಾಗೂ ಬಿಜೆಪಿಯಲ್ಲೇ ಇರುವ ಸಮರ್ಥರ ತಲಾಷೆ ನಡೆಸಲಾಗುತ್ತಿದೆ. ಹೀಗಾಗಿ, ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ ಮಾಡಿಲ್ಲ ಎನ್ನಲಾಗಿದೆ.
ಏ.4,5 ಹಾಗೂ 7 ರಂದು ಅಮಿತ್ ಶಾ ಸಭೆ ನಡೆಸಲಿದ್ದು ಕೋರ್ ಕಮಿಟಿ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಆಕಾಂಕ್ಷಿಗಳೊಂದಿಗೆ ಸಭೆ ಸಮಾಲೋಚನೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.
ಆ ನಂತರ ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲಿದೆ. ಈ ಮುಂಚೆ ಏ.10 ರೊಳಗೆ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇತ್ತಾದರೂ ಇದೀಗ ಏ.15 ಆಗಬಹುದು ಎಂದು ಹೇಳಲಾಗಿದೆ.