Advertisement

CM Siddaramaiah ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

12:03 AM Aug 20, 2024 | Team Udayavani |

ಉಡುಪಿ: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿ ಕ್ಯೂಷನ್‌ಗೆ ಆದೇಶ ನೀಡಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತತ್‌ಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪಕ್ಷದ ಕಚೇರಿ ಎದುರಿನ ರಸ್ತೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

Advertisement

ಪ್ರತಿಭಟನೆಯ ಬಳಿಕ ಕೆಲಕಾಲ ಉಡುಪಿ-ಮಣಿಪಾಲ ರಸ್ತೆ ತಡೆ ನಡೆಸಿ, ಕಾಂಗ್ರೆಸ್‌ ಸರಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ಮಾತನಾಡಿ, ಸಿದ್ದರಾಮಯ್ಯ ಅವರ ಮೇಲೆ ಸಾಲು ಸಾಲು ಆರೋಪಗಳು ಬಂದರೂ ಯಾವುದನ್ನು ಒಪ್ಪಿ ಕೊಳ್ಳಲು ತಯಾರಿಲ್ಲ. ನ್ಯಾಯ, ನೀತಿಯ ಬಗ್ಗೆ ಮಾತನಾಡುವವರು ತಮ್ಮ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಿಲ್ಲ ಏಕೆ? ಈಗ ಎಲ್ಲ ಕಡೆ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ರಾಜ್ಯದ ಉದ್ಧಾರ ಮಾಡುವ ಬದಲಿಗೆ ತಮ್ಮ ಕುಟುಂಬವನ್ನು ಉದ್ಧಾರ ಮಾಡಿಕೊಂಡಿದ್ದಾರೆ. ದುರಾಡಳಿತ ಹೆಚ್ಚಾಗುತ್ತಿದೆ. ಸಿದ್ದರಾಮಯ್ಯ ಅವರು ತತ್‌ಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯ ಅವರ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದ ವರಿಷ್ಠರು ಎಲ್ಲ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ ಎಂದ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಸಿದ್ದರಾಮಯ್ಯ ಅವರು ತಮ್ಮ ಮೇಲೆ ಆರೋಪ ಬಂದ ಕೂಡಲೇ ರಾಜೀನಾಮೆ ನೀಡಬೇಕಿತ್ತು. ಆದರೆ ನೀಡಿಲ್ಲ. ಬಿಜೆಪಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದರು.

ವಿಭಾಗ ಪ್ರಭಾರಿ ಕೆ.ಉದಯ ಕುಮಾರ್‌ ಶೆಟ್ಟಿ ಮಾತನಾಡಿ, ಸಿದ್ದರಾಮಯ್ಯ ಅವರು ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಆಸ್ತಿಯನ್ನು ಅಕ್ರಮವಾಗಿ ಕಬಳಿಸಿದ್ದಾರೆ. ಮೊಂಡುವಾದ ಬಿಟ್ಟು ತತ್‌ಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Advertisement

ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಪ್ರಮುಖರಾದ ರೇಶ್ಮಾ ಉದಯ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಶ್ಯಾಮಲಾ ಕುಂದರ್‌, ವಿಜಯ ಕುಮಾರ್‌ ಕೊಡವೂರು ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next