ಶಿವಮೊಗ್ಗ :ರಾಜ್ಯ ಬಿಜೆಪಿಯಲ್ಲಿರುವ ಬಿಕ್ಕಟ್ಟು ಇನ್ನಷ್ಟು ತೀವ್ರಗೊಳ್ಳುವ ಲಕ್ಷಣಗಳು ಗೋಚರಿಸಿದ್ದು, ಬಿ.ಎಸ್.ಯಡಿಯೂರಪ್ಪ ಅವರು ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರ ಬಹಿರಂಗ ಕ್ಷಮೆ ಯಾಚಿಸಬೇಕೆಂದು ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಶನಿವಾರ ಮಾತನಾಡಿದ ಅವರು ಯಡಿಯೂರಪ್ಪ ಅವರು ಸಂತೋಷ್ ಅವರ ವಿರುದ್ಧ ಹೇಳಿಕೆ ನೀಡುವ ಮೂಲಕ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವುಂಟು ಮಾಡಿದ್ದಾರೆ. ಹೀಗಾಗಿ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.
ಯಡಿಯೂರಪ್ಪ ಕೆಜೆಪಿಯವರ ಕಪಿಮುಷ್ಟಿಯಲ್ಲಿದ್ದಾರೆ. ಅವರು ಹೇಳಿದಂತೆ ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಇದನ್ನು ಬಿಡಬೇಕು ಎಂದರು.
ಈಶ್ವರಪ್ಪ ಅವರು ಸಂಘಟನೆ ಉಳಿಸಿ ಸಭೆ ನಡೆಸಿದ ಬೆನ್ನಲ್ಲೇ ಇದಕ್ಕೆಲ್ಲಾ ಸಂತೋಷ್ ಅವರೇ ಕಾರಣ ಎಂದು ಯಡಿಯೂರಪ್ಪ ಆರೋಪಿಸಿದ್ದರು.
ಸಂತೋಷ್ ಅವರು ರಾಜ್ಯದಲ್ಲಿ ಪಕ್ಷದ ಜವಾಬ್ದಾರಿ ಹೊಂದಿದ್ದ ಸಂದರ್ಭದಲ್ಲಿ ಕಚೇರಿಯಲ್ಲಿ ನೇಮಕಗೊಂಡಿದ್ದ ಕಂಪ್ಯೂಟರ್ ಆಪರೇಟರ್ ಮಲ್ಲಿಕಾರ್ಜುನ ಅವರಿಗೆ ನಾಳೆಯಿಂದ ಕೆಲಸಕ್ಕೆ ಬರುವುದು ಬೇಡ ಎಂದು ಹೇಳುವ ಮೂಲಕ ಸಂತೋಷ್ ಅವರಿಗೆ ಮೊದಲ ತಿರುಗೇಟು ನೀಡಿದ್ದರು.