Advertisement

Teacher’s election: ಶಿಕ್ಷಕರ ಚುನಾವಣೆಗೆ ಬಿಜೆಪಿ ತಾಲೀಮು ಶುರು!

05:35 PM Sep 06, 2023 | Team Udayavani |

ಚಿಕ್ಕಬಳ್ಳಾಪುರ: ಒಂದಡೆ ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಯುತ್ತಿರುವ ಬೆನ್ನಲೇ 2024 ರಲ್ಲಿ ಎದುರಾಗಲಿರುವ ಆಗ್ನೇಯ ಶಿಕ್ಷಕರ ಚುನಾವಣೆಗೆ ಬಿಜೆಪಿ ತನ್ನ ತಾಲೀಮು ಶುರು ಮಾಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Advertisement

ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ದಾವಣಗೆರೆಯ ಹಲವು ತಾಲೂಕುಗಳನ್ನೊಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ 2024 ಮೇ ತಿಂಗಳ ಒಳಗೆ ಘೋಷಣೆ ಆಗಲಿರುವ ಹಿನ್ನಲೆಯಲ್ಲಿ ಜಿಲ್ಲೆಯ ಬಿಜೆಪಿ ನಾಯಕರು ಚುನಾವಣೆ ಕಾರ್ಯಕತಂತ್ರಗಳ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಸಭೆ ಸೇರಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈಗಾಗಲೇ 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌, ಬಿಜೆಪಿ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು ಟಿಕೆಟ್‌ ಆಕಾಂಕ್ಷಿಗಳು ಟಿಕೆಟ್‌ಗಾಗಿ ಈಗನಿಂದಲೇ ಲಾಭಿ ಶುರುವು ಮಾಡಿ ಮತದಾರರ ಮನ ಸೆಳೆಯಲು ವಿವಿಧ ಸೇವಾ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಇದೀಗ ಆಗ್ನೇಯ ಶಿಕ್ಷಕರ ಚುನಾವಣೆಗೆ ಬಿಜೆಪಿ ಆಡಳಿತ ಕಾಂಗ್ರೆಸ್‌ ಪಕ್ಷಕ್ಕಿಂತ ಮುಂಚೆಯೆ ಎಚ್ಚೆತ್ತುಕೊಂಡು ಚುನಾವಣಾ ರಾಜಕೀಯ ತಂತ್ರಗಾರಿಕೆಗೆ ಮುಂದಾಗಿರುವುದು ಕುತೂಹಲ ಕೆರಳಿಸಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ಸದ್ಯ ಬಿಜೆಪಿ ವಶದಲ್ಲಿದ್ದು ವೈ.ಎ.ನಾರಾಯಣಸ್ವಾಮಿ ಪ್ರತಿನಿಧಿಸುತ್ತಿದ್ದಾರೆ.

ಹೀಗಾಗಿ ಕ್ಷೇತ್ರವನ್ನು ಮತ್ತೆ ತಮ್ಮ ವಶಕ್ಕೆ ಪಡೆಯುವುದು ಬಿಜೆಪಿಗೆ ದೊಡ್ಡ ಸವಾಲಾಲಾಗಿದೆ. ಈಗಾಗಿ ಈಗನಿಂದಲೇ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ತಯಾರಿ ನಡೆಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರನ್ನು ಉಸ್ತುವಾರಿಗಳಾಗಿ ನೇಮಕ ಮಾಡಿದ್ದು, ಅವರ ನೇತೃತ್ವದಲ್ಲಿ ಮಂಗಳವಾರ ಬೆಂಗಳೂರಿನಲ್ಲಿ ಮೊದಲ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ, ಚುನಾವಣಾ ತಯಾರಿ ಬಗ್ಗೆ ಜಿಲ್ಲೆಯ ಬಿಜೆಪಿ ನಾಯಕರು ಮಹತ್ವದ ಚರ್ಚೆ ನಡೆಸಿದ್ದಾರೆ.

ಲೋಕಸಭಾ ಅಭ್ಯರ್ಥಿ ಬಗ್ಗೆಯು ಚರ್ಚೆ: ಆಗ್ನೇಯ ಶಿಕ್ಷಕರ ಚುನಾವಣೆ ವಿಚಾರವಾಗಿ ಸಭೆ ನಡೆದಿದ್ದರೂ ಅಲ್ಲಿ ಪ್ರಮುಖವಾಗಿ 2024 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ಬಗ್ಗೆ ಅದರಲ್ಲೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕುರಿತಂತೆ ಹೆಚ್ಚಿನ ಚರ್ಚೆ ನಡೆದಿದೆಯೆಂದು ಬಲ್ಲಮೂಲಗಳು ಉದಯವಾಣಿಗೆ ತಿಳಿಸಿವೆ. ಕ್ಷೇತ್ರದ ಹಾಲಿ ಸಂಸದ ಬಿ.ಎನ್‌.ಬಚ್ಚೇಗೌಡ ಈಗಾಗಲೇ ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿರುವ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರಗಬೇಕೆಂಬ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಜಿಲ್ಲೆಯ ಬಹುತೇಕ ನಾಯಕರು ಮಾಜಿ ಸಚಿವರಾದ ಡಾ.ಕೆ.ಸುಧಾಕರ್‌ ಅಭ್ಯರ್ಥಿ ಆಗಬೇಕೆಂಬ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆಂದು ತಿಳಿದು ಬಂದಿದೆ.

Advertisement

ಒಟ್ಟಿನಲ್ಲಿ 2024 ರಲ್ಲಿ ಎದುರಾಗಲಿರುವ ಸಾಲು ಸಾಲು ಚುನಾವಣೆಗಳನ್ನು ಎದುರಿಸುವ ನಿಟ್ಟಿನಲ್ಲಿ ಅದರಲ್ಲೂ ಲೋಕಸಭೆ, ಆಗ್ನೇಯ ಶಿಕ್ಷಕರ ಚುನಾವಣೆ, ಜಿಪಂ, ತಾಪಂ ಚುನಾವಣೆಗಳನ್ನು ಬಲವಾಗಿ ಎದುರಿಸುವ ನಿಟ್ಟಿನಲ್ಲಿ ಆಡಳಿತರೂಢ ಕಾಂಗ್ರೆಸ್‌ಗಿಂತ ಒಂದು ಹೆಜ್ಜೆ ಮುಂದಿರುವ ಬಿಜೆಪಿ ಈಗನಿಂದಲೇ ತಾಲೀಮು ಶುರು ಮಾಡಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವುದು ಅಂತೂ ನಿಜ.

ಬಿಜೆಪಿ ಪರಾಜಿತ ಅಭ್ಯರ್ಥಿಗಳು ಮುಖಾಮುಖಿ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್‌, ಜೆಡಿಎಸ್‌ ವಿರುದ್ಧ ಸೋತಿರುವ ಚಿಕ್ಕಬಳ್ಳಾಪುರದ ಡಾ.ಕೆ.ಸುಧಾಕರ್‌, ಗೌರಿಬಿದನೂರಿನ ಅಭ್ಯರ್ಥಿ ಡಾ.ಶಶಿಧರ್‌, ಬಾಗೇಪಲ್ಲಿ ಕ್ಷೇತ್ರದ ಸಿ.ಮುನಿರಾಜು, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿದ್ದ ಸೀಕಲ್ಲು ರಾಮಚಂದ್ರಗೌಡ, ಚಿಂತಾಮಣಿ ವಿಧಾನಸಬಾ ಕ್ಷೇತ್ರದ ಜಿ.ಎನ್‌.ವೇಣುಗೋಪಾಲ್‌ ಸಭೆಯಲ್ಲಿ ಮುಖಾಮುಖಿ ಆಗಿ ಮುಂದಿನ ಲೋಕಸಭೆ, ಆಗ್ನೆಯ ಶಿಕ್ಷರ ಚುನಾವಣೆ ಬಗ್ಗೆ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ಮುಂದಿನ 2024 ಮೇ ತಿಂಗಳಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು ಈ ಸಂಬಂದ ಮಾಜಿ ಸಿಎಂ ಹಾಗೂ ಚುನಾವಣಾ ಉಸ್ತುವಾರಿಗಳಾದ ಡಿ.ವಿ.ಸದಾನಂದಗೌಡರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಬಿಜೆಪಿ ನಾಯಕರು ಸಭೆ ಸೇರಿ ಚರ್ಚೆ ನಡೆಸಲಾಗಿದೆ. ಇದರ ಜತೆಗೆ ಮುಂದಿನ ಲೋಕಸಭಾ ಚುನಾವಣಾ ತಯಾರಿ ಬಗ್ಗೆ ಹಾಗೂ ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆ ನಡೆಸುವ ಬಗ್ಗೆ ಚರ್ಚೆ ಮಾಡಲಾಯಿತು. -ರಾಮಲಿಂಗಪ್ಪ, ಬಿಜೆಪಿ ಜಿಲ್ಲಾಧ್ಯಕ್ಷರು

-ಕಾಗತಿ ನಾಗರಾಜಪ್ಪ

Advertisement

Udayavani is now on Telegram. Click here to join our channel and stay updated with the latest news.

Next