Advertisement

ಬಿಎಸ್ ವೈ ಸಾಧನೆಯ ಹಾದಿ ಶಿಕಾರಿಪುರ ಟು ವಿಧಾನಸೌಧ; 4ನೇ ಬಾರಿ ಸಿಎಂ ಗದ್ದುಗೆ

08:59 AM Jul 27, 2019 | Nagendra Trasi |

ಬೆಂಗಳೂರು: ಕಾಲೇಜು ದಿನಗಳಲ್ಲಿಯೇ ಆರ್ ಎಸ್ ಎಸ್ ನ ಶಿಕಾರಿಪುರ ಘಟಕದ ಕಾರ್ಯವಾಹರಾಗಿ ನೇಮಕಗೊಳ್ಳುವ ಮೂಲಕ ಬಿಎಸ್ ಯಡಿಯೂರಪ್ಪ ಸಾರ್ವಜನಿಕ ಜೀವನ ಪ್ರವೇಶಿಸಿದ್ದರು. ತದನಂತರ ಜನಸಂಘದ ಶಿಕಾರಿಪುರ ತಾಲೂಕು ಅಧ್ಯಕ್ಷರಾಗಿ ನೇಮಕಗೊಂಡ ಬಿಎಸ್ ವೈ ಹಂತವಾಗಿ ರಾಜಕೀಯದಲ್ಲಿ ಬಡ್ತಿ ಪಡೆಯುತ್ತಾ 2007ರಲ್ಲಿ ಮೊದಲ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

Advertisement

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬಂಧಿತರಾಗಿದ್ದ ಬಿಎಸ್ ವೈ ಬಳ್ಳಾರಿ ಮತ್ತು ಶಿವಮೊಗ್ಗ ಜೈಲಿನಲ್ಲಿದ್ದರು. 1988ರಲ್ಲಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. 1983ರಲ್ಲಿ ಶಿಕಾರಿ ಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು. ನಂತರ ಒಟ್ಟು ಆರು ಬಾರಿ ಶಿಕಾರಿಪುರದ ಶಾಸಕರಾಗಿ, 7, 8, 9 10, 12, 13ನೇ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು.

ಇದೀಗ ರಾಜ್ಯ,ರಾಜಕಾರಣದಲ್ಲಿ ಮತ್ತೆ ರಾಜಕೀತ ಬಿಕ್ಕಟ್ಟು ಉಲ್ಬಣಗೊಂಡ ಪರಿಣಾಮ ಕಾಂಗ್ರೆಸ್, ಜೆಡಿಎಸ್ ಮೈತ್ರಿಕೂಟ ಅಲ್ಪಬಹುಮತಕ್ಕೆ ಕುಸಿಯುವ ಮೂಲಕ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದರು. ಈ ನಿಟ್ಟಿನಲ್ಲಿ 106 ಸದಸ್ಯರನ್ನು ಹೊಂದಿರುವ ಬಿಜೆಪಿ ಸರ್ಕಾರ ರಚಿಸಲು ಮುಂದಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇಂದು ಸಂಜೆ 4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ತಾಲೂಕು ಪಂಚಾಯ್ತಿ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿ ಇದೀಗ ನಾಲ್ಕನೇ ಬಾರಿ ಮುಖ್ಯಮಂತ್ರಿ ಗದ್ದುಗೆ ಏರುತ್ತಿರುವ ಬಿಎಸ್ ಯಡಿಯೂರಪ್ಪನವರ ರಾಜಕೀಯ ಜೀವನದ ಸಂಕ್ಷಿಪ್ತ ನೋಟ ಇಲ್ಲಿದೆ…

Advertisement

2007ರಲ್ಲಿ ಮೊದಲ ಬಾರಿ 7 ದಿನ ಸಿಎಂ ಗದ್ದುಗೆ:

ಯಡಿಯೂರಪ್ಪನವರು 2007ರ ನವೆಂಬರ್ 12ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ದಕ್ಷಿಣ ಭಾರತ ರಾಜ್ಯಗಳ ಬಿಜೆಪಿ ಪಕ್ಷದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ಖಾತೆ ಹಂಚಿಕೆಯಿಂದ ಉಲ್ಬಣಗೊಂಡ ಬಿಕ್ಕಟ್ಟಿನಿಂದಾಗಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಂತ್ಯಗೊಂಡು, ಯಡಿಯೂರಪ್ಪನವರು ನವೆಂಬರ್ 19ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

2008ರಲ್ಲಿ 2ನೇ ಬಾರಿ ಸಿಎಂ-3ವರ್ಷ 66 ದಿನ ಆಡಳಿತ :

2008ರ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪನವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್, ಜೆಡಿಎಸ್ ಬೆಂಬಲದೊಂದಿಗೆ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಬಂಗಾರಪ್ಪನವರನ್ನು 45ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು. ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬಂದಿದ್ದು, ದಕ್ಷಿಣ ಭಾರತದ ಮೊಟ್ಟ ಮೊದಲ ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ರಚನೆಗೊಂಡಿತ್ತು. 2008ರ ಮೇ 30ರಂದು ಯಡಿಯೂರಪ್ಪನವರು 2ನೇ ಬಾರಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದರು.

ತದನಂತರ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ನೀಡಿದ ತನಿಖಾ ವರದಿಯಲ್ಲಿ ಯಡಿಯೂರಪ್ಪನವರ ಹೆಸರಿತ್ತು. ಆ ನಿಟ್ಟಿನಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಹೈಕಮಾಂಡ್ ಸೂಚಿಸಿತ್ತು. 2011ರ ಜುಲೈ 31ರಂದು ಬಿಎಸ್ ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. 2011ರಲ್ಲಿ ಕರ್ನಾಟಕ ಜನತಾ ಪಕ್ಷವನ್ನು ಹುಟ್ಟುಹಾಕಿ, 2013ರ ಮೇನಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು.

3ನೇ ಬಾರಿ 6ದಿನ ಸಿಎಂ ಹುದ್ದೆ:

20018ರ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರಕಿಲ್ಲವಾಗಿತ್ತು. ಬಿಜೆಪಿ 105 ಸ್ಥಾನಗಳನ್ನು ಪಡೆಯುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಕಾಂಗ್ರೆಸ್ 80, ಜೆಡಿಎಸ್ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ರಾಜ್ಯಪಾಲ ವಜೂಭಾಯ್ ವಾಲಾ ಅವರು ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದರು. ಅದರಂತೆ ಬಿಎಸ್ ಯಡಿಯೂರಪ್ಪ 2018ರ ಮೇ 17ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ತದನಂತರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿಯಾಗಿ ಮ್ಯಾಜಿಕ್ ಸಂಖ್ಯೆ(113) 120 ಸ್ಥಾನಗಳ ಮೂಲಕ ಅಧಿಕಾರದ ಗದ್ದುಗೆ ಹಿಡಿದು, ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಬಿಎಸ್ ವೈ 2018ರ ಮೇ 23ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಇದೀಗ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಬಿಎಸ್ ಯಡಿಯೂರಪ್ಪ 2019ರ ಜುಲೈ 26ರಂದು 4ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next