Advertisement

ಕಾಂಗ್ರೆಸ್‌ ಹಗರಣ ಬಯಲಿಗೆಳೆಯಲು ಬಿಜೆಪಿ ನಿರ್ಧಾರ

08:42 PM Sep 04, 2022 | Team Udayavani |

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ನಿರಂತರವಾಗಿ “40 ಪರ್ಸೆಂಟ್‌ ಸರ್ಕಾರ’ ಎಂದು ಆರೋಪಿಸುತ್ತಿರುವ ಕಾಂಗ್ರೆಸ್‌ಗೆ ಕೌಂಟರ್‌ ನೀಡಲು ಬಿಜೆಪಿ ನಾಯಕರು ನಿರ್ಧರಿಸಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಾಗಿದ್ದ ಹಗರಣಗಳನ್ನು ಬಯಲಿಗೆಳೆಯಲು ತೀರ್ಮಾನಿಸಿದ್ದಾರೆ.

Advertisement

ಭಾನುವಾರ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಪ್ರಮುಖ ನಾಯಕರ ಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ ಅನೇಕ ಹಗರಣಗಳ ಕುರಿತು ತಾರ್ಕಿಕ ಅಂತ್ಯ ಕಾಣಿಸಲು ಆಗಿಲ್ಲ. ಹೀಗಾಗಿ ಆ ಪ್ರಕರಣಗಳ ಬಗ್ಗೆ ಈಗ ದಾಖಲೆಗಳನ್ನು ಬಿಡುಗಡೆ ಮಾಡಿ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಅನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಮುಖವಾಗಿ ಆಗ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿ ಬಂದಿದ್ದ ಅರ್ಕಾವತಿ ರಿ ಡೂ ಪ್ರಕರಣ, ಸಮಾಜ ಕಲ್ಯಾಣ ಸಚಿವರಾಗಿದ್ದ ಎಚ್‌.ಆಂಜನೇಯ ವಿರುದ್ಧ ಕೇಳಿ ಬಂದಿದ್ದ ಹಾಸಿಗೆ ದಿಂಬು ಹಗರಣ, ಇಂಧನ ಇಲಾಖೆಯಲ್ಲಿನ ಸೋಲಾರ್‌ ಅಳವಡಿಕೆ ಹಂಚಿಕೆ ಹಗರಣ ಸೇರಿ ಹಿಂದಿನ ಸರ್ಕಾರದ ಸಚಿವರ ವಿರುದ್ಧ ಕೇಳಿಬಂದಿದ್ದ ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಬಿಡುಗಡೆಗೊಳಿಸುವುದು. ಆ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದಕ್ಕೆ ತಿರುಗೇಟು ನೀಡಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೆಂಪಣ್ಣ ವಿರುದ್ಧ ಪ್ರಕರಣ ದಾಖಲು:
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ರಾಜ್ಯ ಸರ್ಕಾರದ ವಿರುದ್ಧ ನಿರಂತರವಾಗಿ 40 ಪರ್ಸೆಂಟ್‌ ಲಂಚದ ಆರೋಪ ಮಾಡುತ್ತಿದ್ದಾರೆ. ಆರೋಪಗಳಿಗೆ ಸಂಬಂಧಿಸಿ ಸೂಕ್ತ ದಾಖಲೆ ಕೇಳಿದರೂ, ಅವರು ದಾಖಲೆ ನೀಡದೇ ಆರೋಪ ಮುಂದುವರಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಪ್ರಕರಣ ದಾಖಲಿಸಲು ಬಿಜೆಪಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಅಧಿವೇಶನದ ನಂತರ ರಾಜ್ಯ ಪ್ರವಾಸ:
ವಿಧಾನಸಭೆ ಚುನಾವಣೆಗೆ ಪೂರಕವಾಗಿ ರಾಜ್ಯ ಪ್ರವಾಸಗಳನ್ನು ಕೈಗೊಳ್ಳುವ ಬಗ್ಗೆಯೂ ನಿರ್ಧರಿಸಲಾಗಿದೆ. ಸೆ.23ರವರೆಗೆ ನಡೆಯುವ ರಾಜ್ಯ ವಿಧಾನಮಂಡಲದ ಅಧಿವೇಶನದ ನಂತರ ರಾಜ್ಯ ಪ್ರವಾಸ ಆರಂಭಿಸಲು ತೀರ್ಮಾನಿಸಲಾಯಿತು ಎಂದು ತಿಳಿದು ಬಂದಿದೆ. ಈಗಾಗಲೇ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷ ಕಟೀಲ್‌ ನೇತೃತ್ವದಲ್ಲಿ ತಲಾ 50 ಕ್ಷೇತ್ರಗಳಲ್ಲಿ ಪ್ರವಾಸ ಮಾಡುವ ಕುರಿತು ನಿರ್ಧರಿಸಲಾಗಿತ್ತು. ಈಗ ಮಾಜಿ ಸಿಎಂ ಯಡಿಯೂರಪ್ಪ ಅವರು ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾಗಿ ನೇಮಕಗೊಂಡ ನಂತರ ಪ್ರವಾಸದ ತಂಡಗಳನ್ನು ರಚಿಸುವ ಬಗ್ಗೆ ಪಕ್ಷದ ಮಟ್ಟದಲ್ಲಿ ಗೊಂದಲ ಉಂಟಾಗಿದೆ ಎನ್ನಲಾಗಿದ್ದು, ಮತ್ತೆ ಇನ್ನೆರಡು ತಂಡಗಳ ರಚನೆ ಸಾಧ್ಯತೆಯೂ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಕಾಂಗ್ರೆಸ್‌ ಕಾಲದಲ್ಲಿ ನಡೆಸಿ ಮರೆಮಾಚಲಾದ ಹಗರಣಗಳನ್ನೂ ಬಯಲಿಗೆ ಎಳೆಯಬೇಕು. ಆ ಹಗರಣಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸುದೀರ್ಘ‌ವಾಗಿ ಚರ್ಚೆ ನಡೆಸಲಾಗಿದೆ.
– ಸಿ.ಟಿ.ರವಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

Advertisement

Udayavani is now on Telegram. Click here to join our channel and stay updated with the latest news.

Next