Advertisement

ಸಾಲ ಮನ್ನಾಕ್ಕೆ ಅಡ್ಡಗಾಲು ಹಾಕಿದ್ದ ಬಿಎಸ್‌ವೈ

10:10 AM Nov 16, 2018 | Team Udayavani |

ಬೀದರ: 12 ವರ್ಷಗಳ ಹಿಂದೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರವಿದ್ದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಲು ನಾನು ಮುಂದಾದಾಗ ಅಂದಿನ ಉಪಮುಖ್ಯಮಂತ್ರಿಯಾಗಿದ್ದ ಬಿ.ಎಸ್‌. ಯಡಿಯೂರಪ್ಪ ಅಡ್ಡಗಾಲು ಹಾಕಿದ್ದರು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ದೂರಿದರು.

Advertisement

ನಗರದ ನೆಹರು ಕ್ರೀಡಾಂಗಣದಲ್ಲಿ ಗುರುವಾರ ಸಹಕಾರಿ ಇಲಾಖೆ ಆಯೋಜಿಸಿದ್ದ 65ನೇ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾವು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿರುವ ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಹಣಕುಣಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದೆ. ಆಗ ಕುಟುಂಬದ ಮನೆಯೊಡೆಯ ತೀರಿ ಹೋದ ಕಾರಣಗಳು ಹಾಗೂ ಈ ಭಾಗದ ರೈತರ ಸಮಸ್ಯೆಗಳನ್ನು ಆಲಿಸಿ ರೈತರ ಪರಿಸ್ಥಿತಿ ಬಗ್ಗೆ ತಿಳಿದುಕೊಂಡು ಮರುಕ ಪಟ್ಟಿದೆ. ಆ ಬಳಿಕ ಬೀದರ ನಗರದ ಗಣೇಶ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೈತರ ಸಾಲ ಮನ್ನಾ ಮಾಡಲು ತೀರ್ಮಾನಿಸಿ, ಘೋಷಣೆ ಮಾಡಿದ ಸಂದರ್ಭದಲ್ಲಿ ಆಗ ಆರ್ಥಿಕ ಮಂತ್ರಿಯೂ ಆಗಿದ್ದ ಉಪಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ಸಾಲ ಮನ್ನಾ ಮಾಡಲು ಎಲ್ಲಿದೆ ಹಣ. ರೈತರ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಶಿವಮೊಗ್ಗದಲ್ಲಿ ಹೇಳಿಕೆ ನೀಡಿದ್ದರು ಎಂದರು. 

ಸಾಲಮನ್ನಾ ಬಗ್ಗೆ ಮಾತನಾಡುವವರೆ ಅಂದು ಸಾಲಮನ್ನಕ್ಕೆ ಅಡ್ಡಗಾಲು ಹಾಕಿದ್ದರು. ಇದರಿಂದ ರಾಜ್ಯದ ರೈತರು ಯಾರು
ನಿಜವಾದ ರೈತಪರ ಕಾಳಜಿವುಳ್ಳ ನಾಯಕರು ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.

ಉತ್ತರ ಪ್ರದೇಶದಲ್ಲಿ ಅಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ ರೈತರ 32 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ. ಎರಡು ವರ್ಷಗಳಾದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ. ಅದೇ ಪರಿಸ್ಥಿತಿ ಮಹಾರಾಷ್ಟ್ರ ಸರ್ಕಾರದಲ್ಲೂ ಆಗಿದೆ. ಈ ಬಗ್ಗೆ ಪ್ರಜ್ಞಾವಂತ ರೈತರು ಅವಲೋಕನ ಮಾಡಬೇಕಿದೆ. ಅಲ್ಲದೆ, ಬಿಜೆಪಿಯವರು ಕೂಡ ಅವರ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ರೈತರ ಸಾಲಮನ್ನ ಬಗ್ಗೆ ಏನಾಗಿದೆ ಎಂಬುವುದನ್ನು ತಿಳಿಸಿದುಕೊಳ್ಳಬೇಕು.

ಸದ್ಯ ಕಾಂಗ್ರೆಸ್‌ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಸೆಪ್ಟೆಂಬರ್‌ ತಿಂಗಳಲ್ಲಿ ರೈತರ 45 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದೆ. ಈ ವಿಷಯದಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ರೈತರು ಯಾವುದೇ ಕಾರಣಕ್ಕೂ ಅಧೀರರಾಗುವುದು ಬೇಡ. ಸರ್ಕಾರ ರೈತರ ಬೆನ್ನಿಗಿದೆ. ಬ್ಯಾಂಕ್‌ ನೋಟಿಸ್‌ಗಳಿಗೆ ಭಯ ಬೀಳುವುದು ಬೇಡ. ಸಾಲ ಮನ್ನಾ ವಿಳಂಬಕ್ಕೆ ಅಪಾರ್ಥ ಕಲ್ಪಿಸುವ ಕೆಲಸಗಳು ಎಗ್ಗಿಲ್ಲದೇ ನಡೆಯುತ್ತಿವೆ. ಸಾಲ ಮನ್ನಾದ ಲಾಭ ನಿಜವಾದ ರೈತನಿಗೆ ದೊರಕಬೇಕು ಎಂಬ ನಿಟ್ಟಿನಲ್ಲಿ ಕೆಲ ನಿಯಮಗಳನ್ನು ರೂಪಿಸಲಾಗಿದೆ. ಸಾಲ ಮನ್ನಾ ಮಾಡುವುದು ಸುಲಭದ ಕೆಲಸ ಅಲ್ಲ ಎಂದು ಹೇಳಿದರು. 

Advertisement

ಕಾರ್ಯಕ್ರಮದಲ್ಲಿ ರಾಜ್ಯದ 10 ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಾಡಿನ ಹಲವೆಡೆಯ ಸಹಕಾರಿಗಳು ಸೇರಿದಂತೆ ಜಿಲ್ಲೆಯ ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು. ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್‌, ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್‌ ಪಾಟೀಲ, ಪಶು ಸಂಗೋಪನಾ ಸಚಿವ ವೆಂಕಟರಾವ್‌ ನಾಡಗೌಡ, ಸಂಸದ ಭಗವಂತ್‌ ಖೂಬಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಶಾಸಕರಾದ ರಹೀಂ ಖಾನ್‌, ಬಿ.ನಾರಾಯಣರಾವ್‌, ಅರವಿಂದ ಅರಳಿ, ಚಂದ್ರಶೇಖರ್‌ ಪಾಟೀಲ, ಸಹಕಾರಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ|ಎನ್‌.ನಾಗಾಂಬಿಕಾದೇವಿ, ಕರ್ನಾಟಕ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌. ರಾಜಣ್ಣ, ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಟಗಳ ಮಹಾಮಂಡಳ ಅಧ್ಯಕ್ಷ ಪಂಡಿತರಾವ್‌ ಚಿದ್ರಿ, ರಾಜ್ಯ ಸಹಕಾರ ಮಹಿಳಾ ಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ, ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಭಾರತಬಾಯಿ ಶೇರಕಾರ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ್‌ ನಾಗಮಾರಪಳ್ಳಿ, ಉಪಾಧ್ಯಕ್ಷ ಭೀಮರಾವ್‌ ಪಾಟೀಲ, ನಗರಸಭೆ ಉಪಾಧ್ಯಕ್ಷೆ ಶಾಲೀನಿ ಚಿಂತಾಮಣಿ ಸೇರಿದಂತೆ ಸಹಕಾರಿ ಇಲಾಖೆ ಅಧಿಕಾರಿಗಳು
ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next