ಬೆಂಗಳೂರು: ಒರಿಸ್ಸಾ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹರಿಪ್ರಸಾದ್ ರಾಜೀನಾಮೆ ನೀಡಿದ್ದಾರೆ. ಹರಿಪ್ರಸಾದ್ ರಾಜೀನಾಮೆ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದು, ಪಂಚ ರಾಜ್ಯಗಳ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಐಸಿಸಿಯಲ್ಲಿ ಬದಲಾವಣೆ ಮಾಡುವ ಆಲೋಚನೆ ನಡೆಸಿದ್ದು, ಕೆಲವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡುತ್ತಾರೆ ಎಂಬ ಕಾರಣಕ್ಕೆ ಹರಿಪ್ರಸಾದ್ ತಾವೇ ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಆದರೆ, ಮತ್ತೂಂದು ಮೂಲದ ಪ್ರಕಾರ ಹರಿಪ್ರಸಾದ್ ರಾಜ್ಯ ರಾಜಕಾರಣಕ್ಕೆ ಬರುವ ಆಲೋಚನೆಯಲ್ಲಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಹೈಕಮಾಂಡ್ ಮುಂದೆ ಈಗಾಗಲೇ ಮನವಿ ಮಾಡಿಕೊಂಡಿದ್ದು, ತಾವು ಅಧ್ಯಕ್ಷರಾಗುವುದಕ್ಕೆ ಅಡ್ಡಿಪಡಿಸದಂತೆ ತಮ್ಮ ಬೆಂಬಲಿಗರ ಮೂಲಕ ಮುಖ್ಯಮಂತ್ರಿಗಳಿಗೂ ಮನವಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಹರಿಪ್ರಸಾದ್ ಅಧ್ಯಕ್ಷರಾಗಿ ಬರುವುದಕ್ಕೆ ವಿರೋಧವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒರಿಸ್ಸಾದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಉಸ್ತುವಾರಿ ವಹಿಸಿದ್ದೆ. ಅಲ್ಲಿ ಪಕ್ಷಕ್ಕೆ ಸೋಲು ಉಂಟಾಗಿರುವುದರಿಂದ ನೈತಿಕ ಹೊಣೆ ಹೊತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು. ಉತ್ತರಪ್ರದೇಶ ಮತ್ತು ಉತ್ತರಾಖಂಡದಲ್ಲಿ ಜನರು ಬಿಜೆಪಿಗೆ ಪ್ರಯೋಗ ಮಾಡಲು ಅಧಿಕಾರ ನೀಡಿದ್ದಾರೆ. ಹಿಂದೆ ಬಿಎಸ್ಪಿ ಹಾಗೂ ಎಸ್ಪಿ ಪಕ್ಷಗಳಿಗೂ ಅಧಿಕಾರ ಕೊಟ್ಟು ಪ್ರಯೋಗ ಮಾಡಿದ್ದಾರೆ. ಅದೇ ರೀತಿ ಈಗ ಬಿಜೆಪಿಗೆ ಅಧಿಕಾರ ಕೊಟ್ಟಿದ್ದಾರೆ ಎಂದು ಹೇಳಿದರು.
ಪಂಜಾಬ್ನಲ್ಲಿ ಕಾಂಗ್ರೆಸ್ ಬಹುಮತ ಪಡೆದಿದೆ. ಗೋವಾ, ಮಣಿಪುರದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಅಲ್ಲಿಯ ರಾಜ್ಯಪಾಲರು ಬಿಜೆಪಿಗೆ ಅಧಿಕಾರ ರಚಿಸಲು ಅವಕಾಶ ಕಲ್ಪಿಸಿರುವುದು ಸಂವಿಧಾನ ವಿರೋಧಿ ನೀತಿ ಎಂದು ಹೇಳಿದರು. ಮನೋಹರ್ ಪಾರೀಕರ್ ರಕ್ಷಣಾ ಸಚಿವರಾಗಿ ವಿಫಲರಾಗಿರುವುದರಿಂದ ಕೇಂದ್ರ ಸರಕಾರ ಅವರನ್ನು ವಾಪಸ್ ಗೋವಾ ರಾಜ್ಯಕ್ಕೆ ಕಳುಹಿಸುತ್ತಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿರುವುದಕ್ಕೂ ಗೋವಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಕ್ಕೂ ಸಂಬಂಧವಿಲ್ಲ. ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಬಿಬಿಎಂಪಿಯಲ್ಲಿ ನಮಗೇ ಬಹುಮತ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.