Advertisement

ಉಪ ಚುನಾವಣೆಗೆ ಅಧಿಸೂಚನೆ ಪ್ರಕಟ: ನೀತಿ ಸಂಹಿತೆ ಜಾರಿ

09:16 PM Nov 11, 2019 | Team Udayavani |

ಚಿಕ್ಕಬಳ್ಳಾಪುರ: ಕೇಂದ್ರ ಚುನಾವಣಾ ಆಯೋಗ ಬರುವ ಡಿ.5 ರಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ನ.11 ರಿಂದ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಆರ್‌.ಲತಾ ತಿಳಿಸಿದರು.

Advertisement

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ಬೆಳಗ್ಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉಪ ಚುನಾವಣೆಗೆ ಜಿಲ್ಲಾಡಳಿತ ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

ಸಭೆ ನಡೆಸಲಾಗಿದೆ: ಕೇಂದ್ರ ಚುನಾವಣಾ ಆಯೋಗ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದೆ. ಜಿಲ್ಲೆಯಲ್ಲಿ ಉಪಚುನಾವಣೆ ಘೋಷಣೆಯಾದ ತಕ್ಷಣದಿಂದ ಚುನಾವಣಾ ನೀತಿ ಸಂಹಿತೆ ಜಾರಿ ಮಾಡಲಾಗಿದ್ದು, ಯಾರೇ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂ ಸಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕ್ಷೇತ್ರದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಕರೆದು ಮಾದರಿ ನೀತಿ ಸಂಹಿತೆ ಕುರಿತು ಹಾಗೂ ಅಭ್ಯರ್ಥಿಗಳ ಖರ್ಚು, ವೆಚ್ಚಗಳ ಸಲ್ಲಿಕೆ ಹಾಗೂ ಪಾರದರ್ಶಕ ಚುನಾವಣೆಗೆ ಸಹಕರಿಸುವಂತೆ ತಿಳಿಸಲಾಗಿದೆ ಎಂದರು.

ಡಿ.9ರಂದು ಮತ ಎಣಿಕೆ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸೋಮವಾರದಿಂದಲೇ ಅಧಿಸೂಚನೆ ಹೊರಡಿಸಿದ್ದು, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನ.18 ರ ಸೋಮವಾರ ಕೊನೇ ದಿನವಾಗಿದೆ. ನ.19 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ರಂದು ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕವಾಗಿರುತ್ತದೆ.

ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3ಕ್ಕೆ ನಾಮಪತ್ರ ಸ್ವೀಕರಿಸಲಾಗುತ್ತದೆ. ಚುನಾವಣಾಧಿಕಾರಿಗಳಾಗಿ ಚಿಕ್ಕಬಳ್ಳಾಪುರ ಉಪವಿಭಾಗಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳಾಗಿ ಚಿಕ್ಕಬಳ್ಳಾಪುರ ತಾಲೂಕು ತಹಶೀಲ್ದಾರ್‌ ಮತ್ತು ಗೌರಿಬಿದನೂರು ತಾಲೂಕಿನ ತಹಶೀಲ್ದಾರ್‌ ಅವರನ್ನು ನೇಮಕ ಮಾಡಲಾಗಿದೆ. ಡಿ.5 ರಂದು ಮತದಾನ ನಡೆಯಲಿದ್ದು, ಡಿ.9 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

Advertisement

21 ಸೆಕ್ಟರ್‌ ಅಧಿಕಾರಿಗಳ ನೇಮಕ: ಉಪ ಚುನಾವಣೆಯನ್ನು ಅತ್ಯಂತ ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾದ್ಯಂತ 21 ಮಂದಿ ಸೆಕ್ಟರ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಚೆಕ್‌ ಪೋಸ್ಟ್‌ಗಳಲ್ಲಿ 10 ಮಂದಿಯವುಳ್ಳ 3 ತಂಡ ರಚಿಸಲಾಗಿದೆ. 3 ವಿಡಿಯೋ ಕಣ್ಗಾವಲು ತಂಡ, 2 ವಿಡಿಯೋ ಪರಿವೀಕ್ಷಣೆ ತಂಡ, ಸಿವಿಜಿಲ್‌ಗೆ 3 ತಂಡ ರಚಿಸಲಾಗಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಹಾಯವಾಣಿ 1950 ಸಂಖ್ಯೆಯನ್ನು 24 ಗಂಟೆ ಚಾಲ್ತಿಯಲ್ಲಿಡಲಾಗುತ್ತದೆ.

ಉಪ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಕಂಡು ಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಕೇಂದ್ರಕ್ಕೆ ದೂರು ಸಲ್ಲಿಸಬಹುದೆಂದರು. ಜಿಪಂ ಸಿಇಒ ಬಿ.ಫೌಜಿಯಾ ತರನ್ನುಮ್‌ ಮಾತನಾಡಿ, ಜಿಲ್ಲೆಯಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಅನುಷ್ಠಾನ ಉತ್ತಮವಾಗಿ ನಡೆದಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿದ್ದ ಸಾಕಷ್ಟು ತಪ್ಪು ತಿದ್ದುಪಡಿ ಮಾಡಲಾಗಿದೆ.

ಈ ನಿಟ್ಟಿನಲ್ಲಿ ಉಪಚುನಾವಣೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಉಪ ಚುನಾವಣೆ ಸಂಬಂಧ ಜಿಪಂ ಸ್ವೀಪ್‌ ಸಮಿತಿ ವತಿಯಿಂದ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸಲು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಕ್ಷೇತ್ರದ ಮತದಾರರು ಕಡ್ಡಾಯಗಿ ಮತದಾನ ಮಾಡಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌, ಉಪವಿಭಾಗಾಧಿಕಾರಿ ಎ.ಎನ್‌.ರಘುನಂದನ್‌, ಚುನಾವಣಾ ತಹಶೀಲ್ದಾರ್‌ ಲಕ್ಷ್ಮೀನಾರಾಯಣರೆಡ್ಡಿ ಮತ್ತಿತರರಿದ್ದರು.

ಉಪ ಕದನಕ್ಕೆ 2,00622 ಮತದಾರರು: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 254 ಮತಗಟ್ಟೆಗಳಿದ್ದು, 9,9,825 ಪುರುಷ ಮತದಾರರು, 1,00776 ಮಹಿಳೆಯರು ಹಾಗೂ 21 ತೃತೀಯ ಲಿಂಗಿ ಮತದಾರರು ಸೇರಿ ಒಟ್ಟು 2,00622 ಮತದಾರರಿದ್ದಾರೆ. ಸಾರ್ವಜನಿಕರು ಯಾವುದೇ ಗೊಂದಲಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 08156-1950 (ಟೋಲ್‌ ಫ್ರೀ)ಯನ್ನು ಸಂಪರ್ಕಿಸಬಹುದು. ಪ್ರತಿ ಚುನಾವಣೆಯಂತೆ ಈ ಚುನಾವಣೆಗೆ ವಿವಿ ಪ್ಯಾಟ್‌, ಇವಿಎಂ ಮತಯಂತ್ರ ಉಪಯೋಗಿಸಲಾಗುತ್ತದೆ ಜಿಲ್ಲಾಧಿಕಾರಿ ಆರ್‌.ಲತಾ ಮಾಹಿತಿ ನೀಡಿದರು.

ಮೊದಲ ದಿನ ನಾಮಪತ್ರ ಸಲ್ಲಿಕೆ ಇಲ್ಲ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಘೋಷಣೆಯಾಗಿರುವ ಉಪ ಚುನಾವಣೆಗೆ ಆಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರಗಳ ಸಲ್ಲಿಕೆಯ ಕಾರ್ಯ ಆರಂಭಗೊಂಡರೂ ಮೊದಲ ದಿನ ಸೋಮವಾರ ಯಾರೂ ನಾಮಪತ್ರ ಸಲ್ಲಿಸಿಲ್ಲ ಎಂದು ಚುನಾವಣಾ ಅಧಿಕಾರಿ ಎ.ಎನ್‌.ರಘುನಂದ್‌ ತಿಳಿಸಿದ್ದು ನ.18 ನಾಮಪತ್ರ ಸಲ್ಲಿಕೆಗೆ ಕೊನೇ ದಿನ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next