Advertisement

Dalit ರಾಜ್ಯಪಾಲರ ನಿಂದನೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

02:25 AM Aug 23, 2024 | Team Udayavani |

ಬೆಂಗಳೂರು / ಹುಬ್ಬಳ್ಳಿ / ಮಣಿಪಾಲ: ದಲಿತ ಸಮುದಾಯಕ್ಕೆ ಸೇರಿದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್‌ ನಾಯಕರ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯು ಗುರುವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸಿತು.

Advertisement

ಬಿಜೆಪಿ ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದ ಪ್ರತಿಭಟನೆಯಲ್ಲಿ ರಸ್ತೆ ತಡೆ, ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನಸಭೆ ವಿಪಕ್ಷದ ನಾಯಕ ಆರ್‌. ಅಶೋಕ್‌ ಪಾಲ್ಗೊಂಡಿದ್ದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಧಾನ ಪರಿಷತ್‌ ಉಪನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ, ತುಮಕೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಪಾಲ್ಗೊಂಡು ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ನಾಯಕರ ಅವಹೇಳನಕಾರಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಪಾಲರ ಅವಹೇಳನವನ್ನು ಖಂಡಿಸಿ ಮಂಗಳೂರಿನಲ್ಲೂ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಬಿಜೆಪಿ ಶಾಸಕ ಡಾ| ಭರತ್‌ ಶೆಟ್ಟಿ, ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನಿಡಿದ ಐವಾನ್‌ ಡಿ’ಸೋಜಾ ವಿರುದ್ದ ನ್ಯಾಯಾಲಯದ ಮೊರೆ ಹೋಗುವುದಾಗಿ ತಿಳಿಸಿದರು.

ದಾವಣಗೆರೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಿಂದ ಉಪ ವಿಭಾಗಾಧಿಕಾರಿ ಕಚೇರಿಯವರೆಗೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಉಪ ವಿಭಾಗಾಧಿಕಾರಿ ಕಚೇರಿ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಸ್ವಲ್ಪ ಕಾಲ ರಸ್ತೆ ತಡೆ ನಡೆಸಿದರು. ಧಾರವಾಡ, ಕೊಪ್ಪಳ, ಬೆಳಗಾವಿ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಮೈಸೂರು, ಹಾಸನ ಸೇರಿ ಹಲವೆಡೆ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.

Advertisement

ರಾಜ್ಯಪಾಲರು ಬೆದರುಗೊಂಬೆ ಅಲ್ಲ. ರಾಜ್ಯದ ಆಡಳಿತ ಯಂತ್ರ ದುರುಪಯೋಗವಾದಾಗ, ಸಾರ್ವಜನಿಕ ಆಸ್ತಿಯನ್ನು ಸ್ವಾರ್ಥಕ್ಕೆ ಬಳಸಿಕೊಂಡಾಗ, ಸರಕಾರ ತಪ್ಪುದಾರಿಗೆ ಇಳಿದಾಗ ರಾಜ್ಯಪಾಲರು ಕಾನೂನಾತ್ಮಕ ಕಾರ್ಯಾಚರಣೆ ಮಾಡುತ್ತಾರೆ. ತಮ್ಮ ಕರ್ಮಕಾಂಡವನ್ನು ಮುಚ್ಚಿಕೊಳ್ಳಲು ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಮಾತನಾಡುವುದನ್ನು ಕಾಂಗ್ರೆಸ್‌ ನಾಯಕರು ನಿಲ್ಲಿಸಬೇಕು.
-ಡಿ.ವಿ. ಸದಾನಂದ ಗೌಡ,
ಮಾಜಿ ಸಿಎಂ

ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ರಾಜ್ಯಪಾಲರನ್ನು ಜಾತಿ ಆಧಾರದ ಮೇಲೆ ನೇಮಕ ಮಾಡಿಲ್ಲ ಎನ್ನುತ್ತಾರೆ. ನಿಮ್ಮ ಮುಖ್ಯಮಂತ್ರಿಯನ್ನು ಕೂಡ ಜಾತಿ ಆಧಾರದ ಮೇಲೆ ಮಾಡಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಅವರು ಇಡೀ ರಾಜ್ಯದ ಜನರಿಗೂ ಮುಖ್ಯಮಂತ್ರಿ, ಒಂದು ಜಾತಿಗೆ ಸೀಮಿತವಲ್ಲ.
– ಆರ್‌. ಅಶೋಕ್‌,
ವಿಧಾನಸಭೆ ವಿಪಕ್ಷದ ನಾಯಕ

Advertisement

Udayavani is now on Telegram. Click here to join our channel and stay updated with the latest news.

Next