Advertisement

ಬಿಜೆಪಿ ಒಡೆಯುವ ಯತ್ನದಲ್ಲಿ ಜೆಡಿಎಸ್‌ಗೆ ಹಿನ್ನಡೆ?

06:35 AM Sep 13, 2018 | Team Udayavani |

ಬೆಂಗಳೂರು: ಸಮ್ಮಿಶ್ರ ಸರ್ಕಾರ ಉರುಳಿಸಲು ಪ್ರತಿಪಕ್ಷ ಬಿಜೆಪಿ ಪ್ರಯತ್ನಿಸಿದರೆ ಸರ್ಕಾರ ಉಳಿಸಿಕೊಳ್ಳಲು ಆ ಪಕ್ಷದ ಶಾಸಕರನ್ನು ಸೆಳೆಯುವ ಜೆಡಿಎಸ್‌ ಪ್ರಯತ್ನಕ್ಕೆ ತೀವ್ರ ಹಿನ್ನಡೆಯಾಗಿದೆ. ಜೆಡಿಎಸ್‌ಗೆ ಸಮೀಪವಾಗಿದ್ದ ಬಿಜೆಪಿಯ ಒಂದಿಬ್ಬರು ಶಾಸಕರು ಕಾಂಗ್ರೆಸ್‌ನಲ್ಲಿ ಜಾರಕಿಹೊಳಿ ಸಹೋದರರ ಪ್ರಕರಣದ ಬಳಿಕ ದೂರ ಸರಿದಿದ್ದಾರೆ.

Advertisement

ಹೀಗಾಗಿ ಬಿಜೆಪಿಯ ಸರ್ಕಾರ ಉರುಳಿಸುವ ಪ್ರಯತ್ನಕ್ಕೆ ತಿರುಗೇಟು ನೀಡಲು ನಿರ್ಧರಿಸಿದ್ದ ಜೆಡಿಎಸ್‌ಗೆ ಆತಂಕ ಕಾಣಿಸಿಕೊಂಡಿದ್ದು, ಸರ್ಕಾರ ಉರುಳುವ ಪರಿಸ್ಥಿತಿ ಉದ್ಭವಿಸಿದರೆ ತನ್ನ ಶಾಸಕರು ಬಿಜೆಪಿಯತ್ತ ಹೋಗದಂತೆ ನೋಡಿಕೊಳ್ಳಲು ಗಮನಹರಿಸಬೇಕಾದ ಪರಿಸ್ಥಿತಿ ಬಂದಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದರೂ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯಿಂದಾಗಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ ರಾಜೀನಾಮೆ ನೀಡಬೇಕಾಗಿ ಬಂದಿತ್ತು. ಹೀಗಾಗಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಎರಡೂ ಪಕ್ಷಗಳಿಗೆ ಆಪರೇಷನ್‌ ಕಮಲದ ಭೀತಿ ಎದುರಾಗಿತ್ತು.

ಈ ಕಾರಣದಿಂದಾಗಿ ಬಿಜೆಪಿಯ ಆಪರೇಷನ್‌ ಕಮಲಕ್ಕೆ ಪ್ರತ್ಯುತ್ತರವಾಗಿ ಕಮಲಕ್ಕೇ ಆಪರೇಷನ್‌ ನಡೆಸಬೇಕು ಎಂಬ ಉದ್ದೇಶದಿಂದ ಈ ಹಿಂದೆ ಜನತಾ ದಳದಲ್ಲಿದ್ದು ನಂತರದಲ್ಲಿ ಬಿಜೆಪಿ ಸೇರಿ ಶಾಸಕರಾಗಿದ್ದ ಇಬ್ಬರು ಸೇರಿದಂತೆ ಐದು ಮಂದಿಯನ್ನು ಸೆಳೆಯಲು ಪ್ರಯತ್ನಿಸಿತ್ತು. ಬಿಜೆಪಿಯ ಆಮಿಷಕ್ಕೆ ಒಳಗಾಗಿ ಕಾಂಗ್ರೆಸ್‌ ಅಥವಾ ಜೆಡಿಎಸ್‌ ಶಾಸಕರು ರಾಜೀನಾಮೆ ನೀಡಿ ಸರ್ಕಾರ ಅಲ್ಪಮತಕ್ಕೆ ಕುಸಿಯುವಂತೆ ಮಾಡಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸಂಖ್ಯಾಬಲವನ್ನು ಕಡಿಮೆ ಮಾಡಲು ಇಬ್ಬರು ಶಾಸಕರು ಬಹುತೇಕ ಒಪ್ಪಿದ್ದರು. ಜತೆಗೆ ತಮ್ಮೊಂದಿಗೆ ಇನ್ನೂ ಮೂವರು ಶಾಸಕರ ಬರಲಿದ್ದಾರೆ.

ಸಂದರ್ಭ ಬಂದಾಗ ನಿರ್ಧಾರ ಕೈಗೊಳ್ಳುವುದಾಗಿತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಶಾಸಕರನ್ನು ಮತ್ತೆ ಜೆಡಿಎಸ್‌ನಿಂದ ಗೆಲ್ಲಿಸಿ ಅವರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಜೆಡಿಎಸ್‌ ಈ ರೀತಿ ರಾಜೀನಾಮೆ ಕೊಡುವ ಭರವಸೆ ನೀಡಲಾಗಿತ್ತು ಎಂದು ಹೇಳಲಾಗಿದೆ.

Advertisement

ಈ ಕಾರಣಕ್ಕಾಗಿಯೇ ಬಿಜೆಪಿಯ ಐವರು ಶಾಸಕರು ರಾಜೀನಾಮೆ ಕೊಟ್ಟು ನಮ್ಮೊಂದಿಗೆ ಬರಲು ಸಿದ್ಧರಾಗಿದ್ದಾರೆ. ಬಿಜೆಪಿಯವರು ಸರ್ಕಾರ ಉರುಳಿಸುವ ಪ್ರಯತ್ನ ಮಾಡಿದರೆ ಅದನ್ನು ಉಳಿಸಿಕೊಳ್ಳುವುದು ಹೇಗೆ ಎಂಬುದು ನಮಗೆ ಗೊತ್ತು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆದಿಯಾಗಿ ಜೆಡಿಎಸ್‌ ನಾಯಕರು ಹೇಳಿಕೆ ನೀಡಿದ್ದರು.

ಆದರೆ, ಕಾಂಗ್ರೆಸ್‌ನ ಸಚಿವ ರಮೇಶ್‌ ಜಾರಕಿಹೊಳಿ ಮತ್ತು ಅವರ ಸಹೋದರ ಸತೀಶ್‌ ಜಾರಕಿಹೊಳಿ ಪ್ರಕರಣದಿಂದಾಗಿ ಕಾಂಗ್ರೆಸ್‌ನ ಹಲವು ಶಾಸಕರು ರಾಜೀನಾಮೆ ಕೊಡಲಿದ್ದಾರೆ. ಸಮ್ಮಿಶ್ರ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂಬ ಊಹಾಪೋಹಗಳು ಎದ್ದಿವೆ. ಇದಾದ ಬಳಿಕ ಜೆಡಿಎಸ್‌ ಜತೆ ನಿಕಟ ಸಂಪರ್ಕದಲ್ಲಿದ್ದ ಬಿಜೆಪಿಯ ಇಬ್ಬರು ಶಾಸಕರು ದೂರ ಸರಿದಿದ್ದು, ಜೆಡಿಎಸ್‌ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ. ಅಲ್ಲದೆ, ಬಿಜೆಪಿ ನಾಯಕರನ್ನು ಭೇಟಿಯಾಗಿ ನಾವು ಜೆಡಿಎಸ್‌ ಜತೆ ಹೋಗುತ್ತೇವೆ ಎಂಬುದು ಸುಳ್ಳು. ಬಿಜೆಪಿ ಜತೆಗೇ ಇರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಬಿಜೆಪಿ ಶಾಸಕರನ್ನು ಸೆಳೆದುಕೊಳ್ಳುವ ಜೆಡಿಎಸ್‌ ಪ್ರಯತ್ನಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ.

ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ
ಈ ಮಧ್ಯೆ ಪಕ್ಷದ ಶಾಸಕರು ಆಪರೇಷನ್‌ ಕಮಲಕ್ಕೆ ಬಲಿಯಾಗದಂತೆ ನೋಡಿಕೊಳ್ಳಲು ಮಂತ್ರಿ ಸ್ಥಾನ ಸಿಗದೇ ಇರುವ ಎಲ್ಲಾ ಶಾಸಕರಿಗೂ ಪ್ರಮುಖ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ಕಲ್ಪಿಸುವ ಭರವಸೆಯನ್ನು ಜೆಡಿಎಸ್‌ ನಾಯಕರು ನೀಡಿದ್ದಾರೆ.

ಸೆಪ್ಟೆಂಬರ್‌ ಅಂತ್ಯದೊಳಗೆ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಪಕ್ಷಕ್ಕೆ ಲಭ್ಯವಾಗಿರುವ ಸಚಿವ ಸ್ಥಾನಗಳ ಪೈಕಿ ಖಾಲಿ ಇರುವ ಒಂದು ಸ್ಥಾನವನ್ನು ಭರ್ತಿ ಮಾಡಲಾಗುವುದು. ಇದಾದ ಬಳಿಕ 37 ಶಾಸಕರ ಪೈಕಿ 11 ಮಂದಿಗೆ ಅಧಿಕಾರ ಸಿಕ್ಕಂತಾಗುತ್ತದೆ. ಉಳಿದ 26 ಶಾಸಕರಿಗೆ ಪಕ್ಷಕ್ಕೆ ಲಭ್ಯವಾಗುವ ನಿಗಮ-ಮಂಡಳಿಗಳ ಪೈಕಿ ಪ್ರಮುಖ ಅಂದರೆ ಲಾಭದಾಯಕ ಮತ್ತು ಹೆಚ್ಚು ಅನುದಾನ ಲಭ್ಯವಾಗುವ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂಬ ಭರವಸೆಯನ್ನು ಜೆಡಿಎಸ್‌ ವರಿಷ್ಠ ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದೀಗ ಕಾಂಗ್ರೆಸ್‌ ಶಾಸಕರಿಂದ ರಾಜೀನಾಮೆ ಕೊಡಿಸಿ ಸರ್ಕಾರ ಉರುಳಿಸುವ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿ ಸಂಖ್ಯಾಬಲದ ಸಮಸ್ಯೆ ಎದುರಾದರೆ ಜೆಡಿಎಸ್‌ ಶಾಸಕರಿಗೂ ಗಾಳ ಹಾಕುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜೆಡಿಎಸ್‌ ಈ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next